ಸಾತನೂರಿನಲ್ಲಿ ಮುಸ್ಲಿಂ ಯುವಕನ ಬಳಿ 2 ಲಕ್ಷ ಹಣದ ಬೇಡಿಕೆ ಇಟ್ಟು, ಹತ್ಯೆ : ಡಿ ಕೆ ಶಿವಕುಮಾರ್ ಆರೋಪ
ಬೆಂಗಳೂರು,ಏಪ್ರಿಲ್3: ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದ ವಾಹನದ ಮೇಲೆ ಹಿಂದೂ ಕಾರ್ಯಕರ್ತರ ದಾಳಿ ನಡೆಸಿದಾಗ ಸಿಕ್ಕಿಬಿದ್ದಿದ್ದ ವ್ಯಕ್ತಿಯ ನಿಗೂಢ ಸಾವಿಗೆ ಈ ಸರ್ಕಾರವೇ ನೇರ ಹೊಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಈ ಕೊಲೆಗೆ ಕಾರಣರಾದ ವ್ಯಕ್ತಿ ಬಿಜೆಪಿ ನಾಯಕರಿಗೆ ಆಪ್ತನಾಗಿದ್ದು, ಈ ನೈತಿಕ ಪೊಲೀಸ್ ಗಿರಿಗೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರನ್ನು ಹೊಣೆ ಮಾಡುತ್ತೇನೆ. ಕಾರಣ ಅವರು ಈ ಹಿಂದೆ ನೈತಿಕ ಪೊಲೀಸ್ ಗಿರಿಗೆ ಅವರು ಬೆಂಬಲ ನೀಡಿದ್ದರು. ರೈತ ಜಾನುವಾರುಗಳನ್ನು ಸಂತೆಯಲ್ಲಿ ಖರೀದಿಸಿದ ರಸೀದಿ ಇದ್ದರೂ ಅವನಿಗೆ 2 ಲಕ್ಷ ಹಣದ ಬೇಡಿಕೆ ಇಟ್ಟು, ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕೊಲೆಗೆ ಸರ್ಕಾರವೇ ಕಾರಣ. ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರು ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಅಲ್ಪಸಂಖ್ಯಾತರು ಬದುಕಲು ಅವಕಾಶ ಮಾಡಿಕೊಡಬೇಕು. ಚುನಾವಣೆ ಸಮಯದಲ್ಲಿ ಇಂತಹ ಗೊಂದಲ ಮಾಡುವುದು ಸರಿಯಲ್ಲ. ಸರ್ಕಾರ ಕೂಡಲೇ ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸುತ್ತೇನೆ. ಈ ಹತ್ಯೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಬೇಕು. ಅವರನ್ನು ಬಂಧಿಸದೇ ಅವರನ್ನು ರಕ್ಷಣೆ ಮಾಡಿದರೆ, ಇದಕ್ಕೆ ಅಧಿಕಾರಿಗಳು ಜವಾಬ್ದಾರಿಯಾಗಲಿದ್ದಾರೆ. ಹತ್ಯೆ ಮಾಡಿರುವವರು ನಿಮ್ಮ ಕಾರ್ಯಕರ್ತನೋ, ಆತ್ಮೀಯನೋ ಅವನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಳೆದ ಒಂದು ತಿಂಗಳಿಂದ ಅನೇಕ ಹಿರಿಯ ನಾಯಕರು ಪಕ್ಷ ಸೇರುತ್ತಿರುವ ಕುರಿತು ಮಾತನಾಡಿ, ನಾವು ಯಾರಿಗೂ ಯಾವುದೇ ರೀತಿಯ ಭರವಸೆ ನೀಡಿಲ್ಲ. ಆದರೂ ನಮ್ಮ ಪಕ್ಷ ಸೇರಲು ಅಪಾರ ಬೇಡಿಕೆ ಇದೆ. ನಾವು ಎಲ್ಲರ ಹೆಸರುಗಳನ್ನು ಪರಿಶೀಲಿಸಿ, ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವುದಿದ್ದರೆ ಸೇರಿಸಿಕೊಳ್ಳುತ್ತೇವೆ. ಗೋಪಾಲಕೃಷ್ಣರಂತಹ ನಾಯಕರು ನಾವು ಕಾರ್ಯಕರ್ತರಾಗಿ ದುಡಿಯಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ. ಅವರು ಟಿಕೆಟ್ ಗೆ ಅರ್ಜಿ ಹಾಕಿದರೆ, ನಾವು ಅವರ ಅರ್ಜಿ ಪರಿಶೀಲಿಸುತ್ತೇವೆ ಎಂದರು.

