ಕೊಟ್ಟರೆ ಸಿಎಂ ಕೊಡಿ ಇಲ್ಲದಿದ್ದರೆ ಯಾವುದೇ ಹುದ್ದೆ ಬೇಡ: ಮಲ್ಲಿಕಾರ್ಜುನ್ ಖರ್ಗೆ ಮುಂದೆ ಡಿ.ಕೆ ಶಿವಕುಮಾರ್ ವಾದವೇನು?
ಬೆಂಗಳೂರು, ಮೇ 16: ಕರ್ನಾಟಕದಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಆಯ್ಕೆ ವಿಚಾರವೇ ಹೈಕಮಾಂಡ್ ಗೆ ದೊಡ್ಡ ಕಗ್ಗಂಟಾಗಿದೆ. ಕಳೆದ ಮೂರು ದಿನಗಳಿಂದ ಸಿಎಂ ಆಯ್ಕೆಯೇ ಹೈಕಮಾಂಡ್ ನಾಯಕರಿಗೆ ತಲೆನೋವಾಗಿದೆ.
ಈಗಾಗಲೇ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಜೊತೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಜೊತೆಗೆ ಪ್ರತ್ಯೇಕವಾಗಿ ಸುಮಾರು 50 ನಿಮಿಷಗಳ ಕಾಲ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿದ್ದಾರೆ.

ಈಗಾಗಲೇ ವೀಕ್ಷಕರು ಹಾಗೂ ಶಾಸಕರ ಅಭಿಪ್ರಾಯದ ಮೇರೆಗೆ ಸಿದ್ದರಾಮಯ್ಯ ಅವರನ್ನ ಸಿಎಂ ಮಾಡುವ ಲೆಕ್ಕಾಚಾರವನ್ನ ಹೈಕಮಾಂಡ್ ಹಾಕಿಕೊಂಡಿದ್ದಾರೆ. ಇತ್ತ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ.
ಇತ್ತ ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಹಲವು ಸುತ್ತಿನ ಮಾತುಕತೆಯನ್ನ ಕಾಂಗ್ರೆಸ್ ಹೈಕಮಾಂಡ್ ನಡೆಸಿದರೂ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಈಗಾಗಲೇ ಹೈಕಮಾಂಡ್ ನನಗೆ ಸಿಎಂ ಸ್ಥಾನ ಕೊಡುತ್ತೇ ಎಂಬ ನಿರೀಕ್ಷೆಯಲ್ಲಿ ಡಿ ಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಕೈ ತಪ್ಪುವ ಆತಂಕ ಶುರುವಾಗಿದೆ.
ಈಗಾಗಲೇ ಮಲ್ಲಿಕಾರ್ಜುನ್ ಖರ್ಗೆ ಜೊತೆಗೆ ಡಿ ಕೆ ಶಿವಕುಮಾರ್ ಚರ್ಚೆ ನಡೆಸಿದ್ದು,ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದ್ದಾರೆ. ಕೊಡುವುದಾದರೆ ಮುಖ್ಯಮಂತ್ರಿ ಸ್ಥಾನ ಕೊಡಿ. ಇಲ್ಲದಿದ್ದರೆ ನಾನು ಶಾಸಕನಾಗಿಯೇ ಇರುತ್ತೇನೆ. ಯಾವುದೇ ಸ್ಥಾನ ಬೇಡ. ಪಕ್ಷಕ್ಕಾಗಿ ನೀವೂ ಕೂಡ ಕೆಲಸ ಮಾಡಿದ್ದೀರಿ. ನೀವೇ ಮುಖ್ಯಮಂತ್ರಿ ಜವಾಬ್ದಾರಿ ವಹಿಸಿಕೊಳ್ಳಿ ಎಂದು ಡಿಕೆ ಶಿವಕುಮಾರ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಹೇಳಿದ್ದಾರೆ ಎನ್ನಲಾಗಿದೆ.

ನಾನು ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದೇನೆ. ಹೀಗಾಗಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಪಕ್ಷ ಸೇರಿಕೊಂಡ ಬಳಿಕ ಸಿದ್ದರಾಮಯ್ಯ ಅಧಿಕಾರ ಅನುಭವಿಸುತ್ತಿದ್ದಾರೆ. 5 ವರ್ಷದ ಅಧಿಕಾರ ಅನುಭವಿಸಿದರು ನಾನು ಯಾವುದೇ ಆಕ್ಷೇಪ ಎತ್ತಿಲ್ಲ. ಜೆಡಿಎಸ್ ಪಕ್ಷದಿಂದ ಬಂದ ಸಿದ್ದರಾಮಯ್ಯ ಅವರು ವಿಪಕ್ಷ ನಾಯಕರಾಗಿ, ಮುಖ್ಯಮಂತ್ರಿಯಾಗಿದ್ದಾರೆ. ಈ ಬಾರೀ ನನಗೆ ಮುಖ್ಯಮಂತ್ರಿ ಸ್ಥಾನ ನೀಡಿ ಎಂದು ಡಿ ಕೆ ಶಿವಕುಮಾರ್ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.
ಇತ್ತ ಮಲ್ಲಿಕಾರ್ಜುನ್ ಖರ್ಗೆ ಅವರ ಬಳಿ ಎರಡು ಆಯ್ಕೆಗಳನ್ನ ಇಟ್ಟಿರುವ ಡಿ ಕೆ ಶಿವಕುಮಾರ್ ಈ ಬಾರೀ ಮುಖ್ಯಮಂತ್ರಿ ಸ್ಥಾನವನ್ನ ಕೊಡುವುದಾದರೆ ಕೊಡಿ. ಇಲ್ಲದಿದ್ದರೆ ಯಾವುದೇ ಸಚಿವ ಸ್ಥಾನ ಬೇಡ. ನಾನು ಶಾಸಕನಾಗಿ ಇರುತ್ತೇನೆ. ಪಕ್ಷದ ಅಧ್ಯಕ್ಷನಾಗಿ ಪಕ್ಷ ಸಂಘಟನೆ ನಡೆಸುತ್ತೇನೆ ಎಂದು ಡಿ ಕೆ ಶಿವಕುಮಾರ ಅಸಮಾಧಾನದ ಮಾತುಗಳನ್ನ ಹೇಳಿದ್ದಾರೆ ಎಂದು ಹೇಳಲಾಗಿದೆ.












Click it and Unblock the Notifications