ಅಧಿಕಾರ ಇದ್ದಾಗ ಕೆಲಸ ಮಾಡದೆ, ಅಧಿಕಾರ ಹೋಗುವ ಸಮಯದಲ್ಲಿ ಯೋಜನೆ ಘೋಷಣೆ ಮಾಡಿದರೆ ಏನು ಪ್ರಯೋಜನ?: ಡಿಕೆಶಿ
ವಿಜಯಪುರ, ಡಿಸೆಂಬರ್ 31: ಅಧಿಕಾರ ಇದ್ದಾಗ ಕೆಲಸ ಮಾಡದವರು ಅಧಿಕಾರ ಹೋಗುವ ಸಮಯದಲ್ಲಿ ಯೋಜನೆ ಘೋಷಣೆ ಮಾಡಿದರೆ ಪ್ರಯೋಜನವೇನು? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಈ ಕುರಿತು ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇನ್ನೂ ಉಳಿದಿರುವ 100 ದಿನಗಳಲ್ಲಿ ಯಾವ ಯೋಜನೆ ಜಾರಿ ಆಗುತ್ತದೆ? ಇದು ಕೇವಲ ಕಾಗದದ ಮೇಲೆ ಉಳಿಯುವ ಯೋಜನೆ ಅಷ್ಟೇ. ಕಳೆದ ಚುನಾವಣೆಯಲ್ಲಿ ನೀಡಿದ್ದ 600 ಭರವಸೆಗಳಲ್ಲಿ 550 ಅನ್ನು ಜಾರಿ ಮಾಡಿಲ್ಲ. ನಮ್ಮ ಪಕ್ಷ ಕೊಟ್ಟಿದ್ದ 169 ಯೋಜನೆಗಳ ಪೈಕಿ 168 ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.
ರಾಜ್ಯದ ಜನರಿಗೆ ಬಿಜೆಪಿ ಮಾಡುತ್ತಿರುವ ಅನ್ಯಾಯ ಯಾವ ಕಾಲದಲ್ಲೂ ಆಗಿರಲಿಲ್ಲ. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ನಮ್ಮ ಪ್ರತಿಭಟನಾ ಸಮಾವೇಶಕ್ಕೆ ಅಪಾರ ಪ್ರಮಾಣದಲ್ಲಿ ಜನ ಸೇರಿದ್ದರು.

ಮೀಸಲಾತಿ ವಿಚಾರವಾಗಿ ರಾಜ್ಯ ಸರ್ಕಾರದ ನಡೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮನ್ನು ಶಾಲಾ ಮಕ್ಕಳೆಂದು ಭಾವಿಸಿದ್ದಾರೆ. ಅವರ ಕ್ರಮದಿಂದ ಯಾರಿಗೆ ಅನುಕೂಲ? ಇರುವ ಮೀಸಲಾತಿ ವರ್ಗ ತೆಗೆದುಹಾಕಲು ಹೇಗೆ ಸಾಧ್ಯ? ಇದು ಅಸಾಧ್ಯ. ಶೇ. 10 ರಷ್ಟು ಮೀಸಲಾತಿ ತೆಗೆದರೆ ಅವರ ಭವಿಷ್ಯ ಏನಾಗಬೇಕು? ಯಾವುದೇ ಕ್ರಮವನ್ನು ಸಂವಿಧಾನ ಬದ್ಧ, ಕಾನೂನು ಬದ್ಧವಾಗಿ ತೆಗೆದುಕೊಳ್ಳಬೇಕು.
ಈ ಕ್ರಮದಿಂದ ಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ನ್ಯಾಯ ಸಿಗುತ್ತದೆ ಎಂದು ಬಿಜೆಪಿ ನಾಯಕರನ್ನು ಬಿಟ್ಟು ಆಯಾ ಸಮುದಾಯದ ಮುಖಂಡರಿಂದ ಹೇಳಿಕೆ ಕೊಡಿಸಲಿ. ಸಿಎಂ ಯಾಕೆ ಈ ವಿಚಾರವನ್ನು ಖುದ್ದಾಗಿ ಘೋಷಣೆ ಮಾಡಿಲ್ಲ? 3 ತಿಂಗಳ ನಂತರ ಚುನಾವಣೆ ಬಂದಾಗ ಮೀಸಲಾತಿ ಪ್ರಮಾಣ ಎಷ್ಟು ಎಂದು ತೀರ್ಮಾನ ಮಾಡುತ್ತಾರೆಯೇ? ಇದು ಮೋಸ ಮಾಡುವ ತಂತ್ರ. ಯಾವ ಸಮಾಜಕ್ಕೂ ಅವರು ನ್ಯಾಯ ಒದಗಿಸಿಕೊಟ್ಟಿಲ್ಲ. ನಾವು ಸಮಬಾಳು, ಸಮಪಾಲು ಎಂಬ ನೀತಿ ಮೇಲೆ ಕೇಳುತ್ತಿದ್ದೇವೆ.
ಒಕ್ಕಲಿಗರು ಶೇ.12 ರಷ್ಟು ಮೀಸಲಾತಿ ಕೇಳಿದ್ದು ಅದನ್ನು ಘೋಷಣೆ ಮಾಡಲಿ. ಪಂಚಮಸಾಲಿ ಸಮಾಜ ಆಗ್ರಹಿಸಿರುವ ಬೇಡಿಕೆ ಘೋಷಿಸಲಿ. ಪರಿಶಿಷ್ಟರಿಗೆ ನೀಡಲಾಗಿರುವ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರಿಸಬೇಕಿತ್ತು. ಇದುವರೆಗೂ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಹೋಗಿಲ್ಲ. ಇಲ್ಲಿ ಕೇವಲ ಆದೇಶ ಮಾಡಿದರೆ ಆಗುತ್ತದೆಯೇ? ಎಲ್ಲದಕ್ಕೂ ಕಾನೂನು ತೊಡಕು ಇದೆ. ಯಾರ ವಿರೋಧವನ್ನೂ ಕಟ್ಟಿಕೊಳ್ಳಬಾರದು ಎಂದು ಆಡುತ್ತಿರುವ ನಾಟಕ. ಈ ಬಗ್ಗೆ ಎಲ್ಲಾ ನಾಯಕರ ಜತೆ ಚರ್ಚೆ ಮಾಡಿ ನಾಳೆ ಅಥವಾ ನಾಡಿದ್ದು ತಿಳಿಸುತ್ತೇವೆ ಎಂದು ಹೇಳಿದರು.

