ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಕುರಿತು ಮಹತ್ವದ ಹೇಳಿಕೆ ನೀಡಿದ ಡಿ ಕೆ ಶಿವಕುಮಾರ್
ಬೆಂಗಳೂರು, ಫೆಬ್ರವರಿ 14: ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಹುತೇಕ ಅಂತಿಮ ಹಂತಕ್ಕೆ ತೆಗೆದುಕೊಂಡು ಹೋಗುತ್ತೇವೆ. ಈ ವಿಚಾರವಾಗಿ ನಾನು ಮತ್ತು ಮುಖ್ಯಮಂತ್ರಿಗಳು ಒಂದು ಸುತ್ತಿನ ಮಾತುಕಥೆ ನಡೆಸಿದ್ದೇವೆ. ಈಗ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಜತೆ ಸಭೆ ಮಾಡುತ್ತೇವೆ, ನಂತರ ಸ್ಕ್ರೀನಿಂಗ್ ಸಮಿತಿ ಸದಸ್ಯರು ಚರ್ಚಿಸಿ ಹೈಕಮಾಂಡಿಗೆ ಪಟ್ಟಿ ಕಳಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಈ ಕುರಿತು ಬುಧವಾರ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿದ ಅವರು, ರಾಜ್ಯಸಭೆಗೆ ನಾವು ಹೆಸರುಗಳನ್ನು ಸೂಚಿಸುತ್ತೇವೆ. ನಂತರ ಹೈಕಮಾಂಡ್ ಅಂತಿಮ ತೀರ್ಮಾನ ಮಾಡಲಿದೆ ಎಂದುಹೇಳಿದರು.

40 ಪರ್ಸೆಂಟ್ ಕಮಿಷನ್ ವಿಚಾರವಾಗಿ ತನಿಖೆ ನಿಧಾನಗತಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಹೈಕೋರ್ಟ್ ಅಭಿಪ್ರಾಯವನ್ನು ಗೌರವಿಸುತ್ತೇವೆ. ನಾವು ತನಿಖೆಯನ್ನು ಸಮಿತಿಗೆ ನೀಡಿದ್ದು, ಅವರ ಕರ್ತವ್ಯ ಅವರು ಮಾಡುತ್ತಾರೆ ಎಂದು ಹೇಳಿದರು.
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹೆಚ್ಚುತ್ತಿದ್ದು, ಕಚೇರಿ ತೆರೆಯಲು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಎನ್ನುವ ಪ್ರಶ್ನೆಗೆ ಅವರು ಉತ್ತರಿಸಿ, ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ.

ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಬೆಳಗಾವಿಯ ಗ್ರಾಮೀಣ ಭಾಗದ ಜನರಿಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲತೆಗಳನ್ನು ಕಲ್ಪಿಸಿಕೊಟ್ಟಿದೆ. ಅವರು ನಮ್ಮ ನೀರು, ಗಾಳಿ ಕುಡಿಯುತ್ತಿದ್ದಾರೆ. ನಮ್ಮ ಭೂಮಿಯಲ್ಲಿ ವಾಸವಾಗಿದ್ದಾರೆ, ವ್ಯವಸಾಯ ಮಾಡುತ್ತಿದ್ದಾರೆ. ಈ ಬಜೆಟ್ ಅಲ್ಲಿ ಬೆಳಗಾವಿ ಗ್ರಾಮೀಣ ಭಾಗದ ಕೃಷಿ ಭೂಮಿಗಳಿಗೆ ನೀರನ್ನು ಒದಗಿಸಲು ರೂ.900 ಕೋಟಿ ವೆಚ್ಚದಲ್ಲಿ ಯೋಜನೆ ಘೋಷಣೆ ಮಾಡಲಿದ್ದೇವೆ ಎಂದು ಹೇಳಿದರು.












Click it and Unblock the Notifications