ನೀವು ಅರ್ಜಿ ಆಹ್ವಾನಿಸಿ 2 ಲಕ್ಷ ಹಣ ಪಡೆದು ಈಗ ಹೊಸಬರು ಬಂದಾಗ ಅವರಿಗೆ ಟಿಕೆಟ್ ನೀಡಿದರೆ, ಮೋಸ ಮಾಡಿದಂತೆ ಆಗುವುದಿಲ್ಲವೇ ಎಂಬ ಬಗ್ಗೆ ಮಾತನಾಡಿ, ಇದರಲ್ಲಿ ಮೋಸವೇನಿದೆ? ಕಾಂಗ್ರೆಸ್ ಪಕ್ಷಕ್ಕೆ ದೇವಾಲಯದಂತಿರುವ ಪಕ್ಷದ ಕಟ್ಟಡ ಕಟ್ಟಲು ಆ ಹಣ ವಿನಿಯೋಗಿಸಲಾಗುವುದು. ಅರ್ಜಿಗೆ ಶುಲ್ಕವಾಗಿ 5 ಸಾವಿರ ತೆಗೆದುಕೊಂಡಿದ್ದು, ಉಳಿದ 2 ಲಕ್ಷ ಪಕ್ಷದ ಕಟ್ಟಡಕ್ಕೆ ದೇಣಿಗೆಯಾಗಿ ಸ್ವೀಕರಿಸಲಾಗಿದೆ. ಪಕ್ಷದಲ್ಲಿ ಪ್ರಬಲ ಸ್ಪರ್ಧೆ ಇದ್ದಾಗಲೇ ಬಿಜೆಪಿಗೆ ಬಿಸಿ ಗೊತ್ತಾಗುತ್ತದೆ. ಆರೋಗ್ಯಕರ ಸ್ಪರ್ಧೆ ಇರಬೇಕು. ಪಕ್ಷದೊಳಗೆ ಹೋರಾಟ ಮಾಡುತ್ತಾರೆ. ನಂತರ ಬಿಜೆಪಿ ಹಾಗೂ ದಳದ ವಿರುದ್ಧ ಹೋರಾಟ ಮಾಡುತ್ತಾರೆ ಎಂದು ತಿಳಿಸಿದರು.
