ಪಕ್ಷದ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ಮಾಡಲ್ಲ, 2028ರ ಚುನಾವಣೆ ಸಹ ನಮ್ಮ ಗುರಿ: ಡಿಕೆಶಿ
ಬೆಂಗಳೂರು, ಆಗಸ್ಟ್ 14: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಇದನ್ನು ಸಹಿಸಲಾಗದೇ ಬಿಜೆಪಿಯವರು ಸರ್ಕಾರದ ಮೇಲೆ ಸುಳ್ಳು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಬೇರೆಯವರಿಗೆ ಹೆದರಿಸಿದಂತೆ ನನಗೆ ಹೆದರಿಸಲು ಸಾಧ್ಯವಿಲ್ಲ. ಇದಕ್ಕೆಲ್ಲ ನಾನು ಹೆದರುವುದಿಲ್ಲ. ನಾನು ಎಂದಿಗೂ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ತರುವ, ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಸೋಮವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆ ಉದ್ದೇಶಿಸಿ ಅವರು ಮಾತನಡಿದರು.
ವಿಧಾನಸಭಾ ಚುನಾವಣೆ ಫಲಿತಾಂಶ ಅರಗಿಸಿಕೊಳ್ಳಲು ವಿಪಕ್ಷದವರಿಗೆ ಸಾಧ್ಯವಾಗುತ್ತಿಲ್ಲ. ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ. ಆದರೂ ಸರ್ಕಾರದ ವಿರುದ್ಧ ಅನಗತ್ಯ ಟೀಕೆ ಮಾಡುತ್ತಲಿದ್ದಾರೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕು ಯೋಜನೆ ಜಾರಿ ಮಾಡಿ ಟೀಕಿಸುವವರಿಗೆ ಉತ್ತರ ನೀಡಿದ್ದೇವೆ ಎಂದು ವಿಪಕ್ಷಗಳಿಗೆ ಅವರು ತಿರುಗೇಟು ಕೊಟ್ಟರು.

ಸಚಿವ ಚೆಲುವರಾಯಸ್ವಾಮಿ ಹಾಗೂ ನನ್ನ ವಿರುದ್ಧ ಕಮಿಷನ್ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ. ಬಿಜೆಪಿ ಅಧಿಕಾರ ಅವಧಿಯಲ್ಲಿ ಒಂದು ಕ್ಷೇತ್ರದಲ್ಲಿ, ಕೆಲಸ ಮಾಡದೇ 117 ಕೋಟಿ ಬಿಲ್ ಪಾವತಿ ಮಾಡಲಾಗಿದೆ ಎಂದು ಲೋಕಾಯುಕ್ತ ಸಂಸ್ಥೆ ವರದಿ ಮಾಡಿದೆ. ತನಿಖೆ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಸದನದಲ್ಲಿ ಭರವಸೆ ನೀಡಿದ್ದರು. ಅದರಂತೆ ನಾವು ತನಿಖಾ ಸಮಿತಿ ಮಾಡಿ ತನಿಖೆಗೆ ಆದೇಶಿಸಿದ್ದೇನೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಭ್ರಷ್ಟಾಚಾರದ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಾವು ತನಿಖೆ ಆರಂಭಿಸಿದ್ದೇವೆ. ಈ ತನಿಖೆ ಆರಂಭಿಸಿದ ತಕ್ಷಣ ನಮ್ಮ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದಾರೆ. ಆದರೆ ಪಕ್ಷ, ಸರ್ಕಾರಕ್ಕೆ ಮುಜುಗರ ತರುವ ಕೆಲಸ ನಾನು ಮಾಡಿಲ್ಲ ಎಂದು ಪುನರುಚ್ಚರಿಸಿದರು.
