ಎ ಖಾತೆಯಿಂದ 15 ಸಾವಿರ ಕೋಟಿ ಲೂಟಿ: ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು, ಅಕ್ಟೋಬರ್ 17: ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದ್ದಾರೆ. ಈ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿದ್ದು, ಬಹಳ ಸಂತೋಷ. ಅವರ ಬಳಿ ಇರುವ ತನಿಖಾ ತಂಡವನ್ನು ಹಾಕಲಿ ಎಂದು ಹೇಳಿದ್ದಾರೆ.
117 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ರಸ್ತೆ (ಈ ಹಿಂದಿನ ಪೆರಿಫೆರಲ್ ರಿಂಗ್ ರಸ್ತೆ)ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಭೂಸಂತ್ರಸ್ತ ರೈತರಿಗೆ ಪರಿಹಾರ ಪಡೆಯಲು ನಾಲ್ಕು ಆಯ್ಕೆಗಳನ್ನು ಕಲ್ಪಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ರಾಜ್ಯ ಸರ್ಕಾರ ದೊಡ್ಡ ತೀರ್ಮಾನ ಕೈಗೊಂಡಿದ್ದು, ಈ ಹಿಂದಿನ ಸರ್ಕಾರ ಉದ್ದೇಶಿಸಿದ್ದ ಪೆರಿಫೆರಲ್ ರಿಂಗ್ ರಸ್ತೆಯನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂದು ಮರುನಾಮಕರಣ ಮಾಡಿ 117 ಕಿ.ಮೀ ಉದ್ದದ ರಸ್ತೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಬೆಂಗಳೂರು ನಗರದಲ್ಲಿ ಇಷ್ಟು ಪ್ರಮಾಣದ ಹೊಸ ರಸ್ತೆಯನ್ನು ಸೇರಿಸುವ ಮೂಲಕ ರಾಜ್ಯ ಸರ್ಕಾರ ಬೆಂಗಳೂರಿನ ಅಭಿವೃದ್ಧಿಗೆ ಹೊಸ ಅಧ್ಯಾಯ ಬರೆಯುತ್ತಿದೆ. ತುಮಕೂರು ರಸ್ತೆಯಿಂದ ಆರಂಭವಾಗಿ ಯಲಹಂಕ, ವೈಟ್ ಫೀಲ್ಡ್, ಆನೇಕಲ್, ಎಲೆಕ್ಟ್ರಾನಿಕ್ ಸಿಟಿ ಮೂಲಕ ಮೈಸೂರು ರಸ್ತೆ ಮಾರ್ಗವಾಗಿ ಬೆಂಗಳೂರನ್ನು ಸುತ್ತುವರೆದು ಮತ್ತೇ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಎಕ್ಸಿಬಿಷನ್ ಸೆಂಟರ್ ಬಳಿ ಸಂಪರ್ಕ ಸಾಧಿಸಲಿದೆ. ಈ ರಸ್ತೆಯು ಬೆಂಗಳೂರಿನ ಉತ್ತರ ಭಾಗದಲ್ಲಿ 73 ಕಿ.ಮೀ ಸಾಗಲಿದ್ದು, ಉಳಿದದ್ದು ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸಾಗಲಿದೆ ಎಂದು ತಿಳಿಸಿದರು.
ಈ ಹಿಂದಿನ ಸರ್ಕಾರ ಈ ಯೋಜನೆಗೆ ಅಧಿಸೂಚನೆ ಹೊರಡಿಸಲಾಗಿತ್ತಾದರೂ ಇದನ್ನು ಹಿಂಪಡೆದಿರಲಿಲ್ಲ. ಈಗ ಬೆಂಗಳೂರಿನಲ್ಲಿ ನೈಸ್ ರಸ್ತೆಗೆ ಪರ್ಯಾಯ ರಸ್ತೆ ಅಗತ್ಯವಿದೆ. ಯಾವುದೇ ಕಾರಣಕ್ಕೂ ಡಿನೋಟಿಫಿಕೇಶನ್ ಮಾಡಬಾರದು ಎಂದು ಈ ಯೋಜನೆ ಕೈಗೊತ್ತಿಕೊಂಡಿದೆ. ಈ ಯೋಜನೆಗೆ ಸರ್ಕಾರದ ಖಾತರಿಯೊಂದಿಗೆ ಹುಡ್ಕೋ ಮೂಲಕ 27 ಸಾವಿರ ಕೋಟಿ ಸಾಲ ಪಡೆಯಲಾಗಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಈ ಯೋಜನೆಗಾಗಿ 100 ಮೀ. ಅಗಲ ಜಾಗಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಈಗ ಸರ್ಕಾರ ಬೆಂಗಳೂರು ಮೈಸೂರು ಹೆದ್ದಾರಿ ಗಾತ್ರ (65 ಮೀ.)ದಲ್ಲೇ ಈ ರಸ್ತೆ ಮಾಡಲು ತೀರ್ಮಾನಿಸಿದೆ. ರಸ್ತೆಯ ಎರಡೂ ಭಾಗದಲ್ಲಿ ಸರ್ವೀಸ್ ರಸ್ತೆ ಇರಲಿದ್ದು, ಪ್ರಮುಖ ರಸ್ತೆ ಟೋಲ್ ರಸ್ತೆಯಾಗಲಿದೆ. ಈ ರಸ್ತೆಯ ಮಧ್ಯೆ ಮೆಟ್ರೋ ಯೋಜನೆ ರೂಪಿಸಲು ಜಾಗ (5 ಮೀ.) ಕಲ್ಪಿಸಲಾಗುವುದು. ಉಳಿದ 35 ಮೀ. ಜಾಗವನ್ನು ರೈತರಿಗೆ ಪರಿಹಾರ ರೂಪದಲ್ಲಿ ಮರಳಿ ನೀಡಲು ತೀರ್ಮಾನಿಸಿದ್ದೇವೆ. ಈ ಜಾಗವನ್ನು ಹರಾಜು ಹಾಕಬೇಕು ಎಂಬ ಸಲಹೆಗಳು ಬಂದಿತ್ತಾದರೂ ರೈತರಿಗೆ ನೀಡಲು ನಿರ್ಧರಿಸಿದ್ದೇವೆ. ಇದು ವಾಣಿಜ್ಯ ಉದ್ದೇಶಕ್ಕೆ ನೆರವಾಗಲಿರುವ ಹಿನ್ನೆಲೆಯಲ್ಲಿ ರೈತರ ಮನವಿ ಮೇರೆಗೆ ಜಾಗವನ್ನು ಅವರಿಗೆ ನೀಡುವ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.
