DK Shivakumar: ಅಮೆರಿಕದಲ್ಲಿ ರಾಹುಲ್ ಗಾಂಧಿ ಭೇಟಿ ಮಾಡಿದ ಡಿ. ಕೆ. ಶಿವಕುಮಾರ್!
ಬೆಂಗಳೂರು, ಸೆಪ್ಟೆಂಬರ್ 11: ಅಮೆರಿಕ ಪ್ರವಾಸದಲ್ಲಿರುವ ಕರ್ನಾಟಕದ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ಮಾಡಿದರು. ಮುಡ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ರಾಜ್ಯದಲ್ಲಿ ಸಚಿವರು ದಿನಕ್ಕೊಂದು ಹೇಳಿಕೆ ನೀಡುತ್ತಿರುವಾಗಲೇ ಡಿ. ಕೆ. ಶಿವಕುಮಾರ್ ಒಂದು ವಾರ ಕಾಲದ ಅಮೆರಿಕ ಪ್ರವಾಸಕ್ಕಾಗಿ ಭಾನುವಾರ ರಾತ್ರಿ ಬೆಂಗಳೂರಿನಿಂದ ತೆರಳಿದ್ದರು. ಈಗ ಅಲ್ಲಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಡಿ. ಕೆ. ಶಿವಕುಮಾರ್ ಸಾಮಾಜಿಕ ಜಾಲತಾಣದಲ್ಲಿ, 'ನಾನು ಹಾಗೂ ನನ್ನ ಧರ್ಮಪತ್ನಿ ಶ್ರೀಮತಿ ಉಷಾ ಅವರು ಇಂದು ಅಮೇರಿಕಾದ ವಾಷಿಂಗ್ಟನ್ನಲ್ಲಿ ನಮ್ಮ ಹೆಮ್ಮೆಯ ನಾಯಕರು ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ Rahul Gandhi ಅವರನ್ನು ಭೇಟಿಯಾದೆವು' ಎಂದು ಪೋಸ್ಟ್ ಹಾಕಿದ್ದಾರೆ.

ರಾಹುಲ್ ಗಾಂಧಿ, ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರ ಜೊತೆ ಇರುವ ಫೋಟೋವನ್ನು ಡಿ. ಕೆ. ಶಿವಕುಮಾರ್ ಹಂಚಿಕೊಂಡಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ 3 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದೇ ಸಮಯದಲ್ಲಿ ಡಿ. ಕೆ. ಶಿವಕುಮಾರ್ ಸಹ ಅಮೆರಿಕ ಪ್ರವಾಸದಲ್ಲಿದ್ದಾರೆ.
ಸ್ಪಷ್ಟನೆ ನೀಡಿದ್ದ ಡಿ. ಕೆ. ಶಿವಕುಮಾರ್: ಸೆಪ್ಟೆಂಬರ್ 9ರ ಸೋಮವಾರ ಕರ್ನಾಟಕ ಹೈಕೋರ್ಟ್ನಲ್ಲಿ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿ ವಿಚಾರಣೆ, ಮುಖ್ಯಮಂತ್ರಿ ಪಟ್ಟದ ಬಗ್ಗೆ ಸಚಿವರ ಹೇಳಿಕೆಗಳು ಹೊರಬರುತ್ತಿರುವಾಗಲೇ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಒಂದು ವಾರದ ಅಮೆರಿಕ ಪ್ರವಾಸ ಕೈಗೊಂಡಿದ್ದು ಕುತೂಹಲ ಮೂಡಿಸಿತ್ತು. ಸೆಪ್ಟೆಂಬರ್ 14ರಂದು ಡಿ. ಕೆ. ಶಿವಕುಮಾರ್ ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ.
ಡಿ. ಕೆ. ಶಿವಕುಮಾರ್ ಅಮೆರಿಕ ಪ್ರವಾಸದ ಬಗ್ಗೆ ಹಲವು ವದಂತಿಗಳು ಹಬ್ಬಿದ್ದವು. ರಾಷ್ಟ್ರೀಯ ಮಾಧ್ಯಮಗಳು ಸಹ ಅನೇಕ ವರದಿ ಪ್ರಸಾರ ಮಾಡಿದ್ದವು. ಇದು ಕೌಟುಂಬಿಕ ಪ್ರವಾಸವಾಗಿದೆ. ಆದರೆ ಇದರ ಹಿಂದೆ ರಾಜಕೀಯ ನಡೆ ಇದೆ ಎಂದು ಬಿಂಬಿಸಲಾಗುತ್ತಿತ್ತು. ಆದ್ದರಿಂದ ಡಿ. ಕೆ. ಶಿವಕುಮಾರ್ ಪೋಸ್ಟ್ವೊಂದನ್ನು ಹಾಕಿ ಸ್ಪಷ್ಟನೆಯನ್ನು ಸಹ ಕೊಟ್ಟಿದ್ದರು.
ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, 'ನಾನು ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ಬಗ್ಗೆ ನನ್ನ ಸ್ಪಷ್ಟನೆ ಇದು. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ವಿನಂತಿಸುತ್ತೇನೆ' ಎಂದು ಪೋಸ್ಟ್ನಲ್ಲಿ ಸ್ಪಷ್ಟನೆಯನ್ನು ನೀಡಿದ್ದರು.
