Karnataka New CM: ಸಿದ್ದರಾಮಯ್ಯಗೆ ಸಿಎಂ ಸ್ಥಾನ ಅಂತಿಮ ನಾ?; ಪತ್ರಕರ್ತರ ಪ್ರಶ್ನೆಗೆ ಡಿ ಕೆ ಶಿವಕುಮಾರ್ ಹೇಳಿದ್ದೇನು?
ಕರ್ನಾಟಕ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರವೇ ಕಾಂಗ್ರೆಸ್ ಹೈಕಮಾಂಡ್ ಗೆ ದೊಡ್ಡ ಕಗ್ಗಂಟಾಗಿದೆ. ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡು ನಾಲ್ಕು ದಿನಗಳಾದರೂ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ದಿನೇ ದಿನೇ ಚರ್ಚೆಗಳೇ ಹೆಚ್ಚಾಗುತ್ತಿದ್ದು, ಮುಖ್ಯಮಂತ್ರಿ ಆಯ್ಕೆಯ ಕಗ್ಗಂಟು ಮುಂದುವರಿದಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಡುಗೆ ಹಗ್ಗಜಗ್ಗಾಟ ಮುಂದುವರೆದಿದ್ದು, ಹೊಸ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಆಯ್ಕೆ ಬಹುತೇಕ ಖಚಿತ ಎನ್ನಲಾಗಿತ್ತು. ಇನ್ನೂ ಇದೇ ವಿಚಾರಕ್ಕೆ ಮಾಧ್ಯಮಗಳ ಜೊತೆಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಇದೆಲ್ಲಾ ಗಾಸಿಪ್, ಬೋಗಸ್ ಸುದ್ದಿ, ನಾನು ಏನು ಮಾತನಾಡಲ್ಲ ಎಂದು ಹೇಳಿದ್ದಾರೆ.

ಇನ್ನೂ ಕಳೆದ ಎರಡು ದಿನಗಳಿಂದ ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ವಿಚಾರ ದೆಹಲಿ ಅಂಗಳವನ್ನ ತಲುಪಿದ್ದು, ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಜೊತೆ ಡಿ ಕೆ ಶಿವಕುಮಾರ್ ಜೊತೆಗೆ ಚರ್ಚೆ ನಡೆಸಿದ ಬಳಿಕ ಸಹೋದರ ಡಿಕೆ ಸುರೇಶ್ ಅವರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರಶ್ನಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಸಿದ್ದರಾಮಯ್ಯ ಸಿಎಂ ಎನ್ನುವ ವಿಚಾರ ವದಂತಿ ಅಷ್ಟೇ ಎನ್ನುವ ಮೂಲಕ ಇನ್ನೂ ಪೈಪೋಟಿ ಮುಂದುವರಿದಿದೆ.
ಇತ್ತ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಮುಖ್ಯಮಂತ್ರಿ ಯಾರಾಗ್ತಾರೆ ಎಂಬುದು ಇನ್ನು ಅಂತಿಮವಾಗಿಲ್ಲ. ಯಾವುದೇ ಊಹಾಪೋಹಗಳಿಗೆ ಯಾರು ಕಿವಿಗೊಡಬಾರದು ಎಂದು ಹೇಳಿದ್ದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ. ಕಾಂಗ್ರೆಸ್ ಈ ಬಗ್ಗೆ ನಿರ್ಧಾರ ತೆಗೆದುಕೊಂಡ ತಕ್ಷಣ ನಿಮಗೆ ತಿಳಿಸುತ್ತೇವೆ. ಮುಂದಿನ 48 ರಿಂದ 72 ಗಂಟೆಯಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆ ಆಗಲಿದೆ ಎಂದು ಹೇಳಿದ್ದರು.
ಸಂಸದ ಡಿ ಕೆ ಸುರೇಶ್ ಅವರ ನಿವಾಸದ ಬಳಿ ವಿಧಾನ ಪರಿಷತ್ ಸದಸ್ಯ ಎಂಎಲ್ಸಿ ರವಿ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಇನ್ನೂ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ನಿರ್ಧಾರವಾಗಿಲ್ಲ. ಇನ್ನು ಅಂತಿಮ ನಿರ್ಧಾರಕ್ಕೆ ಬರಲು ಎರಡು ದಿನಗಳು ಆಗಬಹುದು, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಆದ ಸಿದ್ದರಾಮಯ್ಯ ಅವರು ಖುಷಿಯಾಗಿದ್ದಾರೆ. ಯಾವುದೇ ಬೇಸರವಿಲ್ಲ, ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.












Click it and Unblock the Notifications