ಡಿಕೆ ಶಿವಕುಮಾರ್ಗೆ ಶಾಸಕರ ಬೆಂಬಲ ಇಲ್ಲ, ನಾನೇ ಸಿಎಂ ಎಂದ ಸಿದ್ದರಾಮಯ್ಯ: ಬಂಡೆ ಫಸ್ಟ್ ರಿಯಾಕ್ಷನ್
ಬೆಂಗಳೂರು, ಜುಲೈ 11: ರಾಜ್ಯಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಗುಸು ಗುಸು ಕೇಳಿ ಬರುತ್ತಲೇ ಇದೆ. ಇದರ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ಗೆ ಹೆಚ್ಚು ಶಾಸಕರ ಬೆಂಬಲ ಇಲ್ಲ. ಡಿ.ಕೆ. ಶಿವಕುಮಾರ್ಗೆ ಇರೋ ಬೆಂಬಲಿಗರ ಸಂಖ್ಯೆ ಕಡಿಮೆ ಇದೆ. ಅವರಿಗೆ ಕೆಲವರು ಬೆಂಬಲ ನೀಡಿದ್ದಾರೆ. ಸುರ್ಜೇವಾಲಾ ಯಾರಿಗೂ ಅಧಿಕಾರ ಬದಲಾವಣೆ ಪ್ರಶ್ನೆ ಕೇಳಿಲ್ಲ. ಕೆಲವು ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಷ್ಟೇ ಎಂದು ಸಿದ್ದರಾಮಯ್ಯ ಹೇಳಿಕೆ ಸದ್ಯ ಕೈ ಪಾಳಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಡಿ ಕೆ ಶಿವಕುಮಾರ್ ಅವರು ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ.
ಈ ಕುರಿತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಡಿ ಕೆ ಶಿವಕುಮಾರ್ ಮಾತನಾಡಿ, ನಾನು ಪಕ್ಷದ ರಾಜ್ಯ ಅಧ್ಯಕ್ಷ. ಪಕ್ಷ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇನೆ. ನಾನು ನಿನ್ನೆ ಬ್ಯುಸಿ ಇದ್ದೆ. ಅದರ ಮಧ್ಯೆ ಮುಖ್ಯಮಂತ್ರಿಗಳ ಹೇಳಿಕೆ ನೋಡಿದೆ. ನಿಮ್ಮ ಪ್ರಶ್ನೆಗಳಿಗೆ ಅವರೇ ಉತ್ತರ ನೀಡಿದ್ದಾರೆ. ಅವರು ಉತ್ತರ ನೀಡಿದ ಮೇಲೆ ನಾವು ಮತ್ತೆ ಆ ವಿಚಾರ ಚರ್ಚೆ ಮಾಡುವುದು ಸೂಕ್ತವಲ್ಲ. ನೀವುಗಳು ಸಹ ಮತ್ತೆ ಆ ವಿಚಾರವಾಗಿ ಪ್ರಶ್ನೆ ಮಾಡುವುದು ಸೂಕ್ತವಲ್ಲ ಎಂದು ಹೇಳಿದರು.

ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಬೇಕು ಎಂಬ ಆಸೆ ಅನೇಕರಿಗೆ ಇರುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿ, ನಿಮ್ಮಲ್ಲೂ ಅನೇಕರಿಗೆ ಅನೇಕ ಆಸೆ ಇರುತ್ತವೆ. ನಾನು ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಅದರ ಅವಶ್ಯಕತೆ ಇಲ್ಲ. ಯಾರು ಏನೇನು ಮಾತನಾಡಿದ್ದಾರೆ, ಅವರೇ ಪ್ರಶ್ನೆ ಉತ್ತರ ಎಲ್ಲವನ್ನು ನೀಡಿದ್ದಾರೆ. ಸಧ್ಯಕ್ಕೆ ನಾನು ಯಾವುದೇ ಉತ್ತರ ನೀಡುವುದಿಲ್ಲ ಎಂದು ತಿಳಿಸಿದರು.
ನೀರಾವರಿ ಯೋಜನೆಗಳ ವಿಚಾರವಾಗಿ ದೆಹಲಿ ಪ್ರವಾಸ ಬಹುತೇಕ ಫಲಪ್ರದವಾಗಿದ್ದು, ಎತ್ತಿನಹೊಳೆ ಯೋಜನೆ ಸಂಬಂಧ ನಮ್ಮ ಮನವಿಯನ್ನು ಪುರಸ್ಕರಿಸುವುದಾಗಿ ಹೇಳಿದ್ದಾರೆ. ದೆಹಲಿ ಪ್ರವಾಸದಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಸಂಬಂಧ ಅಧಿಸೂಚನೆ ಹೊರಡಿಸುವುದು, ಮೆಕೆದಾಟು ಯೋಜನೆ ಅಪ್ರೈಸಲ್ ವರದಿ ಬಗ್ಗೆ ಚರ್ಚಿಸಲಾಗಿದೆ. ಅರಣ್ಯ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಕಳಸಾ ಬಂಡೂರಿ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಈ ವಿಚಾರವಾಗಿ ಪ್ರಹ್ಲಾದ್ ಜೋಷಿ ಅವರ ಜತೆಗೂ ಮಾತನಾಡಿದ್ದೇನೆ.
