ಬೆಂಗಳೂರಿನ ಬಗ್ಗೆ ಟ್ವೀಟ್ ಮಾಡಿ ಬೆದರಿಸುವವರು, ಕಳೆದ 25 ವರ್ಷಗಳಿಂದ ಎಲ್ಲಿದ್ದರು?: ಡಿ ಕೆ ಶಿವಕುಮಾರ್ ಕಿಡಿ
ಬೆಂಗಳೂರು, ಅಕ್ಟೋಬರ್ 15: ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.
ಬೆಂಗಳೂರಿನ ವಿಚಾರವಾಗಿ ಆಂಧ್ರ ಪ್ರದೇಶ ಐಟಿ ಸಚಿವ ನಾರಾ ಲೋಕೇಶ್ ಅವರ ಹೇಳಿಕೆ ಕುರಿತು ಮಾತನಾಡಿ, ನಾರಾ ಲೋಕೇಶ್ ಆಗಲಿ, ಬೇರೆಯವರಾಗಲಿ, ಯಾರ ಹೇಳಿಕೆಗೂ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಬೆಂಗಳೂರಿನಲ್ಲಿ 25 ಲಕ್ಷ ಐಟಿ ವೃತ್ತಿಪರರು, 2 ಲಕ್ಷ ವಿದೇಶಿಗರು ಕೆಲಸ ಮಾಡುತ್ತಿದ್ದಾರೆ. ದೇಶದ ಪ್ರಗತಿಯಲ್ಲಿ ಬೆಂಗಳೂರಿನ ಕೊಡುಗೆ ಅಪಾರವಾಗಿದೆ. ಕೇಂದ್ರ ಸರ್ಕಾರಕ್ಕೆ ಸುಮಾರು 40% ತೆರಿಗೆ ಆದಾಯ ಇಲ್ಲಿಂದಲೇ ಹೋಗುತ್ತಿದೆ. ಅವರು ತಮ್ಮ ಬಗ್ಗೆ ಮಾರ್ಕೆಟಿಂಗ್ ಮಾಡಿಕೊಳ್ಳಲು ಮಾತನಾಡುತ್ತಾರೆ. ಅವರು ಏನಾದರೂ ಮಾಡಿಕೊಳ್ಳಲಿ. ಅವರಿಗೆ ಕೇಂದ್ರ ಸರ್ಕಾರವೂ ಸಹಾಯ ಮಾಡಲಿ. ಆದರೆ ಬೆಂಗಳೂರಿಗೆ ಸರಿಸಮನಾಗಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಎಷ್ಟು ವಿದೇಶಿ ನಾಯಕರು ನನ್ನನ್ನು ಸಂಪರ್ಕಿಸುತ್ತಿದ್ದಾರೆ ಎಂದು ನಮಗೆ ಗೊತ್ತಿದೆ. ನಾನು ಐಟಿ ಸಚಿವರು, ಬೃಹತ್ ಕೈಗಾರಿಕೆ ಸಚಿವರು ಕೂತು ಚರ್ಚೆ ಮಾಡುತ್ತೇವೆ. ವಿದೇಶಿ ಕಂಪನಿಗಳು ಇಷ್ಟು ದಿನ ಬೆಂಗಳೂರಿನಲ್ಲಿ ಬಾಡಿಗೆ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದವು. ಅಮೆರಿಕದಲ್ಲಿನ ಬೆಳವಣಿಗೆ ನಂತರ ಈಗ ಅವರು ಸ್ವಂತ ಜಾಗ ಖರೀದಿಗೆ ಮುಂದಾಗುತ್ತಿದ್ದಾರೆ. ತಮ್ಮದೇ ಸ್ವಂತ ಕ್ಯಾಂಪಸ್ ಹೊಂದಲು ಮುಂದಾಗಿದ್ದಾರೆ ಇದು ಬೆಂಗಳೂರಿನ ಶಕ್ತಿ ಎಂದು ತಿಳಿಸಿದರು.
ಬೆಂಗಳೂರಿನ ಮೂಲಸೌಕರ್ಯಗಳ ಬಗ್ಗೆ ಕಿರಣ್ ಮಜುಂದಾರ್ ಷಾ ಅವರು ಟ್ವೀಟ್ ಮೂಲಕ ಟೀಕೆ ಮಾಡುವ ವಿಚಾರವಾಗಿ ಕೇಳಿದಾಗ, ಅವರು ತಮ್ಮ ಟ್ವೀಟ್ ಮಾಡುವ ಮೂಲಕ ಅವರಿಗೆ ನೆರವಾಗಿರುವ ದೇಶ ಹಾಗೂ ರಾಜ್ಯಕ್ಕೆ ಧಕ್ಕೆ ತರುತ್ತಿದ್ದಾರೆ. ಅವರ ಟೀಕೆ ತಮಗೆ ತಾವೇ ಹಾಗೂ ಈ ನಗರಕ್ಕೆ ದ್ರೋಹ ಬಗೆದುಕೊಂಡಂತೆ. ಕಳೆದ 25 ವರ್ಷಗಳಿಂದ ಅವರು ಎಲ್ಲಿದ್ದರು? ಅವರ ಬೆಳವಣಿಗೆಯಲ್ಲಿ ಹೆಚ್ಚಿನ ಕೊಡುಗೆ ನೀಡಿರುವುದು ಬೆಂಗಳೂರು. ಬೆಂಗಳೂರು ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿ, ಉದ್ಯಮಿಗಳನ್ನು ದೊಡ್ಡ ಮಟ್ಟಕ್ಕೆ ಬೆಳೆಸಿದೆ. ಟೀಕಿಸುವವರಿಗೆ ಸರ್ಕಾರಗಳು ಎಷ್ಟು ಜಾಗ ಕೊಟ್ಟಿದೆ, ಎಷ್ಟು ನೆರವು ನೀಡಿದೆ ಎಂಬುದನ್ನು ಸ್ಮರಿಸಬೇಕು ಎಂದು ಕಿಡಿಕಾರಿದರು.
