ಕುತೂಹಲ ಮೂಡಿಸಿದ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಭೇಟಿ!
ಬೆಂಗಳೂರು, ಜನವರಿ 05 : ಕರ್ನಾಟಕ ಕಾಂಗ್ರೆಸ್ನಲ್ಲಿ ಹಲವು ಬೆಳವಣಿಗೆ ನಡೆಯುತ್ತಿವೆ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ಮಾಡಿದರು.
ಭಾನುವಾರ ಕಾವೇರಿ ನಿವಾಸದಲ್ಲಿ ಡಿ. ಕೆ. ಶಿವಕುಮಾರ್ ಸಿದ್ದರಾಮಯ್ಯರನ್ನು ಭೇಟಿ ಮಾಡಿದರು. ಶನಿವಾರ ಕಾಂಗ್ರೆಸ್ ಹಿರಿಯ ನಾಯಕರು ಸಭೆ ನಡೆಸಿದ ಬಳಿಕ ಸಿದ್ದರಾಮಯ್ಯರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
15 ಕ್ಷೇತ್ರಗಳ ಉಪ ಚುನಾವಣೆ ಬಳಿಕ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಸಲ್ಲಿಸಿದ್ದಾರೆ. ಹೊಸ ಅಧ್ಯಕ್ಷರ ಹುಡುಕಾಟಕ್ಕೆ ಈಗಾಗಲೇ ಚಾಲನೆ ಸಿಕ್ಕಿದೆ.
ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರೆ ಎಂಬ ಸುದ್ದಿಗಳು ಈಗಾಗಲೇ ಹಬ್ಬಿವೆ. ಮತ್ತೊಂದು ಕಡೆ ಕೆ. ಎಚ್. ಮುನಿಯಪ್ಪ, ಬಿ. ಕೆ. ಹರಿಪ್ರಸಾದ್ ಹೆಸರನ್ನು ಸಹ ಸೋನಿಯಾ ಗಾಂಧಿಗೆ ಕಳಿಸಲಾಗಿದ್ದು, ಅಧ್ಯಕ್ಷ ಪಟ್ಟ ಯಾರಿಗೆ ಎಂಬುದು ಕುತೂಹಲ ಮೂಡಿಸಿದೆ.

ಸಿದ್ದರಾಮಯ್ಯ ನಿಲುವೇನು?
ಕರ್ನಾಟಕ ಪ್ರದೇಶ ಅಧ್ಯಕ್ಷ ಸ್ಥಾನವನ್ನು ಲಿಂಗಾಯತ ಸಮುದಾಯದ ನಾಯಕರಿಗೆ ನೀಡಬೇಕು ಎಂಬುದು ಸಿದ್ದರಾಮಯ್ಯ ನಿಲುವು. ಸಿದ್ದರಾಮಯ್ಯ ಮಾಜಿ ಸಚಿವ ಎಂ. ಬಿ. ಪಾಟೀಲ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಡಿ. ಕೆ. ಶಿವಕುಮಾರ್ ಸಹ ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ.

ಪರಮೇಶ್ವರ ಹೇಳುವುದೇನು?
ಡಾ. ಜಿ. ಪರಮೇಶ್ವರ ನಿವಾಸದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಭೆ ಶನಿವಾರ ಸಂಜೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಅವರು, "ಹಿರಿಯ ಮುಖಂಡರ ಸಭೆ ನಡೆಸಿದ್ದೇನೆ. ಪ್ರಸ್ತುತ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆಯೂ ಚರ್ಚೆ ಆಗಿದೆ. ಕೆಪಿಸಿಸಿ ಅಧ್ಯಕ್ಷರು ಮತ್ತು ವಿಪಕ್ಷ ನಾಯಕರು ರಾಜೀನಾಮೆ ಕೊಟ್ಟಿದ್ದಾರೆ. ಆದಷ್ಟು ಬೇಗ ಈ ಸ್ಥಾನಗಳಿಗೆ ನೇಮಕವಾಗಬೇಕು ಎಂಬ ಅಭಿಪ್ರಾಯವನ್ನು ಹೈಕಮಾಂಡ್ ತಿಳಿಸಬೇಕು ಎಂದು ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ" ಎಂದರು.

ಸಭೆಯಿಂದ ಬೇಗ ಹೋಗಿದ್ದ ಡಿಕೆಶಿ
ಡಾ. ಜಿ. ಪರಮೇಶ್ವರ ನಿವಾಸದಲ್ಲಿ 20ಕ್ಕೂ ಅಧಿಕ ಕಾಂಗ್ರೆಸ್ ಹಿರಿಯ ನಾಯಕರು ಶನಿವಾರ ಸಭೆ ಸೇರಿದ್ದರು. ಡಿ. ಕೆ. ಶಿವಕುಮಾರ್ ಸಭೆಗೆ ಆಗಮಿಸಿ ಬೇಗನೇ ವಾಪಸ್ ಹೋಗಿದ್ದರು. ಇದು ಕುತೂಹಲಕ್ಕೆ ಕಾರಣವಾಗಿತ್ತು. ಪೂಜೆಯಲ್ಲಿ ಪಾಲ್ಗೊಳ್ಳಲು ಬೇಗ ಹೋಗಿದ್ದಾರೆ ಎಂದು ಸ್ಪಷ್ಟನೆ ನೀಡಲಾಗಿತ್ತು.

ಪ್ರತ್ಯೇಕಿಸುವ ಬಗ್ಗೆ ಚರ್ಚೆ ಇಲ್ಲ
ಸಿಎಲ್ಪಿ ನಾಯಕ ಮತ್ತು ಪ್ರತಿಪಕ್ಷ ನಾಯಕ ಸ್ಥಾನವನ್ನು ಪ್ರತ್ಯೇಕಿಸುವ ಬಗ್ಗೆ ಶನಿವಾರ ನಾಯಕರು ಯಾವುದೇ ಚರ್ಚೆ ನಡೆಸಿಲ್ಲ. ಸಿಎಲ್ಪಿ ನಾಯಕರು ಆಗುವವರೇ ಪ್ರತಿಪಕ್ಷ ನಾಯಕರಾಗಿರುತ್ತಾರೆ. ಜನವರಿ ಅಂತ್ಯದಲ್ಲಿ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಅಷ್ಟರಲ್ಲಿ ಸಿಎಲ್ಪಿ ನಾಯಕರ ಆಯ್ಕೆಯಾಗಬೇಕಿದೆ.












Click it and Unblock the Notifications