ಅಚ್ಛೇದಿನ; ಜನರ ಖಾತೆಗೆ 15, 00,000 ಯಾವಾಗ ಬರುತ್ತೆ? ಕುಮಾರಸ್ವಾಮಿನ ಕೇಳಿ: ಡಿ ಕೆ ಶಿವಕುಮಾರ್
ಮಂಡ್ಯ, ಜುಲೈ 29: ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ಅಚ್ಛೇದಿನ ಬರುತ್ತದೆ ಎಂದಿದ್ದರು. ಅವರು ಹೇಳಿದ್ದ ಅಚ್ಛೇದಿನ, ಖಾತೆಗೆ 15 ಲಕ್ಷದ ವಿಚಾರ ಏನಾಯ್ತು ಎಂದು ನೀವೆಲ್ಲರೂ ಬಿಜೆಪಿ ಹಾಗೂ ಕುಮಾರಸ್ವಾಮಿ ಅವರನ್ನು ಕೇಳಬೇಕು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಪ್ರಶ್ನಿಸಿದರು.
ಈ ಕುರಿತು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ನನಗೆ ಕನಕಪುರ ಎಷ್ಟು ಮುಖ್ಯವೋ, ಮಂಡ್ಯದ ಏಳು ಕ್ಷೇತ್ರಗಳು ಅಷ್ಟೇ ಮುಖ್ಯ. ಮದ್ದೂರಿನ ಶಾಸಕ ಉದಯ್ ಅವರ ಬೆನ್ನಿಗೆ ಇಡೀ ಸರ್ಕಾರ ನಿಂತಿದೆ. ಕ್ಷೇತ್ರದ ಜನರ ಋಣ ತೀರಿಸಲು 1146 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ. ರಾಜ್ಯದಲ್ಲಿ 136 ಸಂಖ್ಯಾಬಲದ ಬಲಿಷ್ಠ ಸರ್ಕಾರ ರಚನೆಗೆ ಸಹಕಾರ ನೀಡಿರುವ ನಿಮ್ಮ ಋಣ ತೀರಿಸಲು ನಾವಿಲ್ಲಿಗೆ ಬಂದಿದ್ದೇವೆ ಎಂದು ತಿಳಿಸಿದರು.

ನೀರಾವರಿ ಇಲಾಖೆಯ ಕಚೇರಿಯನ್ನು ನಾನು ಆರಂಭಿಸುತ್ತಿದ್ದೇನೆ. ಮಳವಳ್ಳಿವರೆಗೂ ನೀರು ಹರಿಸಿ, ಮದ್ದೂರಿನ ಕಾಲುವೆಗಳ ಅಭಿವೃದ್ಧಿ ದೃಷ್ಟಿಯಿಂದ ಸುಮಾರು 500 ಕೋಟಿಗೂ ಹೆಚ್ಚು ಮೊತ್ತದ ಹಣವನ್ನು ನೀಡಿದ್ದೇವೆ. ಚೆಲುವರಾಯಸ್ವಾಮಿ ಅವರು ಕೂಡ ಸಾಕ್ಷಿಗುಡ್ಡೆ ಬಿಟ್ಟು ಹೋಗಲು, ರೈತರ ಮಕ್ಕಳಿಗಾಗಿ ಕೃಷಿ ವಿವಿ ತರಲು ಮುಂದಾಗಿದ್ದಾರೆ. ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿ ವಿವಿಧ ಯೋಜನೆ ಹಮ್ಮಿಕೊಳ್ಳಲಾಗಿದೆ. ಈ ಜಿಲ್ಲೆಯಲ್ಲಿ ಅತಿಹೆಚ್ಚು ಶಾಸಕರು ಗೆದ್ದಾಗ ಕಾಂಗ್ರೆಸ್ ಸರ್ಕಾರ ರಚನೆಯಾಗಿದೆ ಎಂದರು.
ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಈ ಕೈ ಅಧಿಕಾರದಲ್ಲಿದ್ದ ಕಾರಣಕ್ಕೆ ನಿಮಗೆ ಪಂಚ ಗ್ಯಾರಂಟಿ ಯೋಜನೆ ನೀಡಲಾಗಿದೆ. ಮಹಿಳೆಯರು ರಾಜ್ಯದಲ್ಲಿ ಉಚಿತ ಬಸ್ ಪ್ರಯಾಣ ಮಾಡುತ್ತಿದ್ದಾರೆ, ಮನೆಗಳಿಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ಬರುತ್ತಿದೆ. ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ಹಣ, 10 ಕೆ.ಜಿ ಅಕ್ಕಿ, ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ಇಡೀ ದೇಶದಲ್ಲಿ ಯಾವುದೇ ಸರ್ಕಾರ ಈ ರೀತಿ ಯೋಜನೆ ನೀಡಿಲ್ಲ.
ಸಿಎಂ ಸಿದ್ದರಾಮಯ್ಯ ಅವರು 4.08 ಲಕ್ಷ ಕೋಟಿ ಮೊತ್ತದ ಬಜೆಟ್ ಮಂಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ, ನಮ್ಮ ಸರ್ಕಾರ ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡಲು ವರ್ಷಕ್ಕೆ 19 ಸಾವಿರ ಕೋಟಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳಿಂದ 25 ಸಾವಿರ ಕೋಟಿಯಷ್ಟು ಹಣವನ್ನು ಜನರಿಗೆ ನೀಡುತ್ತಿದ್ದೇವೆ. 10,900 ಕೋಟಿಯಷ್ಟು ಹಣವನ್ನು ಪಿಂಚಣಿಗಾಗಿ ನೀಡುತ್ತಿದ್ದೇವೆ. ಆಮೂಲಕ ಬಜೆಟ್ಟಿನ 1 ಲಕ್ಷ ಕೋಟಿಯಷ್ಟು ಹಣವನ್ನು ಜನರಿಗಾಗಿ ನೀಡುತ್ತಿದ್ದೇವೆ ಎಂದು ಹೇಳಿದರು.
ನೀವು ಅಧಿಕಾರದಲ್ಲಿದ್ದಾಗ ಇಂತಹ ಯಾವುದಾದರೂ ಒಂದು ಯೋಜನೆಯನ್ನು ಜಾರಿಗೆ ತಂದಿದ್ದೀರಾ ಎಂದು ನೀವೆಲ್ಲರೂ ಬಿಜೆಪಿಯವರನ್ನು ಕೇಳಬೇಕು. ಕಷ್ಟದಲ್ಲಿದ್ದ ಜನರಿಗೆ ಸಹಾಯ ಮಾಡಿದ್ದಾರಾ? ಮಾಡಿಲ್ಲ. ಹೀಗಾಗಿ ಅವರು ನಮ್ಮ ಬಗ್ಗೆ ಮಾತನಾಡಲು ನೈತಿಕತೆ ಕಳೆದುಕೊಂಡಿದ್ದಾರೆ. ಸಾಧನೆ ಎಂಬುದು ಸುಮ್ಮನೆ ಬರುವುದಿಲ್ಲ. ಅದು ಕಾಲ ಬುಡದಲ್ಲಿ ಇರುವುದಿಲ್ಲ, ಶ್ರಮದ ಪರ್ವತದ ತುದಿಯಲ್ಲಿ ಸಾಧನೆ ಇರುತ್ತದೆ. ನಮ್ಮ ಕಾಂಗ್ರೆಸ್ ಸರ್ಕಾರ ಅನೇಕ ಕಾರ್ಯಕ್ರಮದ ಮೂಲಕ ಜನರ ಬದುಕು ಬದಲಿಸುತ್ತಿದೆ ಎಂದು ಹೇಳಿದರು.












Click it and Unblock the Notifications