ಸಿದ್ದರಾಮಯ್ಯ ರಾಜಕೀಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ : ಡಿ ಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್
ಬೆಂಗಳೂರು, ಅಕ್ಟೋಬರ್ 23: ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ಸಿದ್ದರಾಮಯ್ಯ ಅವರ ರಾಜಕೀಯ ಉತ್ತರಾಧಿಕಾರಿ ಬಗ್ಗೆ ನೀಡಿದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ರಾಜಕೀಯವಾಗಿ ಕೊನೆಗಾಲದಲ್ಲಿದ್ದಾರೆ ಎಂಬ ಅರ್ಥದಲ್ಲಿ ಯತೀಂದ್ರ ಹೇಳಿದ್ದಾರೆ. ಸಿದ್ದರಾಮಯ್ಯ ನಂತರ ಅವರ ಬೆಂಬಲ ಸತೀಶ್ ಜಾರಕಿಹೊಳಿ ಅವರಿಗೆ ಸಿಗುತ್ತಿದೆಯೇ ಎಂಬ ಚರ್ಚೆ ಕೂಡ ರಾಜ್ಯ ರಾಜಕೀಯ ವಲಯದಲ್ಲಿ ಶುರುವಾಗಿದ್ದು, ಈ ಬಗ್ಗೆ ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಯತೀಂದ್ರ ಅವರ ಹೇಳಿಕೆ ಹಾಗೂ ಬೇರೆ ಶಾಸಕರ ವಿರುದ್ಧ ಕೈಗೊಳ್ಳುವ ಶಿಸ್ತು ಕ್ರಮ ಅವರ ವಿರುದ್ಧ ಯಾಕೆ ತೆಗೆದುಕೊಳ್ಳುತ್ತಿಲ್ಲ ಎಂದು ಮಾಧ್ಯಮಗಳ ಹೇಳಿಕೆ ಕುರಿತು ಮಾತನಾಡಿ, ಈ ಸಂದರ್ಭದಲ್ಲಿ ನಾನು ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸೂಕ್ತ ಸಮಯದಲ್ಲಿ ನಾನು ಪ್ರತಿಕ್ರಿಯೆ ನೀಡುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುದಾನಕ್ಕೆ ಒತ್ತಡ ಹಾಕುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ್ದು, ಖಂಡಿತವಾಗಿ ಕೇಳುತ್ತೇವೆ. ಕೇಂದ್ರದ ನಗರಾಭಿವೃದ್ಧಿ ಸಚಿವರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ನಾವು ನಮ್ಮ ಬೇಡಿಕೆಗಳನ್ನು ಅವರ ಮುಂದೆ ಇಡುತ್ತೇವೆ. ಈಗಾಗಲೇ ಹಲವು ಬಾರಿ ಕೇಂದ್ರ ಸಚಿವರು ಹಾಗೂ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಅನುದಾನ ಕೇಳಿದ್ದೇವೆ" ಎಂದು ತಿಳಿಸಿದರು. ಇದೇ 30ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ನಗರಾಭಿವೃದ್ಧಿ ಜವಾಬ್ದಾರಿ ಹೊಂದಿರುವ ಸಚಿವರುಗಳ ಸಮ್ಮೇಳನವನ್ನು ಬೆಂಗಳೂರಿನಲ್ಲಿ ನಡೆಸಲು ಕೇಂದ್ರ ಇಂಧನ, ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಮನೋಹರ ಲಾಲ್ ಖಟ್ಟರ್ ಅವರು ಒಪ್ಪಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಬೆಂಗಳೂರು ಹೊರವಲಯದಲ್ಲಿ ಮುಂದೆ ಜಿಬಿಎ ವ್ಯಾಪ್ತಿಗೆ ಸೇರಬಹುದಾದ ಸ್ಥಳೀಯ ಸಂಸ್ಥೆಗಳ ಗಡಿಪ್ರದೇಶಗಳ ಭೇಟಿ ಬಗ್ಗೆ ಮಾಹಿತಿ ನೀಡಿದ ಶಿವಕುಮಾರ್ ಅವರು, ಮುಂದೆ ಜಿಬಿಎ ವ್ಯಾಪ್ತಿಗೆ ಸೇರಲು ಅರ್ಹತೆ ಇರುವ ಜಿಬಿಎ ಗಡಿಭಾಗದ, ಬೆಂಗಳೂರು ನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರದೇಶಗಳನ್ನು ವೀಕ್ಷಣೆ ಮಾಡಿದ್ದೇನೆ. ಕೆಲವು ನಗರ ಸಭೆಗಳು, ಪಟ್ಟಣ ಪಂಚಾಯಿತಿಗಳು ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಗಳ ಗಡಿಪ್ರದೇಶಗಳು ನನ್ನ
ಇಲಾಖೆ ವ್ಯಾಪ್ತಿಗೆ ಸೇರಿದ್ದು, ಶುಕ್ರವಾರ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದಿದ್ದೇನೆ. ಈ ಪ್ರದೇಶದ ಕೆಲವು ಭಾಗಗಳನ್ನು ಮುಂದಿನ ದಿನಗಳಲ್ಲಿ ಜಿಬಿಎ ಅಡಿಯಲ್ಲಿ ಬರುವ ಬೆಂಗಳೂರು ಪಾಲಿಕೆಗಳ ವ್ಯಾಪ್ತಿಗೆ ಸೇರಿಸುವ ಸಂದರ್ಭವಿದೆ. ಬಿ.ಎಸ್. ಪಾಟೀಲ್ ಅವರ ಸಮಿತಿ ಮೂಲಕ ಜಿಬಿಎ ವ್ಯಾಪ್ತಿಗೆ ಸೇರಿಸಬಹುದಾದ ಪ್ರದೇಶಗಳ ಬಗ್ಗೆ ವರದಿ ತಯಾರಾಗುತ್ತಿದೆ. ಈ ವಿಚಾರವಾಗಿ ಶಾಸಕರು, ಸಂಸದರು, ಸಾರ್ವಜನಿಕರು ಸಂಘ ಸಂಸ್ಥೆಗಳ ಜೊತೆ ಚರ್ಚಿಸಲು ಸೂಚಿಸಿದ್ದೇವೆ ಎಂದರು.
