ಸಿದ್ದರಾಮಯ್ಯ ಸರ್ಕಾರದಲ್ಲಿ ಶುರುವಾಯ್ತು ಸಂಪುಟ ಸರ್ಕಸ್: ಈ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು, ಮೇ 24: ಸಿದ್ದರಾಮಯ್ಯ ಸರ್ಕಾರ ರಚನೆಯಾದ ಬಳಿಕ ಸಂಪುಟ ರಚನೆ ಸರ್ಕಸ್ ಜೋರಾಗಿದೆ. 8 ಜನ ಸಂಪುಟ ಸೇರ್ಪಡೆಯಾದ ಬಳಿಕ ಕಾಂಗ್ರೆಸ್ ಹಿರಿಯ ನಾಯಕರು ಅಸಮಾಧಾನಗೊಂಡಿದ್ದು, ಸಂಪುಟ ರಚನೆಯೇ ದೊಡ್ಡ ತಲೆನೋವಾಗಿದೆ.
ಈ ಕುರಿತು ನೂತನ ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿ, ಮುಖ್ಯಮಂತ್ರಿಗಳು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಅವರಿಗೆ ಆ ಅಧಿಕಾರವಿದ್ದು, ಈ ವಿಚಾರವಾಗಿ ಅವರೇ ಉತ್ತರ ನೀಡುತ್ತಾರೆ ಎಂದು ತಿಳಿಸಿದರು.

ಎಲ್ಲಾ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಮತದಾರರಿಗೆ ಅಭಿನಂದನೆ ತಿಳಿಸಬೇಕು, ನಾವು ಕೊಟ್ಟಿರುವ ಐದು ಗ್ಯಾರಂಟಿ ಯೋಜನೆಗಳು ಜಾರಿ ಆಗಬೇಕು. ಅರ್ಹ ಫಲಾನುಭವಿಗಳಿಗೆ ಇದರ ಪ್ರಯೋಜನ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದೇವೆ.
ಅಧಿಕಾರ ಕೊಟ್ಟಿರುವ ಜನರಿಗೆ ನೀವು ಸರಿಯಾಗಿ ಸ್ಪಂದಿಸುವುದು ಹಾಗೂ ಉತ್ತಮ ಆಡಳಿತ ನೀಡುವುದು ನಮ್ಮ ಪ್ರಥಮ ಆದ್ಯತೆಯಾಗಿದೆ. ಶಾಸಕರು ಜನರ ಮನಸ್ಸು ಗೆಲ್ಲಬೇಕು, ಲೋಕಸಭೆ ಚುನಾವಣೆ ಪ್ರಮುಖವಾಗಿದ್ದು, ದ್ವೇಷ ಅಸೂಯೆ ಎಲ್ಲವನ್ನೂ ಮರೆತು ಎಲ್ಲರೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅಧಿಕಾರ ಬಂದಾಗ ಎಲ್ಲಾ ಅಧಿಕಾರಿಗಳು, ಗುತ್ತಿಗೆದಾರರು ನಿಮ್ಮನ್ನು ಸಂಪರ್ಕಿಸುತ್ತಾರೆ, ನೀವು ಯಾವುದರಲ್ಲೂ ಸಿಲುಕಿಕೊಳ್ಳಬೇಡಿ ಎಂಬ ಸಲಹೆ ನೀಡಿದ್ದೇವೆ. ಮತ್ತೆ ಶಾಸಕಾಂಗ ಸಭೆ ಕರೆದು ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದವರಿಗೆ ತರಬೇತಿ ನೀಡಲಾಗುವುದು.
ಪೊಲೀಸ್ ಇಲಾಖೆಯನ್ನು ಕಾಂಗ್ರೆಸಿಕರಣ ಮಾಡಲು ಹೊರಟಿದ್ದಾರೆ ಎಂಬ ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, ' ಅರಗ ಜ್ಞಾನೇಂದ್ರ ಅಥವಾ ಬೇರೆ ಯಾವುದೇ ನಾಯಕರಿಗೆ ನಾನು ಉತ್ತರ ನೀಡುವುದಿಲ್ಲ. ಅವರ ಆಡಳಿತ ನೋಡಿ ಜನ ಅವರಿಗೆ ಉತ್ತರ ನೀಡಿದ್ದಾರೆ ಎಂದು ತಿಳಿಸಿದರು.

ಪೊಲೀಸ್ ಇಲಾಖೆ ಕೇಸರಿಕರಣ ಎಂದರೆ ಯಾವ ರೀತಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಾಜಿ ಮುಖ್ಯಮಂತ್ರಿಗಳು ಪೊಲೀಸ್ ಇಲಾಖೆ ಕೇಸರಿಕರಣ ಹಾಗೂ ನೈತಿಕ ಪೊಲೀಸ್ ಗಿರಿಗೆ ಬೆಂಬಲ ನೀಡಿದ್ದರು. ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಲು ನಾವು ಅವಕಾಶ ನೀಡುವುದಿಲ್ಲ. ಅದು ಕಾಂಗ್ರೆಸಿಗರಾಗಲಿ, ಬೇರೆ ಪಕ್ಷದವರಾಗಲಿ. ಕಾನೂನು ಪೊಲೀಸರಿಂದ ಮಾತ್ರ ರಕ್ಷಣೆ ಆಗಬೇಕು. ಅದನ್ನು ಎಲ್ಲರೂ ಪಾಲಿಸಬೇಕು.
ರಾಜ್ಯದ ಮೂರ್ನಾಲ್ಕು ಕಡೆಗಳಲ್ಲಿ ಪೊಲೀಸ್ ಅಧಿಕಾರಿಗಳು ತಮ್ಮ ಸಮವಸ್ತ್ರ ಕಳಚಿ ರಾಜಕೀಯ ಸಂಘಟನೆಗಳ ರೀತಿಯಲ್ಲಿ ವಸ್ತ್ರ ಧರಿಸಿದ್ದರು. ಇದು ಸಂವಿಧಾನ ಪಾಲನೆ ಅಲ್ಲ. ಕರ್ನಾಟಕ ಪೊಲೀಸ್ ಇಲಾಖೆಗೆ ಅದರದೇ ಆದ ಘನತೆ ಇದೆ. ಅದನ್ನು ಕಾಪಾಡಿಕೊಳ್ಳಬೇಕು. ಪ್ರಿಯಾಂಕ್ ಖರ್ಗೆ ನಮ್ಮ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿ ರಾಜ್ಯದ ಅತ್ಯಂತ ದೊಡ್ಡ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದಾಗ ಅವರಿಗೆ ಸಮನ್ಸ್ ನೀಡಲಾಗಿತ್ತು? ಬೇರೆ ಯಾರಿಗೆ ಈ ರೀತಿ ಸಮನ್ಸ್ ನೀಡಿದ್ದರು? ಪೊಲೀಸರು ಕಾನೂನು ರೀತಿಯಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು.












Click it and Unblock the Notifications