B Khata: ಬೆಂಗಳೂರಿನಲ್ಲಿ ಇ ಖಾತಾ ಹೊಂದಿಲ್ಲದ ಆಸ್ತಿಗಳಿಗೆ ಬಿ ಖಾತೆ : ಡಿ ಕೆ ಶಿವಕುಮಾರ್ ಏನಂದ್ರು?
ಬೆಂಗಳೂರು, ಜನವರಿ 28: ಬೆಂಗಳೂರಿನಲ್ಲಿ ಇ ಖಾತಾ ಹೊಂದಿಲ್ಲದ ಆಸ್ತಿಗಳಿಗೆ ಬಿ ಖಾತೆ ನೀಡುವಾಗಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಇಡೀ ದೇಶದಲ್ಲಿಯೇ ಇಲ್ಲದ ಕ್ರಾಂತಿಕಾರಕ ವ್ಯವಸ್ಥೆ ಬೆಂಗಳೂರಿನಲ್ಲಿ ಬರಲಿದೆ. ಮುಂದಿನ ವಾರದಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ನಗರದ ಕಾವೇರಿ ಭವನದಲ್ಲಿ ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ಎಸ್ ಬಿ, ಬಿಎಂ ಆರ್ ಡಿ ಎ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿ.ಕೆ. ಶಿವಕುಮಾರ್ ಅವರು, ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ, ಮುಂಬರುವ ಬೇಸಿಗೆ ವೇಳೆಗೆ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗಬಾರದು ಎನ್ನುವ ಸೂಚನೆ ನೀಡಲಾಗಿದೆ. ಜೊತೆಗೆ ಅಂತರ್ಜಲ ಹೆಚ್ಚಳಕ್ಕೆ ಯಾವುದಾದರೂ ಕೆರೆ ತುಂಬಿಸಬೇಕಿದ್ದರೆ ಈ ಕುರಿತು ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಕಾವೇರಿ 5 ನೇ ಹಂತದ ಕುಡಿಯುವ ನೀರಿನ ಯೋಜನೆಯಡಿ ಇದುವರೆಗೂ ಸುಮಾರು 15 ಸಾವಿರ ಹೊಸ ಸಂಪರ್ಕಗಳನ್ನು ನೀಡಲಾಗಿದೆ. ಇನ್ನೂ 20 ಸಾವಿರದಷ್ಟು ನೀರಿನ ಸಂಪರ್ಕಗಳನ್ನು ನೀಡಬೇಕಾಗಿದೆ. ಅಲ್ಲದೇ ಸಾಕಷ್ಟು ವಸತಿ ಸಮುಚ್ಚಯಗಳು ನೀರಿನ ಸಂಪರ್ಕಗಳನ್ನು ತೆಗೆದುಕೊಳ್ಳುತ್ತಿಲ್ಲ. ಅವರೆಲ್ಲಾ ಕಡ್ಡಾಯವಾಗಿ ಸಂಪರ್ಕ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದರು.
"ಸಾರ್ವಜನಿಕರ ಉಪಯೋಗಕ್ಕೆ ಎಂದು ಸರ್ಕಾರ ಹಣ ಖರ್ಚು ಮಾಡಿದೆ. ಅನೇಕ ಕಡೆ ಸೇವಾ ಶುಲ್ಕ, ಠೇವಣಿ ಶುಲ್ಕ ಸೇರಿದಂತೆ ಇತರೇ ಶುಲ್ಕಗಳನ್ನು ಕಟ್ಟಬೇಕು ಎಂದು ಅಕ್ರಮವಾಗಿ ಸಂಪರ್ಕ ಪಡೆದಿದ್ದಾರೆ. ಇದನ್ನು ತಡೆಯಲು ಸರ್ಕಾರ ಈಗಾಗಲೇ ಕಠಿಣ ಕ್ರಮ ತೆಗೆದುಕೊಂಡಿದೆ. ಪ್ರತಿಯೊಂದು ಮನೆ, ವಸತಿ ಸಮುಚ್ಚಯಕ್ಕೆ ಹೋಗಿ ಜನರಿಗೆ ತಿಳುವಳಿಕೆ ಮೂಡಿಸಿ ನೀರಿನ ಸಂಪರ್ಕ ಪಡೆದುಕೊಳ್ಳುವಂತೆ ಮನವಿ ಮಾಡಲು ಸೂಚನೆ ನೀಡಿದ್ದೇನೆ" ಎಂದು ಹೇಳಿದರು.
ನೀರಿನ ದರವನ್ನು ಎಷ್ಟು ಏರಿಕೆ ಮಾಡಲಾಗುವುದು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಂಡಳಿಗೆ 1 ಸಾವಿರ ಕೋಟಿ ನಷ್ಟವಾಗುತ್ತಿದೆ. ಚರ್ಚೆಯ ನಂತರ ಬೆಲೆ ಏರಿಕೆ ಬಗ್ಗೆ ತಿಳಿಸಲಾಗುವುದು. ಇದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಬಡವರು ಹೆಚ್ಚು ಹಣ ನೀಡಲು ಆಗದಿದ್ದರೆ ಒಂದು ಲೀಟರ್ ಗೆ ಒಂದು ಪೈಸೆಯಾದರೂ ನೀಡಲಿ ಎಂಬುದು ನಮ್ಮ ಅಭಿಲಾಷೆ. ಇದರಿಂದ ನೀರಿನ ಬಳಕೆಯ ಲೆಕ್ಕ ದೊರೆಯಲಿ ಎನ್ನುವುದು ಇದರ ಉದ್ದೇಶ ಎಂದರು.