ಬಿಜೆಪಿ ಅಕ್ರಮದ ಬಗ್ಗೆ ಮಾಧ್ಯಮಗೋಷ್ಠಿ ನಡೆಸುವಂತೆ ಮುಖ್ಯಮಂತ್ರಿಗಳು ಹೇಳಿದರು. ಮುಂದಿನ ದಿನಗಳಲ್ಲಿ ಅದನ್ನು ಮಾಡುತ್ತೇನೆ. ಬಿಜೆಪಿ ನಾಯಕರು ಮಾಡಿರುವ ಕಳ್ಳತನ, ರಾಜ್ಯದ ಹಣ ಲೂಟಿಯನ್ನು ಬಯಲು ಮಾಡುವುದು ನಮ್ಮ ಮೊದಲ ಕರ್ತವ್ಯ. ಅವರು ಹೆಣದ ಮೇಲೆ ಹಣ ಮಾಡಿದರು, ಕೋವಿಡ್ ಸಮಯದಲ್ಲಿ ಸಾವಿರಾರು ಕೋಟಿ ಲೂಟಿ ಮಾಡಿದರು. ಎಲ್ಲವನ್ನು ಪತ್ತೆಹಚ್ಚಬೇಕು.
2024ರ ಗೆಲುವು ಮಾತ್ರವಲ್ಲ 2028 ಸಹ ನಮ್ಮ ಗುರಿ: ಡಿಕೆಶಿ
ಕಾಂಗ್ರೆಸ್ ಮುಂದಿನ ಗುರಿ ಕೇವಲ 2024 ಮಾತ್ರವಲ್ಲ 2028 ಕೂಡ ನಮ್ಮ ಗುರಿಯಾಗಿದೆ. ಇದಕ್ಕೆ ನಿಮ್ಮ ಸಹಕಾರ ಮುಖ್ಯ. ನೀವೆಲ್ಲರೂ ತಾಳ್ಮೆಯಿಂದ ಇರಿ. ಮುಂದಿನ ದಿನಗಳಲ್ಲಿ ಕೆಪಿಸಿಸಿಯಲ್ಲಿ ಬದಲಾವಣೆ ಮಾಡಬೇಕಾಗುತ್ತದೆ. ಕೆಲವು ಮಂತ್ರಿಗಳನ್ನು ಬದಲಾಯಿಸಬೇಕಾಗುತ್ತದೆ. ಪಕ್ಷಕ್ಕೆ ಕೊಡುಗೆ ನೀಡದವರನ್ನು ಬದಲಾವಣೆ ಮಾಡಲೇಬೇಕಾಗುತ್ತದೆ. ಬ್ಲಾಕ್ ನಿಂದ ಜಿಲ್ಲಾ ಹಾಗೂ ಕೆಪಿಸಿಸಿ ಮಟ್ಟದವರೆಗೂ ಬದಲಾವಣೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಚೆಲುವರಾಯಸ್ವಾಮಿ ಮೇಲೆ ರಾಜ್ಯಪಾಲರಿಗೆ ನಕಲಿ ಪತ್ರ ಬರೆದಿದ್ದಾರೆ. ಈ ಬಗ್ಗೆ ಕೇವಲ ಸಿ.ಟಿ ರವಿ, ಗೋಪಾಲಯ್ಯ, ಅಶ್ವತ್ಥ್ ನಾರಾಯಣ, ಅಶೋಕ್ ಸೇರಿದಂತೆ ಒಂದು ಗುಂಪು ಮಾತ್ರ ಟೀಕೆ ಮಾಡುತ್ತಾರೆ. ನಮ್ಮ ಗ್ಯಾರಂಟಿ ಯೋಜನೆಗಳಿಗೆ ಜನರು ಖುಷಿ ಪಟ್ಟಿದ್ದಾರೆ. ಆದ್ದರಿಂದ ಕಾರ್ಯಕರ್ತರು ನೀವೆಲ್ಲರು ಗ್ಯಾರಂಟಿ ಯೋಜನೆಯಿಂದ ಸಿಕ್ಕ ಶಕ್ತಿಯನ್ನು ಬಳಸಿಕೊಳ್ಳಿ ಎಂದು ಸಲಹೆ ನೀಡಿದರು.

