ಜಿಬಿಎ ಚುನಾವಣೆಗೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಡಿ ಕೆ ಶಿವಕುಮಾರ್
ಬೆಂಗಳೂರು, ಡಿಸೆಂಬರ್ 13: ನಾನು ನಿಮಗೆ ಸಹಾಯ ಮಾಡುವುದರ ಜೊತೆಗೆ ನಿಮ್ಮ ಸಹಾಯವನ್ನು ಮತಗಳ ಮೂಲಕ ಬಯಸುತ್ತೇನೆ. ಶೀಘ್ರದಲ್ಲೇ ಜಿಬಿಎ ಚುನಾವಣೆ ಬರಲಿದೆ. ಜಿಬಿಎ ಚುನಾವಣೆಯಲ್ಲಿ ನೀವು ನಮ್ಮ ಜತೆ ನಿಲ್ಲಿ ಎಂದು ಕೋರುತ್ತೇನೆ. ನಿಮ್ಮ ಮೇಲೆ ನಂಬಿಕೆ ಇಟ್ಟಿದ್ದೇನೆ. ಅದಕ್ಕಾಗಿ ಯಾರೂ ಜಾರಿಗೆ ತರದ ಕಾನೂನನ್ನು ಜಾರಿಗೆ ತರಲು ಮುಂದಾಗಿದ್ದೇನೆ. ನನಗೆ ನಿರಾಸೆ ಮಾಡಬೇಡಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ತಿಳಿಸಿದರು.
ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕ 2025 ಕುರಿತು ಅಪಾರ್ಟ್ಮೆಂಟ್ ಅಸೋಸಿಯೇಷನ್ ಗಳ ಪ್ರತಿನಿಧಿಗಳೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶನಿವಾರ ಸಂವಾದ ನಡೆಸಿ ಮಾತನಾಡಿ, ಈ ಸರ್ಕಾರ ಅಪಾರ್ಟ್ಮೆಂಟ್ ನಿವಾಸಿಗಳು ಹಾಗೂ ಮನೆ ಖರೀದಿದಾರರ ಪರವಾಗಿ ನಿಲ್ಲುತ್ತದೆ. ಈ ಕಾರಣಕ್ಕೆ ಕರ್ನಾಟಕ ಅಪಾರ್ಟ್ಮೆಂಟ್ ಮಾಲೀಕತ್ವ ಮತ್ತು ನಿರ್ವಹಣೆ ವಿಧೇಯಕ 2025ಕ್ಕೆ ಸಂಬಂಧಿಸಿದಂತೆ ಅಪಾರ್ಟ್ಮೆಂಟ್ ಅಸೋಸಿಯೇಷನ್ ಗಳ ಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬಹಳ ಉತ್ಸಾಹದಿಂದ ಬೆಂಗಳೂರು ನಗರದ ಇಲಾಖೆ ಜವಾಬ್ದಾರಿ ವಹಿಸಿಕೊಂಡೆ. ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ. ಬೆಂಗಳೂರಿನ ಸಮಸ್ಯೆ ನಿವಾರಿಸಿ, ನಗರದ ಸ್ವರೂಪ ಬದಲಿಸಲು, ಅನೇಕ ಯೋಜನೆ ಕೈಗೊಂಡಿದ್ದೇವೆ. ಬಹಳ ಅಧ್ಯಯನ ಮಾಡಿ 2 ಟನಲ್ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದೇನೆ, 130 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಅನ್ನು 26 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದೇವೆ. ಯಾರು ಏನೇ ಟೀಕೆ ಮಾಡಿದರೂ ನಾವು ಈ ಯೋಜನೆ ಮಾಡೇ ಮಾಡುತ್ತೇವೆ. ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರು ಈ ಯೋಜನೆ ಮುಂದುವರಿಸುವಂತೆ ನನಗೆ ತಿಳಿಸಿದ್ದಾರೆ ಎಂದರು.
ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ನಾನು ಸಾಕಷ್ಟು ಅಧ್ಯಯನ ನಡೆಸಿದ ನಂತರ ಟನಲ್ ರಸ್ತೆ ಉತ್ತಮ ಆಯ್ಕೆಯಾಗಿದೆ. ರಸ್ತೆ ಅಗಲೀಕರಣಕ್ಕೆ ನಾವು ಯಾವುದೇ ಕಟ್ಟಡ ಕೆಡವಲು ಆಗುವುದಿಲ್ಲ. 2013ರ ಕಾಯ್ದೆ ಅನುಸಾರ ಆಸ್ತಿ ಮೌಲ್ಯದ ದುಪ್ಪಟ್ಟು ಪರಿಹಾರ ನೀಡಬೇಕು. ಈಗ ಬೆಂಗಳೂರಿನ ಆಸ್ತಿ ಮೌಲ್ಯ ಹೆಚ್ಚಾಗಿದೆ ಎಂದರು. ಟನಲ್ ಯೋಜನೆ ಜೊತೆಗೆ 40 ಕಿ.ಮೀ ಡಬಲ್ ಡೆಕ್ಕರ್ ಮೆಲ್ಸೇತುವೆ, ಭಾರತದಲ್ಲಿ ಅತಿ ದೊಡ್ಡ ಡಬಲ್ ಡೆಕ್ಕರ್ ಆಗಲಿದೆ. 117 ಕಿ.ಮೀ ಹೊಸ ಮೇಲ್ಸೇತುವೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. 300 ಕಿ.ಮೀ ನಷ್ಟು ಬಫರ್ ರಸ್ತೆ ನಿರ್ಮಾಣ ಮಾಡುತ್ತಿದ್ದೇವೆ.
50x80 ವಿಸ್ತೀರ್ಣದವರೆಗಿನ ನಿವೇಶನದಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಮಾಡುವವರಿಗೆ ಕಟ್ಟಡ ನಕ್ಷೆ ಸುಲಭವಾಗಿ ಅನುಮತಿ ಸಿಗುವಂತೆ ಮಾಡಲು ನಂಬಿಕೆ ನಕ್ಷೆ ಯೋಜನೆ ಜಾರಿಗೆ ತಂದಿದ್ದೇವೆ. ಪ್ರೀಮಿಯಮ್ ಎಫ್ಎಆರ್ ಜಾರಿಗೆ ತರಲಾಗಿದೆ. ಇ ಖಾತಾ ವ್ಯವಸ್ಥೆ ಅನುಷ್ಠಾನಗೊಳಿಸಲಾಗಿದೆ. ಹೀಗೆ ಬೆಂಗಳೂರಿನ ಪ್ರಗತಿಗೆ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕೆ ಸಮಯದ ಅಗತ್ಯವಿದೆ. ಒಂದೇ ದಿನದಲ್ಲಿ ಮ್ಯಾಜಿಕ್ ಮಾಡಲು ಆಗುವುದಿಲ್ಲ. ಇದಕ್ಕೆ ನಿರಂತರ ಪರಿಶ್ರಮ, ಬದ್ಧತೆ, ತಾಳ್ಮೆ ಇರಬೇಕು ಎಂದು ಹೇಳಿದರು.












Click it and Unblock the Notifications