ಎರಡು ರಾಜ್ಯಗಳ ನಡುವೆ ರಾಜಿಗೆ ಸಲಹೆ ನೀಡಿದ್ದಾರೆ. ನಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ವಿಚಾರದಲ್ಲಿ ಕೆಲವು ತಾಂತ್ರಿಕ ಅಂಶಗಳಿವೆ. ಗೋವಾ ದವರು ನಮಗೆ ಶೋಕಾಸ್ ನೋಟೀಸ್ ನೀಡಿರುವುದು ಸರಿಯಲ್ಲ ಎಂದು ಹೇಳಿದ್ದು, ಕಾನೂನು ತಜ್ಞರ ಜೊತೆ ಚರ್ಚೆ ಮಾಡಲಾಗಿದೆ. ಜೊತೆಗೆ ಹೊಸ ಯೋಜನೆಗಳಿಗೆ ಮನವಿ ಸಲ್ಲಿಸಿದ್ದೇವೆ. ಸಂಸತ್ ಅಧಿವೇಶನ ಸಂದರ್ಭದಲ್ಲಿ ಮತ್ತೊಮ್ಮೆ ದೆಹಲಿಗೆ ಹೋಗಿ, ರಾಜ್ಯದ ಸಂಸದರ ಜೊತೆ ಚರ್ಚೆ ನಡೆಸಿ ಒಟ್ಟಾಗಿ ಒತ್ತಾಯ ಹೇರಲು ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಎತ್ತಿನಹೊಳೆ ಯೋಜನೆ ಸಂಬಂಧ ಲಕ್ಕೇನಹಳ್ಳಿಯಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಕೇಳಿದಾಗ, "ನೀವು ರಸ್ತೆ, ಅಣೆಕಟ್ಟು ಸೇರಿದಂತೆ ಯಾವುದೇ ಯೋಜನೆ ಮಾಡಬೇಕಾದರೂ ವಿರೋಧ ವ್ಯಕ್ತವಾಗುತ್ತದೆ. ಕುಡಿಯುವ ನೀರು ಪೂರೈಸಲೇಬೇಕು. ಈ ನೀರನ್ನು ಎಲ್ಲಾದರೂ ಸಂಗ್ರಹ ಮಾಡಿಕೊಳ್ಳಬೇಕು. ಲಕ್ಕೇನಹಳ್ಳಿ ಮಾತ್ರವಷ್ಟೇ ಅಲ್ಲ, ಕೊರಟಗೆರೆ ಭಾಗದಲ್ಲಿ ಕೆಲವು ಪ್ರದೇಶ ಬಳಸಿಕೊಳ್ಳಬೇಕು ಎಂದು ಆಲೋಚಿಸಿದ್ದೆವು. ನೀರು ಹೇಗೆ ಹರಿಯುತ್ತದೆ ಹೇಳಲು ಸಾಧ್ಯವಿಲ್ಲ. ಈ ವಿಚಾರವಾಗಿ ಪರಮೇಶ್ವರ್ ಅವರ ಜತೆ ಚರ್ಚಿಸಿ, ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ಹೈಕಮಾಂಡ್ ಭೇಟಿಯಾಗಿ ಯಾವೆಲ್ಲಾ ರಾಜಕೀಯ ಚರ್ಚೆ ನಡೆಯಿತು ಎಂದ ಪ್ರಶ್ನೆಗೆ ಉತ್ತರಿಸಿ, ಯಾವ ರಾಜಕೀಯ ಚರ್ಚೆಯಾಗಿದೆ? ನಮ್ಮ ಕಾರ್ಯಕರ್ತರಿಗೆ ಕೆಲವು ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ಮಾಡಲಾಗಿದೆ. ಎಲ್ಲಾ ಶಾಸಕರು ತಮ್ಮ ಅಭಿಪ್ರಾಯ ಸಲ್ಲಿಸಿದ್ದಾರೆ. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ವಿಚಾರದಲ್ಲಿ ಶ್ರಮಿಸಿರುವವರಿಗೆ ಹಾಗೂ ಕೆಲವರಿಗೆ ನಾವು ಕೊಟ್ಟಿರುವ ಮಾತಿಗೆ ಬದ್ಧವಾಗಿ ಸ್ಥಾನಮಾನ ನೀಡಬೇಕಿದೆ. ಇದು ಅಂತಿಮ ಹಂತಕ್ಕೆ ಬಂದಿದೆ. ಇದರ ಪ್ರಸ್ತಾವನೆಯನ್ನು ಮತ್ತೊಮ್ಮೆ ದೆಹಲಿಗೆ ಕಳುಹಿಸಿ ಅನುಮತಿ ಪಡೆಯಲಾಗುವುದು ಎಂದರು.












Click it and Unblock the Notifications