ಈ ತಿಂಗಳಾಂತ್ಯಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ
ನಾವು ಚುನಾವಣೆ ಸಮಯದಲ್ಲಿ ಅನೇಕ ಹೋರಾಟ ಮಾಡಿದೆವು. ಪ್ರಜಾಧ್ವನಿ ಯಾತ್ರೆ ಆರಂಭಿಸಿ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆವು. ಈ ಯೋಜನೆಗಳು ನಿಮಗೆ ಅತ್ಯಂತ ದೊಡ್ಡ ಶಕ್ತಿ ನೀಡಿದೆ. ನಿಮಗೆ ಸಿಕ್ಕಿರುವ ಈ ಶಕ್ತಿ ಬಗ್ಗೆ ಅರಿವಿದೆಯೋ ಇಲ್ಲವೋ, ಆದರೆ ವಿರೋಧ ಪಕ್ಷದವರಿಗೆ ಅರಿವಾಗಿದೆ. ಬೇರೆ ರಾಜ್ಯದ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಹಾಗೂ ಸ್ಟಾಲಿನ್ ಅವರು ಕೂಡ ನಮ್ಮ ಯೋಜನೆಗಳನ್ನು ಶ್ಲಾಘಿಸಿದ್ದಾರೆ. ಈ ತಿಂಗಳಾಂತ್ಯಕ್ಕೆ 'ಗೃಹಲಕ್ಷ್ಮಿ' ಯೋಜನೆ ಜಾರಿ ಆಗಲಿದೆ ಎಂದು ಡಿಕೆ ಶಿವಕುಮಾರ್ ವಿವರಿಸಿದರು.
ಪಂಚಾಯಿತಿ-ಪಾಲಿಕೆ ಚುನಾವಣೆಗೆ ಸಿದ್ಧರಾಗಲು ಡಿಕೆಶಿ ಕರೆ
ಜಿಲ್ಲೆ, ತಾಲೂಕು ಪಂಚಾಯಿತಿ ಮತ್ತು ಪಾಲಿಕೆ ಚುನಾವಣೆಗಳಲ್ಲಿ ಗೆಲ್ಲುವುದೆ ನಮ್ಮ ಮುಂದಿನ ಸವಾಲು. ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ನಿನ್ನೆ ನ್ಯಾಯಾಲಯದ ಅವಧಿ ಮುಗಿದಿದೆ. ಈ ವಿಚಾರವಾಗಿ ಸಹಿ ಮಾಡಿದ್ದೇವೆ. ಬಿಜೆಪಿ ಸರ್ಕಾರ 243 ವಾರ್ಡ್ ಗಳನ್ನು ಮಾಡಿದ್ದು, ಕಾನೂನು ರೀತಿಯ ವ್ಯತ್ಯಾಸಗಳಿದ್ದವು. ನಾವು ಅದನ್ನು ಸರಿ ಮಾಡಲಿದ್ದೇವೆ. ಯಾವುದೇ ಕ್ಷಣದಲ್ಲಾದರೂ ಚುನಾವಣೆ ಬಂದರೂ ಎದುರಿಸಲು ಸಿದ್ಧರಿರಬೇಕು ಎಂದು ಅವರು ಕರೆ ನೀಡಿದರು.
ಪಕ್ಷ ಅಧಿಕಾರಕ್ಕೆ ಬಂದಿದೆ ನಮಗೆ ಏನು ಸಿಕ್ಕಿದೆ ಎಂಬ ಪ್ರಶ್ನೆ ಇದೆ. ಎಲ್ಲರಿಗೂ ಅಧಿಕಾರ ನೀಡಲು ಪಕ್ಷ ಬದ್ಧವಾಗಿದೆ. ನಾವು ಇನ್ನು ಮುಂದೆ ಎಲ್ಲ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ಆಲೋಚನೆ ಬಿಟ್ಟು ಸರ್ಕಾರದ ನೆರವು ಪಡೆದು ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಬೇಕು. ಒಟ್ಟಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು. ಬ್ಲಾಕ್ ಮಟ್ಟದಲ್ಲಿ ಪಕ್ಷದ ಕಚೇರಿ ನೀರ್ಮಾಣದ ವಿಚಾರದಲ್ಲಿ ರಾಜಿಯಿಲ್ಲ. ನೀವು ಏನು ಮಾಡುತ್ತೀರೋ ಗೊತ್ತಿಲ್ಲ. ಪಕ್ಷದ ಕಚೇರಿ ನಿರ್ಮಾಣವಾಗಲೇ ಬೇಕು. ನಾವು ಜಿಲ್ಲಾ ಮಟ್ಟದಲ್ಲಿ ಗಟ್ಟಿಯಗಬೇಕು ಎಂದು ತಾಕೀತು ಮಾಡಿದರು.












Click it and Unblock the Notifications