ಈಗಿರುವ ಬೆಂಗಳೂರು ಪಾಲಿಕೆಗಳ ವ್ಯಾಪ್ತಿಯಿಂದಾಚೆಗೆ ಸುಮಾರು 25 ಲಕ್ಷ ಜನಸಂಖ್ಯೆ ಇದೆ. ಇವರನ್ನು ಮುಂದೆ ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳಬೇಕಾಗುತ್ತದೆ. ಬೆಂಗಳೂರನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕಿದೆ. ಹೀಗಾಗಿ ಈ ಪ್ರದೇಶಗಳ ಅಭಿವೃದ್ಧಿ ಮಾಡಬೇಕಾಗಿದೆ. ಎಲೆಕ್ಟ್ರಾನಿಕ್ ಸಿಟಿ, ವೈಟ್ ಫೀಲ್ಡ್, ಏರ್ ಪೋರ್ಟ್ ರಸ್ತೆ, ಯಲಹಂಕದ ಕೆಲವು ಪ್ರದೇಶ ಇನ್ನು ಪಂಚಾಯ್ತಿಯಾಗಿಯೇ ಉಳಿದುಕೊಂಡಿವೆ. ಎಲ್ಲೆಲ್ಲಿ ನಗರೀಕರಣ ಹೆಚ್ಚಾಗಿದೆ, ಆ ಪ್ರದೇಶಗಳಲ್ಲಿ ಅಚ್ಚುಕಟ್ಟಾಗಿ ಯೋಜನೆ ರೂಪಿಸಬೇಕಿದೆ. ಕೆಲವು ಪ್ರದೇಶಗಳಲ್ಲಿ ಕಸ ಎತ್ತುತ್ತಾರೆ, ಮತ್ತೆ ಕೆಲವು ಪ್ರದೇಶಗಳಲ್ಲಿ ಕಸ ಎತ್ತದೇ ಅವು ಪಂಚಾಯ್ತಿ ವ್ಯಾಪ್ತಿ ಎಂದು ಕಾರಣ ಹೇಳುತ್ತಾರೆ. ಹೀಗಾಗಿ ಅಧಿಕಾರಿಗಳಿಗೆ ಹೊಣೆಗಾರಿಕೆ ನಿಗದಿ ಪಡಿಸಬೇಕಾಗಿದೆ. ನಾನು ನಕ್ಷೆಯಲ್ಲಿ ಆ ಪ್ರದೇಶಗಳನ್ನು ನೋಡುವುದಕ್ಕಿಂತ ಅಲ್ಲಿಗೆ ಹೋಗಿ ಕಣ್ಣಾರೆ ನೋಡಬೇಕು ಎಂದು ಈ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ ಎಂದರು.
ರಸ್ತೆಗುಂಡಿ ಮುಚ್ಚುವ ಗಡುವು ಸಮೀಪಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ್ದು, ಅಧಿಕಾರಿಗಳು ರಸ್ತೆಗುಂಡಿ ಮುಚ್ಚುತ್ತಿದ್ದಾರೆ. ಅವರಿಗೆ ಜವಾಬ್ದಾರಿ ವಹಿಸಿದ್ದೇವೆ. ಕೆಲವು ಪ್ರದೇಶಗಳಲ್ಲಿ ರಸ್ತೆ ಗುಂಡಿ ಮುಚ್ಚುವ ಬದಲು ಒಂದು ಪದರ ರಸ್ತೆಯನ್ನೇ ಹಾಕುತ್ತಿದ್ದೇವೆ. ಈ ಕಾಮಗಾರಿಗಳು ನಿರಂತರವಾಗಿ ಮುಂದುವರಿಯುತ್ತವೆ. ಪ್ರಮುಖ ಪ್ರದೇಶಗಳಲ್ಲಿ ಆದ್ಯತೆ ಮೇರೆಗೆ ಕಾಮಗಾರಿಗಳನ್ನು ವೇಗವಾಗಿ ಪೂರ್ಣಗೊಳಿಸಲಾಗುತ್ತಿದೆ. ಈಗ ಮಳೆ ಕೂಡ ಆಗಮಿಸುತ್ತಿದೆ. ಮಳೆ ನಿಲ್ಲಲಿ ಎಂದು ನಾವು ಕಾಯುತ್ತಿದ್ದೇವೆ. ಮಳೆ ನಿಂತ ಬಳಿಕ ನಾವು ಮತ್ತೆ ಈ ಕಾಮಗಾರಿ ಮುಂದುವರಿಸುತ್ತೇವೆ ಎಂದು ತಿಳಿಸಿದರು.












Click it and Unblock the Notifications