ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಚರ್ಚೆ: ಡಿ ಕೆ ಶಿವಕುಮಾರ್ ಏನಂದ್ರು?
ಬೆಂಗಳೂರು, ಜೂನ್ 27: ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ರಾಜಣ್ಣ ಹೇಳಿಕೆ ಕುರಿತು ಕಾಂಗ್ರೆಸ್ ಪಾಳಯದಲ್ಲಿ ಚರ್ಚೆಯಾಗುತ್ತಿದೆ. ಇತ್ತ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಬಹಳ ಸಂತೋಷ. ಸಮಯ ವ್ಯರ್ಥ ಮಾಡಬಾರದು. ಅವರಿಗೆ ಪರಿಹಾರ ಕಂಡುಕೊಳ್ಳಲು ಎಲ್ಲಿ ಹೋಗಬೇಕೋ ಅಲ್ಲಿ ಹೋಗಲಿ. ಆರೋಗ್ಯ ಸರಿಯಿಲ್ಲ ಎಂದು ವೈದ್ಯರ ಬಳಿ ಹೋದರೆ ಔಷಧಿ ನೀಡುತ್ತಾರೆ. ಅದೇ ರೀತಿ ಅವರು ಎಲ್ಲಾದರೂ ಪರಿಹಾರವನ್ನು ಹುಡುಕಿಕೊಂಡು ಹೋಗಲಿ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಹೆಚ್ಚುವರಿ ಡಿಸಿಎಂ ಚರ್ಚೆ ಕುರಿತಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತನಾಡುತ್ತೀರಾ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ. ಯಾರು ಬೇಕಾದರೂ ಹೈಕಮಾಂಡ್ ನಾಯಕರ ಬಳಿ ಹೋಗಿ ಪರಿಹಾರ ಹುಡುಕಿಕೊಂಡು ಬರಲಿ ಎಂದರು.
ಕೆಂಪೇಗೌಡರ ಜಯಂತಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡದ ವಿಚಾರವಾಗಿ ರಾಜ್ಯ ಒಕ್ಕಲಿಗರ ಸಂಘ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, "ಯಾರನ್ನೂ ಅಗೌರವಿಸುವ ಉದ್ದೇಶ ನಮಗಿಲ್ಲ. ಒಕ್ಕಲಿಗ ಸಮುದಾಯದ ನಾಯಕರಾಗಿ ಎಸ್.ಎಂ ಕೃಷ್ಣ, ಸದಾನಂದ ಗೌಡರು, ದೇವೇಗೌಡರು, ಕುಮಾರಸ್ವಾಮಿ ಅವರು ಇದ್ದಾರೆ. ಪ್ರಾಧಿಕಾರದ ಅಧಿಕಾರಿಗಳು ಶಿಷ್ಟಾಚಾರವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ಮಾತ್ರ ಆಹ್ವಾನ ನೀಡಿದ್ದಾರೆ. ಕುಮಾರಸ್ವಾಮಿ ಮಂಡ್ಯಕ್ಕೆ ಹೋಗಿದ್ದು, ದೇವೇಗೌಡರು ಹಾಸನದ ಪ್ರತಿನಿಧಿಯಾಗಿದ್ದಾರೆ. ಈ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕಿತ್ತು. ಮುಂದಿನ ವರ್ಷ ಈ ರೀತಿಯ ತಪ್ಪುಗಳು ನಡೆಯದಂತೆ ಸರಿಪಡಿಸಲಾಗುವುದು.
ಒಕ್ಕಲಿಗ ಸಮುದಾಯದವರ ಜತೆಗೆ ಬೇರೆ ಸಮುದಾಯದ ಮುಖಂಡರು ಹಾಗೂ ಸ್ವಾಮೀಜಿಗಳನ್ನು ಆಹ್ವಾನಿಸುವಂತೆ ಸೂಚಿಸಲಾಗಿದೆ. ಕೆಂಪೇಗೌಡರು ಎಲ್ಲ ಸಮುದಾಯದವರಿಗೂ ಸೇರಿ ಬೆಂಗಳೂರನ್ನು ಕಟ್ಟಿದ್ದಾರೆ. ಹೀಗಾಗಿ ಎಲ್ಲ ಸಮುದಾಯದವರು ಕೆಂಪೇಗೌಡ ಜಂಯತಿ ಆಚರಣೆಯಲ್ಲಿ ಭಾಗಿಯಾಗಬೇಕು. ಇದರಲ್ಲಿ ರಾಜಕೀಯ ಮಾಡುವವರು ಮಾಡಲಿ" ಎಂದು ತಿಳಿಸಿದರು.
ರಾಜ್ಯದೆಲ್ಲೆಡೆ ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಕನ್ನಡ ಮತ್ತು ಸಂಸ್ಕತಿ ಇಲಾಖೆಯಿಂದ ನೀಡುವ 25 ಸಾವಿರದ ಜತೆಗೆ ಬಿಬಿಎಂಪಿಯಿಂದ 1 ಲಕ್ಷ ಅನುದಾನ ನೀಡಲಾಗುವುದು. ಕೆಂಪೇಗೌಡರು ಎಲ್ಲರ ಆಸ್ತಿ. ಒಂದು ಜಾತಿ ಹಾಗೂ ಧರ್ಮಕ್ಕೆ ಸೇರಿದವರಲ್ಲ. ಇವರ ಬಗ್ಗೆ ಹೆಚ್ಚಿನ ಪ್ರಚಾರ ಮಾಡಲು ನಮ್ಮ ಸರ್ಕಾರ ಮುಂದಾಗಿದೆ.
ದೆಹಲಿ ಪ್ರಯಾಣದ ಬಗ್ಗೆ ಕೇಳಿದಾಗ, "ಕರ್ನಾಟಕ ರಾಜ್ಯದಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದರನ್ನು ಭೇಟಿ ಮಾಡಿ, ನಮ್ಮ ರಾಜ್ಯದಲ್ಲಿ ಬಾಕಿ ಉಳಿದಿರುವ ಕೇಂದ್ರದ ಯೋಜನೆಗಳು, ಅನುದಾನ ಬಾಕಿ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯದ ಹಿತಕ್ಕಾಗಿ ಧ್ವನಿ ಎತ್ತುವಂತೆ ಚರ್ಚೆ ಮಾಡಲಾಗುವುದು" ಎಂದು ತಿಳಿಸಿದರು.












Click it and Unblock the Notifications