ಡಿಕೆ ಶಿವಕುಮಾರ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು, ನವೆಂಬರ್ 12: 2017ರಲ್ಲಿ ನಡೆದ ಐಟಿ ದಾಳಿಗೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಸೇರಿದಂತೆ ಅವರ ಆಪ್ತರ ಮೇಲೆ ಕರ್ನಾಟಕ ಹೈಕೋರ್ಟಿನಲ್ಲಿ ಪ್ರಕರಣದ ವಿಚಾರಣೆ ಜಾರಿಯಲ್ಲಿದೆ. ಈ ನಡುವೆ ಆದಾಯ ತೆರಿಗೆ ಇಲಾಖೆ ದಾಖಲಿಸಿದ್ದ 4ನೇ ಪ್ರಕರಣದಿಂದ ಕೈ ಬಿಡುವಂತೆ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಡಿಕೆ ಶಿವಕುಮಾರ್ ಹಾಗೂ ಅವರ ಆಪ್ತರಾದ ಸುನೀಲ್ ಶರ್ಮಾ, ಸಚಿನ್ ನಾರಾಯಣ್, ರಾಜೇಂದ್ರ, ಆಂಜನೇಯ ಅವರ ಮೇಲೆ ಅಕ್ರಮವಾಗಿ ಹಣ ವರ್ಗಾವಣೆ ಹವಾಲಾ ಹಣವನ್ನು ಸಾಗಾಟ ಮಾಡಿದ್ದಾರೆ ಎಂಬ ಆರೋಪವನ್ನು ಆದಾಯ ತೆರಿಗೆ ಇಲಾಖೆ ಹೊರೆಸಿದೆ.
ಆದರೆ, ಈ ಆರೋಪ ನಿರಾಧಾರವಾಗಿದ್ದು, ಅಕ್ರಮ ಹಣ ವರ್ಗಾವಣೆ, ಜಮೆಗೆ ಸೂಕ್ತ ಸಾಕ್ಶ್ಯವಿಲ್ಲ, ಹೀಗಾಗಿ ತಮ್ಮ ಮೇಲಿನ ಪ್ರಕರಣ ಕೈಬಿಡುವಂತೆ ಕೋರಿ ಡಿಕೆಶಿ ಮತ್ತು ಬೆಂಬಲಿಗರು ಕೆಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಕೆಳ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದ್ದರಿಂದ ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿತ್ತು
ವಿಚಾರಣೆ ನಡೆಸಿದ್ದ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಜೊತೆಗೆ ಡಿಕೆಶಿ ಆಪ್ತರನ್ನು ಸಮನ್ಸ್ ನೀಡಿ ವಿಚಾರಣೆಗೆ ಕರೆಸಿಕೊಳ್ಳುವುದಕ್ಕೂ ನಿರ್ಬಂಧ ವಿಧಿಸಲಾಗಿತ್ತು. ಆದರೆ ಇಂದು ಹೈಕೋರ್ಟಿನ ಏಕಸದಸ್ಯ ಪೀಠ ಡಿಕೆಶಿ ಮತ್ತು ಬೆಂಬಲಿಗರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ದೆಹಲಿ ನಿವಾಸದಲ್ಲಿ ಪತ್ತೆಯಾದ 8.5 ಕೋಟಿ ರೂ. ಸಿಕ್ಕ ಹಣದ ಸಂಬಂಧ ಆದಾಯ ತೆರಿಗೆ ಇಲಾಖೆಯ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿತ್ತು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲಾ ಹಣದ ವಿವರವನ್ನು ಉಲ್ಲೇಖಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್
ಮನಿಲಾಂಡ್ರಿಂಗ್ ಕೇಸಿನಲ್ಲಿ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ರದ್ದುಗೊಳಿಸಬೇಕು ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ನಾಲ್ವರು ಆಪ್ತರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು. ಅದರೆ ನಾಲ್ವರಿಗೆ ಬಂಧನದಿಂದ ತಾತ್ಕಾಲಿಕ ರಕ್ಷಣೆ ನೀಡಿ ಮಧ್ಯಂತರ ಆದೇಶ ನೀಡಿತ್ತು.
ಕರ್ನಾಟಕ ಹೈಕೋರ್ಟ್ ನ್ಯಾ. ಅಭಯ್ ಎಸ್ ಓಕಾ ಅವರಿದ್ದ ಏಕಸದಸ್ಯ ಪೀಠವು ಡಿಕೆ ಶಿವಕುಮಾರ್ ಹೊರತುಪಡಿಸಿ ಉಳಿದ ನಾಲ್ವರಿಗೆ ಒಂದು ತಿಂಗಳವರೆಗೂ ಬಂಧನ ಮಾಡದಂತೆ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿ ಮಧ್ಯಂತರ ಆದೇಶ ನೀಡಿದ್ದನ್ನು ಇಲ್ಲಿ ಸ್ಮರಿಬಹುದು.

ಆದಾಯ ತೆರಿಗೆ ಕಾಯ್ದೆ ನಿಯಮಾವಳಿ
ಆದಾಯ ತೆರಿಗೆ ಕಾಯ್ದೆ ನಿಯಮಾವಳಿಗಳಡಿಯಲ್ಲಿ ಡಿಕೆ ಶಿವಕುಮಾರ್ ಅವರು ಬಂಧನಕ್ಕೆ ಒಳಗಾಗುವಂತಹ ಅಪರಾಧ ಎಸಗಿಲ್ಲ. ಐಟಿ ನಿಮಯಗಳ ಅಡಿ ಅವರನ್ನು ಬಂಧಿಸುವ ಅಗತ್ಯವಿಲ್ಲ. ಪಿಎಂಎಲ್ಎ ಪ್ರಕರಣ ದಾಖಲಿಸುವ ಅವಕಾಶವಿಲ್ಲ. ಆದರೆ 45 ದಿನಗಳಿಂದ ಅವರು ಬಂಧನದಲ್ಲಿದ್ದಾರೆ. ಇದು ಬಂಧಿಸುವ ಪ್ರಕರಣವಲ್ಲ ಎಂದು ದೆಹಲಿ ಹೈಕೋರ್ಟಿನಲ್ಲಿ ಡಿಕೆಶಿ ಪರ ವಕೀಲರು ವಾದಿಸಿದ ಅಂಶವನ್ನೇ ಇಲ್ಲಿ ಕೂಡಾ ಪ್ರಸ್ತಾಪಿಸಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ ಬಂಧನವಾಗಿ, ಈಗ ಬಿಡುಗಡೆಯಾಗಿದ್ದಾರೆ. ಡಿ. ಕೆ. ಶಿವಕುಮಾರ್ ಸಹೋದರ, ಪುತ್ರಿ ವಿಚಾರಣೆ ನಡೆದಿದೆ. ತಾಯಿ ಗೌರಮ್ಮ ಮತ್ತು ಪತ್ನಿ ಉಷಾಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ. ಆದ್ದರಿಂದ, ಡಿ. ಕೆ. ಶಿವಕುಮಾರ್ ಆಪ್ತರಿಗೆ ಬಂಧನ ಭೀತಿ ಎದುರಾಗಿತ್ತು.












Click it and Unblock the Notifications