DK Shivakumar: ಸೈಕಲ್ನಲ್ಲಿ ಮಕಾಡೆ ಬಿದ್ದ ಡಿಕೆ ಶಿವಕುಮಾರ್
ಬೆಂಗಳೂರು, ಜೂನ್ 17: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿಧಾನಸೌಧದ ಬಳಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು. ಜಿಮ್ ಸೂಟ್ ತೊಟ್ಟು, ಕೂಲಿಂಗ್ ಗ್ಲಾಸ್ ಹಾಕಿ ಸ್ಟೈಲಿಶ್ ಆಗಿ ಸೈಕಲ್ ನಲ್ಲಿ ಏರಿ ಸವಾರಿ ಮಾಡಿದ್ದ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿ ಸೈಕಲ್ನಲ್ಲೇ ರೌಂಡ್ಸ್ ಹಾಕಿದ ಡಿ ಕೆ ಶಿವಕುಮಾರ್ ಅವರು ಬ್ಯಾಲೆನ್ಸ್ ತಪ್ಪಿ ಕೆಂಗಲ್ ಗೇಟ್ ಬಳಿ ಬರುವಾಗ ವಿಧಾನಸೌಧದ ಮೆಟ್ಟಲುಗಳ ಮೇಲೆ ಬಿದ್ದಿದ್ದಾರೆ.
ಈ ಹಿಂದೆ ಡಿಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ ಡಿಕೆ ಶಿವಕುಮಾರ್ ಇದೇ ಮೆಟ್ಟಲು ಗಳಿಗೆ ನಮಸ್ಕಾರ ಮಾಡಿ ವಿಧಾನಸೌಧದ ಒಳಗೆ ಪ್ರವೇಶಿಸಿದ್ದರು. ಆದರೆ, ಇದೀಗ ವಿಧಾನಸೌಧದ ಸುತ್ತ ಸೈಕಲ್ ಹೊಡೆಯುತ್ತಾ ಬರ್ತಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬ್ಯಾಲೆನ್ಸ್ ಮಿಸ್ ಆಗಿದೆ. ಈ ವೇಳೆ ವಿಧಾನಸೌಧದ ಮೆಟ್ಟಲುಗಳ ಮೇಲೆಯೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿದ್ದಿದ್ದಾರೆ. ಬಿದ್ದ ತಕ್ಷಣ ಪಕ್ಕದಲ್ಲೇ ಇದ್ದ ಬೆಂಬಲಿಗರು ಡಿ ಕೆ ಶಿವಕುಮಾರ್ ಅವರ ಸಹಾಯಕ್ಕೆ ಬಂದು ಮೇಲಕ್ಕೆ ಎಬ್ಬಿಸಿದ್ದಾರೆ. ಮೆಟ್ಟಿಲುಗಳ ಮೇಲೆ ಬಿದ್ದ ಡಿ ಕೆ ಶಿವಕುಮಾರ್ ಅವರ ಚಿತ್ರೀಕರಣ ಮಾಡುತ್ತಿದ್ದ ಮಾಧ್ಯಮಗಳ ಮೇಲೂ ಡಿ ಕೆ ಶಿವಕುಮಾರ್ ಅವರು ಗರಂ ಆಗಿದ್ದು, ಸೈಕಲ್ ನಿಲ್ಲಿಸುವ ವೇಳೆಯಲ್ಲಿ ಬ್ಯಾಲೆನ್ಸ್ ತಪ್ಪಿ ಬಿದ್ದ ಡಿಸಿಎಂ ಡಿ ಕೆ ಶಿವಕುಮಾರ್ ಅವರ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.

ಹಸಿರು ಮತ್ತು ಸ್ವಚ್ಚತೆ ನಮ್ಮ ಸರ್ಕಾರದ ಧ್ಯೇಯ: ಡಿ ಕೆ ಶಿವಕುಮಾರ್
ರಾಜ್ಯದ ಪ್ರತಿಯೊಂದು ಶಾಲೆಗಳಲ್ಲಿಯೂ ಪರಿಸರ, ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂದು ಆದೇಶ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕನಿಷ್ಠ 25 ವಿದ್ಯಾರ್ಥಿಗಳನ್ನು ಒಳಗೊಂಡಂತೆ ಈ ಜಾಗೃತಿ ಕ್ಲಬ್ ಗಳನ್ನು ರಚನೆ ಮಾಡಬೇಕು. ಪ್ರಕೃತಿ ಉಳಿಸುವ ದೊಡ್ಡ ಹೋರಾಟದ ಹಾಗೂ ಜಾಗೃತಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಬೇಕು ಎಂದು ಈ ಆದೇಶ ಮಾಡಲಾಗಿದೆ. ಒಂದೊಂದು ಶಾಲೆ ಮರ ಬೆಳೆಸಲು ಆಯಾಯ ಪ್ರದೇಶಗಳನ್ನು ದತ್ತು ಪಡೆಯಬೇಕು ಎಂದು ತಿಳಿಸಿದರು.
