14,000 ವ್ಯಾಪಾರಿಗಳಿಗೆ ಜಿಎಸ್ ಟಿ ನೋಟೀಸ್ ಜಾರಿ: ಡಿ ಕೆ ಶಿವಕುಮಾರ್ ಕೊಟ್ಟ ಸೂಚನೆ ಏನು?
ಬೆಂಗಳೂರು, ಜುಲೈ21: ಸಣ್ಣ ವ್ಯಾಪಾರಿಗಳಿಗೆ ಜಿಎಸ್ ಟಿ ನೋಟೀಸ್ ಜಾರಿ ಮಾಡುವ ಮೂಲಕ ಬಿಜೆಪಿಯವರು ತಾವು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.
ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೇಂದ್ರ ಬಿಜೆಪಿ ಸರ್ಕಾರ 2019ರಲ್ಲೇ ವಾರ್ಷಿಕ 40 ಲಕ್ಷಕ್ಕೂ ವಹಿವಾಟು ಮಿತಿ ನಿಗದಿಗೊಳಿಸಿ ಎಲ್ಲಾ ರಾಜ್ಯ ಸರ್ಕಾರಗಳಿಗೂ ಇದನ್ನು ಪಾಲಿಸುವಂತೆ ಆದೇಶ ನೀಡಿದ್ದಾರೆ. ಬಡವರಿಗೆ ಕಿರುಕುಳ ನೀಡುವುದನ್ನು ಬಿಜೆಪಿ ಸರ್ಕಾರ ಹಿಂಪಡೆಯಬೇಕು. ತರಕಾರಿ, ಹಣ್ಣು, ಎಳನೀರು, ಹೂವಿನ ವ್ಯಾಪಾರಿ ಸೇರಿದಂತೆ ಸಣ್ಣಪುಟ್ಟ ವ್ಯಾಪಾರ ಮಾಡುವ ಲಕ್ಷಾಂತರ ಮಂದಿ ಇದ್ದಾರೆ. ಈಗಾಗಲೇ 14 ಸಾವಿರ ವ್ಯಾಪಾರಿಗಳಿಗೆ ನೋಟೀಸ್ ನೀಡಲಾಗಿದೆ. ಈ ಹಿಂದೆಯೇ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಜಿಎಸ್ ಟಿ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ್ದರು. ಈ ವಿಚಾರದಲ್ಲಿ ಜನರಿಗೆ ಹೇಗೆ ನೆರವಾಗಬಹುದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆ ಎಂದು ತಿಳಿಸಿದರು.

ಈ ವಿಚಾರವಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೀರಾ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಖಂಡಿತವಾಗಿ ಬರೆಯುತ್ತೇವೆ. ನಮ್ಮ ಜನರಿಗೆ ನ್ಯಾಯ ಒದಗಿಸಿಕೊಡಬೇಕು. ಅತಿ ಹೆಚ್ಚು ಜಿಎಸ್ ಟಿ ತೆರಿಗೆ ಕಟ್ಟುತ್ತಿರುವ ರಾಜ್ಯ ನಮ್ಮದು. ನಮ್ಮ ಬಡ ಹಾಗೂ ಮಧ್ಯಮ ವ್ಯಾಪಾರಿಗಳಿಗೆ ಇದರಿಂದ ತೊಂದರೆ ಆಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಟಾರ್ಗೆಟ್ ನೀಡಿರುವುದರಿಂದ ಈ ನೋಟೀಸ್ ನೀಡಲಾಗಿದೆ ಎಂದು ಪ್ರಶ್ನೆಗೆ ಉತ್ತರಿಸಿ, ಕೇಂದ್ರ ಜಿಎಸ್ ಟಿ ಕೌನ್ಸಿಲ್ ಯಾವ ನಿಯಮ ರೂಪಿಸುತ್ತಾರೋ ಅದರಂತೆ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ. ಕೇಂದ್ರದ ಸಮಿತಿಯ ಒತ್ತಡದ ಮೇರೆಗೆ ಈ ನೋಟೀಸ್ ನೀಡಲಾಗಿದೆ ಎಂದು ಹೇಳಿದರು.
ಸುರ್ಜೆವಾಲ ಅವರು ಮತ್ತೆ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ಬಗ್ಗೆ ಮಾಹಿತಿ ನೀಡಿದ್ದು, ಜುಲೈ 25ಕ್ಕೆ ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸ ಮಾಡುತ್ತಿದ್ದೇವೆ. ಇನ್ನು ಸಂಸತ್ ಅಧಿವೇಶನ ನಡೆಯುತ್ತಿದೆ. ನನಗೆ ಗೊತ್ತಿರುವ ಮಾಹಿತಿ ಇಷ್ಟೆ ಎಂದು ತಿಳಿಸಿದರು. ಧರ್ಮಸ್ಥಳ ವಿಚಾರ ಎಸ್ ಐಟಿ ರಚನೆ ವಿಚಾರವಾಗಿ ಪರ ವಿರೋಧ ಚರ್ಚೆ ಆಗುತ್ತಿದೆ. ಇದನ್ನು ಗೃಹ ಸಚಿವರು ನಿಭಾಯಿಸುತ್ತಿದ್ದು, ಬಹಳ ಹಿರಿಯ ಅಧಿಕಾರಿಗಳನ್ನು ಎಸ್ ಐಟಿ ತಂಡದಲ್ಲಿ ನಿಯೋಜಿಸಿದ್ದಾರೆ. ತನಿಖೆ ನಂತರ ಸತ್ಯಾಸತ್ಯತೆ ತಿಳಿಯುತ್ತದೆ ಎಂದರು.
ಸ್ಥಳೀಯ ಪೊಲೀಸ್ ತನಿಖೆ ನಂತರ ಎಸ್ ಐಟಿ ರಚನೆ ಬಗ್ಗೆ ತೀರ್ಮಾನ ಎಂದು ಸಿಎಂ ಹೇಳಿದ ಬೆನ್ನಲ್ಲೇ ದಿಢೀರನೆ ಎಸ್ ಐಟಿ ರಚನೆಯಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಾಧ್ಯಮಗಳು ಈ ವಿಚಾರವನ್ನು ದೊಡ್ಡದಾಗಿ ಬಿಂಬಿಸಿದಾಗ ನಾವು ಮಾಧ್ಯಮಗಳಿಗೆ ಗೌರವ ನೀಡಬೇಕಲ್ಲವೇ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾಜಕ್ಕೆ ನ್ಯಾಯ ಒದಗಿಸುವಲ್ಲಿ ನಿಮಗೂ ನಮ್ಮಷ್ಟೇ ಜವಾಬ್ದಾರಿ ಇದೆ. ನಿಮ್ಮ ಹಾಗೂ ವಿರೋಧ ಪಕ್ಷಗಳ ಹಿತವಚನ, ನುಡಿಮುತ್ತುಗಳನ್ನು ನಾವು ಕೇಳಬೇಕು ಎಂದು ತಿಳಿಸಿದರು.












Click it and Unblock the Notifications