ಎಲ್ಲರಿಗೂ ಮೀಸಲಾತಿ ಕೊಡಲು ಸಾಧ್ಯವಿಲ್ಲ ಎಂಬ ಮುರುಗೇಶ್ ನಿರಾಣಿ ಅವರ ಹೇಳಿಕೆ ವಿಚಾರವಾ-ಗಿ ಪ್ರತಿಕ್ರಿಯಿಸಿ, ಬಿಜೆಪಿಯಲ್ಲಿ ಯತ್ನಾಳ್ ಅವರಿಗೆ ಈ ವಿಚಾರದಲ್ಲಿ ತಗಾದೆ ಎತ್ತಿದರೆ ಪಕ್ಷದಿಂದ ಕಿತ್ತು ಹಾಕುವ ಬೆದರಿಕೆ ಹಾಕಿದ್ದಾರೆ. ಯತ್ನಾಳ್ ಅವರು ಈಗ ಈ ವಿಚಾರದಲ್ಲಿ ಹೇಳಿಕೆ ನೀಡಲಿ. ಬೆಂಬಲ ನೀಡಬೇಕು ಇಲ್ಲ ವಿರೋಧ ವ್ಯಕ್ತಪಡಿಸಬೇಕು. ಬಾಯಿ ಮುಚ್ಚಿಕೊಂಡಿರುವುದು ಏಕೆ? ಅಷ್ಟೆಲ್ಲ ಮಾತನಾಡುತ್ತಿದ್ದವರು ಈಗ ಯಾಕೆ ಮಾತನಾಡುತ್ತಿಲ್ಲ. ಸಿಎಂ ಖುದ್ದಾಗಿ ಈ ಬಗ್ಗೆ ನಿರ್ಧಾರ ಪ್ರಕಟಿಸಿಲ್ಲ ಏಕೆ? ಇವರು ಕೊಡುವ ಚಾಕಲೇಟ್ ಒಪ್ಪಲು ಸಾಧ್ಯವಿಲ್ಲ. ಇವರದು ಬರೀ ಮೋಸ. ಎಲ್ಲಾ ಸಮಾಜಕ್ಕೂ ಬ್ರಹ್ಮಾಂಡ ಮೋಸ ಮಾಡಿದ್ದಾರೆ ಎಂದು ತಿಳಿಸಿದರು.












Click it and Unblock the Notifications