ಹಸಿರು ಮತ್ತು ಸ್ವಚ್ಚತೆ ಇದೇ ನಮ್ಮ ಸರ್ಕಾರದ ಧ್ಯೇಯ. ಇದರ ಬಗ್ಗೆ ಮುಂದಿನ ಪೀಳಿಗೆಗೆ ಅರಿವು ಮೂಡಿಸುವುದು ಸರ್ಕಾರದ ಕರ್ತವ್ಯ. ಕರ್ನಾಟಕದ ದೊಡ್ಡ ಆಸ್ತಿಯೇ ನಮ್ಮ ಪ್ರಕೃತಿ. ಪ್ಲಾಸ್ಟಿಕ್ ಅನ್ನು ನಿರ್ಮೂಲನೆ ಮಾಡುವುದು ನಮ್ಮ ಉದ್ದೇಶ, ಜವಾಬ್ದಾರಿಯಾಗಬೇಕು. ಪ್ರತಿಯೊಬ್ಬ ವಿದ್ಯಾರ್ಥಿ ಒಂದೊಂದು ಸಸಿಯನ್ನು ದತ್ತು ಪಡೆಯಬೇಕು ಎಂದು ತಿಳಿಸಲಾಗಿದೆ. ಈಗಾಗಲೇ 50 ಸಾವಿರಕ್ಕೂ ಹೆಚ್ಚು ಮಕ್ಕಳು ಈ ಪ್ರಕ್ರಿಯೆಯಲ್ಲಿ ಇದ್ದಾರೆ. ಎರಡು ದಿನದ ಹಿಂದೆ ದೆಹಲಿ, ಅಹಮದಾಬಾದ್ ನಲ್ಲಿ ಇದ್ದೆ ಅಲ್ಲಿನ ಉಷ್ಣಾಂಶ ಹತ್ತಿರತ್ತಿರ 49 ಡಿಗ್ರಿಯಿತ್ತು. ಬೆಂಗಳೂರಲ್ಲಿ 22- 23 ಇದೆ. ಈ ವಾತಾವರಣ ನಮ್ಮ ಕರ್ನಾಟಕದ, ಬೆಂಗಳೂರಿನ ಆಸ್ತಿ ಎಂದು ತಿಳಿಸಿದರು.
ಮನುಷ್ಯ ಹಾಗೂ ಅವನ ಜೀವನ ಪದ್ಧತಿ ಪ್ರಕೃತಿಯ ಜೊತೆ ಬೆಸೆದುಕೊಂಡಿದೆ. ನಾವೆಲ್ಲರೂ ಪರಿಸರದ ಒಂದು ಭಾಗವಷ್ಟೇ. ಶುದ್ದ ಗಾಳಿ, ನೀರು, ಪರಿಸರ ನಿರ್ಮಾಣ ನಮ್ಮೆಲ್ಲರ ಅತಿದೊಡ್ಡ ಜವಾಬ್ದಾರಿ. ಪರಿಸರ ಉಳಿಸುವ ಅರಿವು ಯುವ ಜನಾಂಗಕ್ಕೆ ಬರಬೇಕು. ಪರಿಸರ ನಮ್ಮ ಮನೆ ಅದನ್ನು ನಾಶ ಮಾಡದೇ ಇರುವಂತೆ ನಾವೆಲ್ಲರೂ ಹೆಜ್ಜೆ ಹಾಕಬೇಕಿದೆ ಎಂದರು.
ಸುಮಾರು 5 ಸಾವಿರಕ್ಕೂ ಹೆಚ್ಚು ಸ್ಕೌಟ್ ಮತ್ತು ಗೈಡ್ಸ್ ಮಕ್ಕಳು ವಿಧಾನಸೌಧದ ಸುತ್ತಲೂ ನಡಿಗೆ ಮಾಡಿ ಜನರಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ. ನಾನು ಸಹ ಶಾಲಾ ದಿನಗಳಲ್ಲಿ ಇದರ ಭಾಗವಾಗಿದ್ದವನು. ಈ ಸಂಘಟನೆ ಬೆಳೆಸುವುದು ನಮ್ಮ ಬದ್ಧತೆ. ಪರಿಸರ ದಿನಾಚರಣೆ ಮಾಡುವುದು ನಮಗಾಗಿ ಅಲ್ಲ ಮುಂದಿನ ಪೀಳಿಗೆಗಾಗಿ ಎಂದು ಹೇಳಿದರು.












Click it and Unblock the Notifications