ಸರ್ಕಾರ ಹಾಗೂ ಬಿಡಿಎ ಮೇಲೆ ಆರ್ಥಿಕ ಹೊರೆ ಕಡಿಮೆ ಮಾಡಲು ಈ ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗೆ ನಾಲ್ಕು ರೀತಿಯಲ್ಲಿ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ಮಾರುಕಟ್ಟೆ ದರದಲ್ಲಿ ನಗರ ಭಾಗದಲ್ಲಿ ಎರಡು ಪಟ್ಟು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೂರುಪಟ್ಟು ನಗದು ಪರಿಹಾರ ಅಥವಾ ಟಿಡಿಆರ್ ಅಥವಾ ಎಫ್ಎಆರ್ ಅಥವಾ 35% ವಾಣಿಜ್ಯ ಭೂಮಿಯನ್ನು ಪಡೆಯುವ ಅವಕಾಶವನ್ನು ನೀಡಲಾಗಿದೆ. ಒಂದು ವೇಳೆ ವಾಣಿಜ್ಯ ಭೂಮಿ ಬೇಡ ವಸತಿ ಪ್ರದೇಶದಲ್ಲಿ ಜಾಗ ಬೇಕು ಎಂದರೆ ಬಿಡಿಎ ವತಿಯಿಂದ ರೂಪಿಸಲಾಗಿರುವ ನೂತನ ಬಡಾವಣೆಗಳಲ್ಲಿ 40% ಜಾಗ ನೀಡಲಾಗುವುದು. ಬಿಡಿಎ ಕಾಯ್ದೆಯಲ್ಲಿ ಹೊಸ ಕಾಯ್ದೆ ಅನುಸಾರ ಹೆಚ್ಚಿನ ಪರಿಹಾರ ನೀಡಲು ಅವಕಾಶವಿಲ್ಲ. ಆದರೂ ರೈತರಿಗೆ ನೆರವಾಗಲು ಸರ್ಕಾರ ಮಹತ್ವದ ತೀರ್ಮಾನ ಮಾಡಿದೆ ಎಂದು ಮಾಹಿತಿ ನೀಡಿದರು.
ಮುಂದಿನ 2 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳಿಸಲಾಗುವುದು. ಸರ್ಕಾರದ ಈ ತೀರ್ಮಾನಕ್ಕಾಗಿ ರೈತರು ಕಾತುರರಾಗಿದ್ದರು. ಒಂದು ವೇಳೆ ಯಾರಾದರೂ ಭೂಮಿ ನೀಡಲು ನಿರಾಕರಿಸಿದರೆ, ನಾವು ಸಹಜ ಸ್ವಾಧೀನ ಪ್ರಕ್ರಿಯೆ ಪರಿಹಾರದ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಟ್ಟು ಯೋಜನೆ ಮುಂದುವರಿಸುತ್ತೇವೆ. ಯಾವುದೇ ಕಾರಣಕ್ಕೂ ಈ ಜಾಗವನ್ನು ಡಿನೋಟಿಫಿಕೇಶನ್ ಮಾಡುವುದಿಲ್ಲ. ಸಂಚಾರ ದಟ್ಟಣೆಯಿಂದ ಬೆಂಗಳೂರಿನಲ್ಲಿ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗುತ್ತಿದ್ದು, ಈ ಯೋಜನೆ ಅಗತ್ಯವಾಗಿದೆ. ಈ ಯೋಜನೆಯಿಂದ 1900 ಕುಟುಂಬಗಳಿಗೆ ಪರಿಣಾಮ ಬೀರುತ್ತದೆಯಾದರೂ ಬೆಂಗಳೂರು ನಗರಕ್ಕೆ ದೊಡ್ಡ ಮಟ್ಟದ ನಿರಾಳತೆ ನೀಡಲಿದೆ. ಹೀಗಾಗಿ ರಾಜ್ಯ ಸರ್ಕಾರ ಈ ಮಹತ್ತರ ತೀರ್ಮಾನ ಕೈಗೊಂಡಿದೆ.












Click it and Unblock the Notifications