ಸೆಪ್ಟೆಂಬರ್ 8ರ ಭಾನುವಾರ ರಾತ್ರಿ ಡಿ. ಕೆ. ಶಿವಕುಮಾರ್ ಬೆಂಗಳೂರು ನಗರದಿಂದ ಅಮೆರಿಕಾಗೆ ಪ್ರಯಾಣ ಬೆಳೆಸಿದ್ದರು. ಇದಕ್ಕೂ ಮೊದಲು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಪ್ರವಾಸದ ಕುರಿತು ಮಾಹಿತಿಯನ್ನು ಸಹ ನೀಡಿದ್ದರು. ಆದರೂ ಸಹ ಡಿ. ಕೆ. ಶಿವಕುಮಾರ್ ಪ್ರವಾಸದ ಬಗ್ಗೆ ಹಲವು ಸುದ್ದಿಗಳು ಹರಿದಾಡಿದ್ದವು. ಈಗ ವಾಷಿಂಗ್ಟನ್ನಲ್ಲಿ ಅವರು ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ.
ಡಿಕೆಶಿ ವಿರುದ್ಧ ಹೈಕಮಾಂಡ್ ಗರಂ: ಡಿ. ಕೆ. ಶಿವಕುಮಾರ್ ಅಮೆರಿಕ ಪ್ರವಾಸದ ನಡುವೆಯೇ ಅವರ ವಿರುದ್ಧ ಹೈಕಮಾಂಡ್ ನಾಯಕರು ಗರಂ ಆಗಿದ್ದಾರೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸುತ್ತಿದೆ. ಈ ಕುರಿತು ಪ್ರತಿಪಕ್ಷ ನಾಯಕ ಆರ್. ಅಶೋಕ ಮಾಧ್ಯಮದ ವರದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 'ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ನಂತರ ರಾಜ್ಯದ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಕಾಂಗ್ರೆಸ್ ಪಕ್ಷದಲ್ಲಿ ಜೋರಾಗುತ್ತಿರುವ ನಡುವೆಯೇ, ಹೈಕಮಾಂಡ್ ಏಜೆಂಟ್ಗಳಾದ ರಂದೀಪ್ ಸಿಂಗ್ ಸುರ್ಜೇವಲಾ ಹಾಗು ಕೆ.ಸಿ.ವೇಣುಗೋಪಾಲ್ ಅವರಿಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರ ಮೇಲೆ ಅನುಮಾನ ಹುಟ್ಟಿಕೊಂಡಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ' ಎಂದು ಹೇಳಿದ್ದರು.
ಸಿಎಂ @siddaramaiah ಅವರ ರಾಜೀನಾಮೆ ನಂತರ ರಾಜ್ಯದ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಕಾಂಗ್ರೆಸ್ ಪಕ್ಷದಲ್ಲಿ ಜೋರಾಗುತ್ತಿರುವ ನಡುವೆಯೇ, ಹೈಕಮಾಂಡ್ ಏಜೆಂಟ್ ಗಳಾದ ರಂದೀಪ್ ಸಿಂಗ್ ಸುರ್ಜೇವಲಾ ಹಾಗು ಕೆ.ಸಿ.ವೇಣುಗೋಪಾಲ್ ಅವರಿಗೆ ಡಿಸಿಎಂ @DKShivakumar ಅವರ ಮೇಲೆ ಅನುಮಾನ ಹುಟ್ಟಿಕೊಂಡಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.
— R. Ashoka (@RAshokaBJP) September 9, 2024
ಡಿಸಿಎಂ… pic.twitter.com/gRce31nASV
'ಡಿಸಿಎಂ ಡಿ. ಕೆ. ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ಸಂಪ್ರದಾಯದಲ್ಲಿ ಪಲ್ಲಕ್ಕಿ ಹೊರುವವರೇ ಬೇರೆ, ಉತ್ಸವ ಮೂರ್ತಿ ಆಗುವವರೇ ಬೇರೆ. ಜೀವನವೆಲ್ಲಾ ಕಾಂಗ್ರೆಸ್ ಪಕ್ಷದ ಪಲ್ಲಕ್ಕಿ ಹೊತ್ತು ಕಡೆಗೆ ಮೂಲೆ ಗುಂಪಾದವರ ಪಟ್ಟಿ ಬಹಳ ದೊಡ್ಡದಿದೆ, ಜೋಪಾನ. ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಅವರಿಂದ ಹಿಡಿದು ಪಕ್ಕದ ಆಂಧ್ರ ಪ್ರದೇಶದ ಜಗನ್ ರೆಡ್ಡಿ ಅವರವರೆಗೂ ಅನೇಕ ನಾಯಕರು ಕಾಂಗ್ರೆಸ್ ಪಕ್ಷದಿಂದ ಹೊರಗೆ ಬಂದ ಮೇಲೆಯೇ ಮುಖ್ಯಮಂತ್ರಿ ಆಗಲಿಕ್ಕೆ ಸಾಧ್ಯವಾಗಿದ್ದು. ಇತಿಹಾಸದ ಅರಿವಿದ್ದವರಿಂದ ಮಾತ್ರ ಇತಿಹಾಸ ಸೃಷ್ಟಿಸಲು ಸಾಧ್ಯ. ಕಾಂಗ್ರೆಸ್ ಪಕ್ಷದ ಇತಿಹಾಸ ನಿಮಗೆ ಚೆನ್ನಾಗಿ ಗೊತ್ತಿದೆ ಎಂದು ಭಾವಿಸಿದ್ದೇನೆ' ಎಂದು ಅಶೋಕ ಪೋಸ್ಟ್ನಲ್ಲಿ ತಿಳಿಸಿದ್ದರು.












Click it and Unblock the Notifications