DK Shivakumar: ಖಾಸಗಿ ಸಾರಿಗೆ ಒಕ್ಕೂಟದಿಂದ ಸೆ 11 ರಂದು ಬಂದ್ ಗೆ ಕರೆ: ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 02: ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆಗಳಿಗೆ ತೊಂದರೆಯಾಗಿ ಸೆಪ್ಟೆಂಬರ್ 11 ರಂದು ಬಂದ್ಗೆ ಕರೆ ನೀಡಿದ್ದು, ಈ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ನಡೆಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಶನಿವಾರ ಸದಾಶಿವನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹೌದು ಖಾಸಗಿ ಬಸ್ ಮಾಲೀಕರಿಗೆ ತೊಂದರೆಯಾಗಿರುವುದು ನನ್ನ ಗಮನಕ್ಕೂ ಬಂದಿದೆ. ನಾನು ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರನ್ನು ಭೇಟಿಯಾಗಿ ಇದಕ್ಕೆ ಪರಿಹಾರ ಕಂಡು ಹಿಡಿಯುತ್ತೇವೆ ಎಂದು ಹೇಳಿದ್ದಾರೆ.

ಅಲ್ಲದೇ ಅನೇಕ ಊರುಗಳಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಸಂಪರ್ಕವೇ ಇಲ್ಲ, ಅವರೆಲ್ಲಾ ಖಾಸಗಿ ಬಸ್ಗಳನ್ನೇ ಅವಲಂಬಿಸಿದ್ದಾರೆ, ಆದ ಕಾರಣ ಒಂದು ಪರಿಹಾರ ಸೂತ್ರ ಕಂಡುಹಿಡಿಯಲಾಗುವುದು. ನನ್ನನ್ನೂ ಸಹ ಖಾಸಗಿ ಬಸ್ ಮಾಲೀಕರು ಭೇಟಿಯಾಗಿ ತಮ್ಮ ಅಹವಾಲು ಸಲ್ಲಿಸಿದ್ದರು, ಈ ಸಮಸ್ಯೆ ಬೇಗ ಬಗೆಹರಿಸಲಾಗುವುದು ಎಂದು ಮಾಧ್ಯಮಗಳ ಮೂಲಕ ಭರವಸೆ ನೀಡಿದ್ದಾರೆ.
ಶಾಸಕ ಬಸವರಾಜ ರಾಯರೆಡ್ಡಿ ಅವರು ಸಿಎಂಗೆ ಬರೆದಿರುವ ಪತ್ರದ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಶಾಸಕರದ್ದು ಒಂದಷ್ಟು ಬೇಡಿಕೆಗಳು, ತೊಂದರೆಗಳು ಇರುತ್ತವೆ, ಅವುಗಳನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಳ್ಳಬಾರದೇ? ಶಾಸಕರು ತಮ್ಮ ನೋವು ಸಮಸ್ಯೆ ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ? ಎಂದು ಡಿ. ಕೆ.ಶಿವಕುಮಾರ್ ಪ್ರಶ್ನಿಸಿದ್ದು, ನಮ್ಮ ಪಕ್ಷದ ಒಳಗೆ ಶಿಸ್ತು ಇದೆ ಯಾವುದೇ ತೊಂದರೆ ಇಲ್ಲ. ಯಾವ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿಲ್ಲ, ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದು ಹೇಳಿದರು.
ಇಸ್ರೋ ಸೂರ್ಯಯಾನಕ್ಕೆ ಶುಭವಾಗಲಿ
ಚಂದ್ರಯಾನದ ಯಶಸ್ಸಿನ ನಂತರ ಸೂರ್ಯಯಾನ ಮಾಡುತ್ತಿರುವ ಇಸ್ರೋಗೆ ಅಭಿನಂದನೆಗಳು. ಕರ್ನಾಟಕದಿಂದ ಭಾರತಕ್ಕೆ ಗೌರವ ತರುವಂತಹ ಕೆಲಸವನ್ನು ನಮ್ಮ ಇಸ್ರೋ ವಿಜ್ಞಾನಿಗಳು ಮಾಡುತ್ತಿದ್ದಾರೆ. ಪ್ರಯೋಗ, ಪ್ರಯತ್ನ, ಸಾಹಸ ಎಲ್ಲವನ್ನು ಮಾಡುತ್ತಿದ್ದಾರೆ. "ಬಹಳ ಕಷ್ಟಪಟ್ಟು ತಮ್ಮ ಬುದ್ದಿ ಶಕ್ತಿಯನ್ನೆಲ್ಲಾ ಬಳಸಿ ಈ ಕೆಲಸ ಮಾಡುತ್ತಿರುವ ಅವರ ಮತ್ತೊಂದು ಸಾಹಸ ಯಶಸ್ಸು ಕಾಣಲಿ ಎಂದು ಶುಭ ಹಾರೈಸಿದರು.












Click it and Unblock the Notifications