ವಿದ್ಯುತ್ ಬೆಲೆ ಕಡಿಮೆ ಮಾಡಿದ್ದೇವೆ
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿದ್ಯುತ್ ದರವನ್ನು ಕಡಿಮೆ ಮಾಡಿದೆ. ಬೆಲೆ ಏರಿಕೆಗೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದ ಇದೆಲ್ಲ ಆಗುತ್ತಿದೆ. ನೌಕರರಿಗೆ ಶೇ. 10 ರಷ್ಟು ಸಂಬಳ ಏರಿಕೆ, ಡಿಎ ಏರಿಕೆ ಮಾಡಲಾಗುತ್ತಿದೆಯಲ್ಲವೇ? ಏನೂ ಇಲ್ಲದೇ ಇನ್ನೆಷ್ಟು ದಿನ ಕಡಿಮೆ ಬೆಲೆಗೆ ನೀಡಲು ಆಗುತ್ತದೆ. ಮಂಡಳಿಯಲ್ಲಿ ನೌಕರರು ಸಂಬಳ ನೀಡಿಲ್ಲ ಎಂದು ಜಗಳ ಮಾಡುತ್ತಿದ್ದಾರೆ ಎಂದರು.
ಬಿಡ್ಬ್ಯೂಎಸ್ಎಸ್ ಬಿಯಲ್ಲಿಯೂ ಓಟಿಎಸ್ ವ್ಯವಸ್ಥೆ ತರಲಾಗುವುದೇ ಎಂದು ಕೇಳಿದಾಗ, "ಇದರ ಬಗ್ಗೆ ಆಲೋಚನೆ ಮಾಡಲಾಗುತ್ತಿದೆ. ನೀರಿನ ಬಿಲ್ ಬಾಕಿ ಇಟ್ಟುಕೊಂಡಿರುವವರಿಗೆ ಈ ವ್ಯವಸ್ಥೆ ತರಲು ಅಧಿಕಾರಿಗಳಿಗೆ ವರದಿ ನೀಡಿ ಎಂದು ಸೂಚಿಸಿದ್ದೇನೆ ಎಂದು ತಿಳಿಸಿದರು.
ಫೆಬ್ರವರಿ ಅಂತ್ಯಕ್ಕೆ ಟನಲ್ ರಸ್ತೆ ಟೆಂಡರ್
ಸುರಂಗ ರಸ್ತೆ ನಿರ್ಮಾಣಕ್ಕಾಗಿ ರೂ. 17,780 ಕೋಟಿ ಮೊತ್ತದ ಟೆಂಡರ್ ಅನ್ನು ಫೆಬ್ರವರಿ ಅತ್ಯಂದ ವೇಳೆಗೆ ಕರೆಯಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಜೊತೆಗೆ ಮೂರುವರೆ ವರ್ಷಗಳ ಒಳಗಾಗಿ ಮುಗಿಯಬೇಕು ಎಂದು ತಿಳಿಸಿದ್ದೇನೆ. ಎರಡು ಹಂತದಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು. ಬಿಬಿಎಂಪಿಯಿಂದಲೂ ಹಣ ನೀಡಲಾಗುವುದು. ಸರ್ಕಾರದಿಂದಲೂ ಅನುದಾನ ನೀಡಲಾಗುವುದು. ಪವರ್ ಫೈನಾನ್ಸ್ ಕಾರ್ಪೋರೇಷನ್, ಹುಡ್ಕೋ ಸೇರಿದಂತೆ ಒಂದಷ್ಟು ಬ್ಯಾಂಕ್ ಗಳು ಸಾಲ ನೀಡಲು ಮುಂದೆ ಬಂದಿವೆ. ಇದಕ್ಕೂ ಹರಾಜು ಪ್ರಕ್ರಿಯೆ ಕರೆಯಲಾಗಿದೆ. ಯಾರು ಕಡಿಮೆ ಬಡ್ಡಿದರಕ್ಕೆ ಹಣ ನೀಡುತ್ತಾರೋ ಅವರಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದರು.
ಟನಲ್ ರಸ್ತೆ ಬೇಡ ಎಂದು ಸಂಸದ ಪಿ.ಸಿ.ಮೋಹನ್ ಪತ್ರ ಬರೆದಿರುವ ಬಗ್ಗೆ ಕೇಳಿದಾಗ, "ಇದರಿಂದ ಯಾರ ಭೂಮಿಯೂ ಹೋಗುವುದಿಲ್ಲ. ಭೂಮಿಯ ಕೆಳಗೆ ಹೋಗುತ್ತದೆ" ಎಂದರು. ಅರಮನೆ ಮೈದಾನದಲ್ಲಿ ಸುರಂಗ ರಸ್ತೆ ಬರುತ್ತದೆಯೇ ಎಂದು ಮರು ಪ್ರಶ್ನಿಸಿದಾಗ, "ಎಲ್ಲಿ ಬಂದರೂ ಭೂಮಿಯ ಒಳಗಡೆ ಬರುತ್ತದೆ" ಎಂದರು.












Click it and Unblock the Notifications