ರಾಹುಲ್ ಅವರ ಕಾರ್ಯಕ್ರಮಕ್ಕೆ 9 ಅಥವಾ 10 ರ ದಿನಾಂಕ ನೀಡಿದ್ದು, ಎಐಸಿಸಿ ಅವರ ಪ್ರವಾಸಪಟ್ಟಿ ಬಿಡುಗಡೆ ಮಾಡಲಿದೆ. ಅವರು ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ. ಹೀಗಾಗಿ ಎಐಸಿಸಿ ಚರ್ಚೆ ಮಾಡಿ ದಿನಾಂಕ ನಿಗದಿ ಮಾಡಲಿದೆ. ಆದರೆ ಇಲ್ಲಿ ನಮ್ಮ ತಯಾರಿ ಸಾಗುತ್ತಿದೆ. ನಿನ್ನೆ ಸಿದ್ದರಾಮಯ್ಯ ಹಾಗೂ ಸುರ್ಜೆವಾಲ ಅವರು ಕೋಲಾರಕ್ಕೆ ಭೇಟಿ ನೀಡಿದ್ದರು. ಈಗಲೂ ಸುರ್ಜೆವಾರ ಅವರು ತುಮಕೂರಿನಲ್ಲಿದ್ದು, ಕಾರ್ಯಕ್ರಮದ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಇದೊಂದು ರಾಷ್ಟ್ರಮಟ್ಟದ ಕಾರ್ಯಕ್ರಮವಾಗಲಿದ್ದು, ಬೇರೆ ರಾಜ್ಯದ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ನಾವು ಯಾವುದೇ ಗಲಭೆ ಮಾಡಿಸುತ್ತಿಲ್ಲ. ಇದೆಲ್ಲವೂ ಮುಖ್ಯಮಂತ್ರಿಗಳು ಮಾಡಿಕೊಂಡಿರುವ ಸ್ವಯಂಕೃತ ಅಪರಾಧ. ಮುಸಲ್ಮಾನರ ಮೀಸಲಾತಿ ಕಿತ್ತುಹಾಕಿ ನಮಗೆ ನೀಡಿ ಎಂದು ಒಕ್ಕಲಿಗರು, ಲಿಂಗಾಯತರು ಕೇಳಿದ್ದರಾ? ಚುನಾವಣೆ ಸಮಯದಲ್ಲಿ ಬಿಜೆಪಿ ಸರ್ಕಾರ ಗೊಂದಲ ಸೃಷ್ಟಿಸುತ್ತಿದೆ. ಕೆಲವು ಸಮುದಾಯದವರು ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಿ ಎಂದು ಕೇಳಿವೆ. ಈ ಸರ್ಕಾರ ಸಂವಿಧಾನಬದ್ಧವಾಗಿ ಕೆಲಸ ಮಾಡಿ ಎಲ್ಲಾ ವರ್ಗದವರನ್ನು ರಕ್ಷಣೆ ಮಾಡುವುದಾಗಿ ಪ್ರಮಾಣ ವಚನ ಸ್ವೀಕರಿಸಿ, ಈಗ ಅವರ ಹಕ್ಕು ಕಸಿಯುವ ಪ್ರಯತ್ನ ಮಾಡುತ್ತಿದೆ.
ಕಾಂಗ್ರೆಸ್ ಪಕ್ಷ ಈ ಎಲ್ಲ ವರ್ಗಗಳ ಹಿತಾಸಕ್ತಿ ಕಾಪಾಡಲು ಬದ್ಧವಾಗಿದೆ. ಮುಖ್ಯಮಂತ್ರಿಗಳ ರಾಜಕೀಯ ಲಾಭದ ನಡೆಗೆ ರಾಜ್ಯ ದೇಶದ ಮುಂದೆ ತಲೆತಗ್ಗಿಸುವಂತಾಗಿದೆ. ಅಲ್ಪಸಂಖ್ಯಾತರನ್ನು ಆರ್ಥಿಕವಾಗಿ ಹಿಂದುಳಿದ ಮೀಸಲಾತಿ ವರ್ಗಕ್ಕೆ ಸೇರಿಸಿ ಮೇಲ್ಜಾತಿಯ ಆರ್ಥಿಕವಾಗಿ ಹಿಂದುಳಿದವರಿಗೂ ಈ ಸರ್ಕಾರ ಅನ್ಯಾಯ ಮಾಡುತ್ತಿದೆ. ರಾಜ್ಯಕ್ಕೆ ಕಳಂಕ ತಂದು ಎಲ್ಲ ಸಮಾಜದವರು ಪರಸ್ಪರ ಕಿತ್ತಾಡುವಂತೆ ಮಾಡಿದ್ದಾರೆ. ಇದೆಲ್ಲದಕ್ಕೂ ಮುಖ್ಯಮಂತ್ರಿಗಳೇ ನೇರ ಕಾರಣ ಎಂದರು.












Click it and Unblock the Notifications