ಮಳೆ ಅವಾಂತರ; ವಿರೋಧ ಪಕ್ಷಗಳು ರಾಜ್ಯದ ಮಾನ ತೆಗೆಯುವುದನ್ನು ನಿಲ್ಲಿಸಲಿ: ಡಿ.ಕೆ. ಶಿವಕುಮಾರ್
ಬೆಂಗಳೂರು, ಅಕ್ಟೋಬರ್ 16: ಬೆಂಗಳೂರಿನಲ್ಲಿ ಅನಿರೀಕ್ಷಿತವಾಗಿ ಸುರಿಯುತ್ತಿರುವ ಭಾರಿ ಮಳೆಯನ್ನು ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ. ಪ್ರಕೃತಿಗೆ ಕಡಿವಾಣ ಹಾಕಲು ಸಾಧ್ಯವೇ? ಚಂಡಮಾರುತ ತಡೆಯಲು ಸಾಧ್ಯವೇ? ಇದನ್ನು ಅರ್ಥ ಮಾಡಿಕೊಳ್ಳದ ವಿರೋಧ ಪಕ್ಷಗಳು ರಾಜ್ಯದ ಮಾನ ಹರಾಜು ಹಾಕುವುದನ್ನು ನಿಲ್ಲಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಾತನಾಡಿ, ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ಇಂದು (ಬುಧವಾರ) ಕೂಡ ಮಳೆ ಸಾಧ್ಯತೆ ಇದೆ, ಸಂಚಾರ ದಟ್ಟಣೆಯಾಗಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.

ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಕಾರ್ಯಕ್ರಮದಿಂದ ಮರಳಿದ ನಂತರ ಇಂದು ಸಂಜೆ ಪೊಲೀಸ್ ಇಲಾಖೆ, ಬಿಬಿಎಂಪಿ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳ ಜತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ಮಾಡುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ವಿರೋಧ ಪಕ್ಷಗಳ ನಾಯಕರ ಟ್ವೀಟ್ ಗಳನ್ನು ನೋಡಿದೆ. ಪ್ರಕೃತಿಗೆ ನಾವು ಕಡಿವಾಣ ಹಾಕಿ ಬುದ್ದಿಹೇಳಲು ಸಾಧ್ಯವೇ? ಚಂಡಮಾರುತದ ಪರಿಣಾಮದಿಂದ ಅನಿರೀಕ್ಷಿತವಾಗಿ ಮಳೆ ಸುರಿದಿದ್ದು, ಇನ್ನು ಹೆಚ್ಚಿನ ಮಳೆ ಬಂದರೂ ಅದನ್ನು ನಿಭಾಯಿಸಲು ಸರ್ಕಾರ ಹಾಗೂ ಜನರು ಸಮರ್ಥರಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಅನಿರೀಕ್ಷಿತವಾಗಿ ಭಾರಿ ಪ್ರಮಾಣದ (65 ಎಂಎಂ) ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇರುವುದರಿಂದ ಬಿಬಿಎಂಪಿ ನಿಯಂತ್ರಣ ಕೊಠಡಿ ಹಾಗೂ ಅಧಿಕಾರಿಗಳು ದಿನದ 24 ಗಂಟೆಗಳ ಕಾಲ ಕಾರ್ಯೋನ್ಮುಖರಾಗಿರಬೇಕು ಏನು ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದಿಂದಾಗಿ ನಾಲ್ಕು ದಿನಗಳ ಕಾಲ ಅನಿರೀಕ್ಷಿತ ಮಳೆ ಬೀಳಲಿದೆ ಎಂದು ಹವಾಮಾನ ವರದಿ ಬಂದಿದೆ. ಈ ವಿಚಾರವಾಗಿ ನಾವು ಎಚ್ಚರಿಕೆ ವಹಿಸಿದ್ದು, ಮುಂಜಾಗೃತ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಸರಾಸರಿ 5 ಎಂಎಂನಷ್ಟು ಮಳೆಯಾಗುತ್ತದೆ. ಆದರೆ ಇಂದು ಶೇ 228% ರಷ್ಟು ಮಳೆ ಹೆಚ್ಚಾಗಿ ಸುರಿದಿದೆ. ಮಂಗಳವಾರ ಸುರಿದ ಮಳೆಗೆ 142 ಸ್ಥಳಗಳಿಂದ ಮನೆಗಳಿಗೆ ನೀರು ನುಗ್ಗಿರುವ ಬಗ್ಗೆ ದೂರು ಬಂದಿದೆ. 30 ಮರಗಳು ಬಿದ್ದಿದ್ದು, 22 ಕಡೆಗಳಲ್ಲಿ ಮರ ತೆರವುಗೊಳಿಸಿದ್ದೇವೆ. 32 ಕಡೆಗಳಲ್ಲಿ ಮರದ ರೆಂಬೆ ಕೊಂಬೆ ಬಿದ್ದಿದ್ದು, ಸಂಚಾರಕ್ಕೆ ಅಡಚಣೆಯಾಗಿದೆ. ಈ ಪೈಕಿ 27 ಕಡೆಗಳಲ್ಲಿ ತಕ್ಷಣವೇ ತೆರವುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಯಲಹಂಕ, ಪಶ್ಚಿಮ ಮತ್ತು ಪೂರ್ವ ವಲಯದಲ್ಲಿ ಗರಿಷ್ಠ ಮಳೆಯಾಗಿದೆ. ಮಹದೇವಪುರ, ಆರ್ ಆರ್ ನಗರ, ಬೊಮ್ಮನಹಳ್ಳಿ, ದಾಸರಹಳ್ಳಿ ಮಧ್ಯಮ ಪ್ರಮಾಣದ ಮಳೆಯಾಗಿದೆ. ಹವಾಮಾನ ಇಲಾಖೆ ಪ್ರಕಾರ ಇನ್ನೂ 3 ದಿನಗಳ ಕಾಲ ಮಳೆ ಸುರಿಯಲಿದ್ದು, ನಾಗರೀಕರು ಜಾಗೃತರಾಗಿರಬೇಕು. ಕಾಲುವೆಗಳಲ್ಲಿ ನೀರು ಹರಿಯುವ ಪ್ರಮಾಣ ಪರೀಕ್ಷಿಸಿದ್ದೇನೆ. ಸಂಪೂರ್ಣ ಪರಿಸ್ಥಿತಿಯ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ನೀಡಲಾಗುವುದು ಎಂದು ತಿಳಿಸಿದರು.












Click it and Unblock the Notifications