ರಸ್ತೆಗುಂಡಿ ಮುಚ್ಚುವ ಬಗ್ಗೆ ಕೇಳಿದಾಗ, ನಾವು ನಮ್ಮ ಕೈಯಲ್ಲಾದಷ್ಟು ನಾವು ಮಾಡುತ್ತಿದ್ದೇವೆ. ನಾವು ಮಹದೇವಪುರ ಹಾಗೂ ಕೆ.ಆರ್ ಪುರವನ್ನೇ ಪ್ರತ್ಯೇಕ ಪಾಲಿಕೆ ಮಾಡಿದ್ದು, ಇಲ್ಲೇ ಐಟಿ ಹಬ್ ಇವೆ. ಕೇವಲ 50 ವಾರ್ಡ್ ಗಳನ್ನು ಹೊಂದಿರುವ ಈ ಪಾಲಿಕೆ ತನ್ನ ಆದಾಯವನ್ನು ತಾನೇ ಬಳಸಿಕೊಳ್ಳಬಹುದಾಗಿದೆ. ಬೇರೆ ಪ್ರದೇಶಗಳ ಜೊತೆ ಹಂಚಿಕೊಳ್ಳುವ ಪ್ರಮೇಯವಿಲ್ಲ. ಈ ಭಾಗದ ಜನಸಂಖ್ಯೆ, ಅವರ ಸಮಸ್ಯೆಗಳೇನು ಎಂದು ನಮಗೆ ಅರಿವಿದೆ. ಅವರಿಗೆ ನೆರವಾಗಬೇಕು ಎಂದು ನಾವು ಈ ಕ್ರಮ ಕೈಗೊಂಡಿದ್ದೇವೆ.
ಐಟಿಯಿಂದ ಬರುವ ಒಂದೂವರೆ ಸಾವಿರ ಕೋಟಿ ಆದಾಯವನ್ನು ಈ ವಾರ್ಡ್ ಗಳ ಅಭಿವೃದ್ಧಿಗೆ ಬಳಸಬಹುದಾಗಿದೆ. ಆಮೂಲಕ ಆ ಭಾಗದ ಅಭಿವೃದ್ಧಿಗೆ ನಾವು ಕ್ರಮ ಕೈಗೊಂಡಿದ್ದೇವೆ. ಇದಕ್ಕಾಗಿಯೇ ನಾವು ಜಿಬಿಎ ಮಾಡಿ ಆಮೂಲಕ ಬೆಂಗಳೂರಿನಲ್ಲಿ ಐದು ಪಾಲಿಕೆಗಳನ್ನು ರಚಿಸಿದ್ದೇವೆ. ಇನ್ನು ಎಲ್ಲಾ ಸಂಸ್ಥೆಗಳು ತಮ್ಮ ಸಿಎಸ್ಆರ್ ನಿಧಿಯನ್ನು ಏನು ಮಾಡುತ್ತಿವೆ ಎಂದು ಬಹಿರಂಗಪಡಿಸಲಿ. ನಾನು ಯಾರನ್ನು ಪ್ರಶ್ನೆ ಮಾಡುವುದಿಲ್ಲ. ಎಲ್ಲರೂ ಸ್ವಲ್ಪ ತಾಳ್ಮೆಯಿಂದ ಇರಬೇಕು. ನಿಮಗೆ ಟ್ವೀಟ್ ಮಾಡಿ ನಮ್ಮನ್ನು ಬೆದರಿಸುವುದೇ ಮುಖ್ಯವಾದರೆ, ಅದು ಅವರಿಗೆ ಬಿಟ್ಟ ವಿಚಾರ. ನಮ್ಮದು ಪ್ರಗತಿಪರ ಸರ್ಕಾರ. ಪ್ರಧಾನಮಂತ್ರಿಗಳೇ ಬೆಂಗಳೂರನ್ನು ಜಾಗತಿಕ ನಗರ ಎಂದು ಹೇಳಿರುವಾಗ ಇವರು ಪ್ರಧಾನಮಂತ್ರಿ ಹೇಳಿಕೆಗೆ ತದ್ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ.












Click it and Unblock the Notifications