ಚನ್ನಪಟ್ಟಣ ಉಪಚುನಾವಣೆ ಹೊತ್ತಲಿ ಭರ್ಜರಿ ಆಪರೇಷನ್ ಹಸ್ತ: ಡಿ ಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?
ಬೆಂಗಳೂರು, ನವೆಂಬರ್ 01: ರಾಜ್ಯದಲ್ಲಿ ಉಪಚುನಾವಣೆಯ ಕಾವು ಜೋರಾಗಿದೆ. ತಮ್ಮ ಅಭ್ಯರ್ಥಿಗಳು ಗೆಲ್ಲುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು ಮಾಸ್ಟರ್ ಪ್ಲಾನ್ ನಡೆಸಿದ್ದು, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿ ಉಳಿದಿದ್ದು, ಆಪರೇಷನ್ ಹಸ್ತದ ಮೂಲ ಮೈತ್ರಿ ನಾಯಕರಿಗೆ ಡಿ ಕೆ ಬ್ರದರ್ಸ್ ಬಿಗ್ ಶಾಕ್ ನೀಡಿದ್ದಾರೆ.
ಚನ್ನಪಟ್ಟಣದ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರು ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗುರುವಾರ ಸೇರ್ಪಡೆಯಾದರು. ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸೋಲು ಕಂಡಿದ್ದ ಡಿ ಕೆ ಸುರೇಶ್ ಅವರ ಸೋಲಿನ ಪ್ರತಿಕಾರವಾಗಿ ಈ ಬಾರಿಯ ಉಪಚುನಾವಣೆಯನ್ನ ಗೆಲ್ಲುವ ನಿಟ್ಟಿನಲ್ಲಿ ಡಿ ಕೆ ಬ್ರದರ್ಸ್ ಆಪರೇಷನ್ ಹಸ್ತವನ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಈ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬ ಕಾರಣಕ್ಕೆ ಆ ಪಕ್ಷದ ಮುಖಂಡರು, ಕಾರ್ಯಕರ್ತರು ಗುಂಪು ಗುಂಪಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಕುಮಾರಸ್ವಾಮಿ ತನ್ನ ಸ್ಥಾನವನ್ನೇ ಉಳಿಸಿಕೊಳ್ಳುವುದು ಕಷ್ಟವಾಗಿದೆ. ಬಿಜೆಪಿ ನಾಯಕರೇ ಕುಮಾರಸ್ವಾಮಿ ಅವರಿಗೆ ಉತ್ತರ ನೀಡುತ್ತಾರೆ. ಅವರ ಪಕ್ಷ ಗಟ್ಟಿಯಾಗಿ ಉಳಿಯುತ್ತದೆಯೋ ಇಲ್ಲವೋ ಎಂಬುದನ್ನು ಸಮಯ ಬಂದಾಗ ಉತ್ತರ ನೀಡುತ್ತೇನೆ. ಬಿಜೆಪಿಯಲ್ಲಿ ಅವರನ್ನು ಯಾವ ರೀತಿ ನಡೆಸಿಕೊಳ್ಳುತ್ತಿದ್ದಾರೆ ಎಂದೂ ಗೊತ್ತಿದೆ.
ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬ ಕಾರಣಕ್ಕೆ ಗುಂಪು ಗುಂಪಾಗಿ ಆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದಾರೆ. ಎಲ್ಲೋ ಹಳ್ಳಿಗಳಲ್ಲಿ ಭಿನ್ನಾಭಿಪ್ರಾಯದಿಂದ ಒಂದಿಬ್ಬರು ಮಾತ್ರ ನಮ್ಮ ಪಕ್ಷ ಬಿಟ್ಟಿರಬಹುದು. ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಕಾಂಗ್ರೆಸ್ ಪಕ್ಷದಿಂದ ಮಾತ್ರ ಜನರಿಗೆ ಒಳ್ಳೆಯದಾಗಲು ಸಾಧ್ಯ ಎಂದು ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ" ಎಂದು ತಿಳಿಸಿದರು.
ಈ ಸರ್ಕಾರ ಆತ್ಮಹತ್ಯೆ ಮಾಡಿಕೊಳ್ಳಲಿದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಹೆಚ್ ಡಿ ಕುಮಾರಸ್ವಾಮಿ ಮಾತಿಗೆ ಉತ್ತರ ನೀಡುವುದಿಲ್ಲ, ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ ಎಂದು ತಿಳಿಸಿದರು.
ಮೂರು ತಿಂಗಳ ಹಿಂದೆಯೇ ಕೆ.ಜೆ ಜಾರ್ಜ್ ಅವರು ಯೋಗೇಶ್ವರ್ ಅವರನ್ನು ಡೀಲ್ ಮಾಡಿದ್ದರು ಎಂಬ ಆರ್. ಅಶೋಕ್ ಅವರ ಹೇಳಿಕೆ ಬಗ್ಗೆ ಮಾತನಾಡಿ, ಅದೆಲ್ಲವೂ ಸುಳ್ಳು. ಯಾವ ಡೀಲು ಇಲ್ಲ. ಇದಕ್ಕೆಲ್ಲ ಯೋಗೇಶ್ವರ್ ಉತ್ತರ ನೀಡುತ್ತಾರೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
ಚನ್ನಪಟ್ಟಣದಲ್ಲಿ ಭಾವನಾತ್ಮಕವಾಗಿ ಮತ ಸೆಳೆಯಲಾಗುತ್ತಿದೆ ಎಂದು ಕೇಳಿದಾಗ, "ಭಾವನೆ ಮೇಲೆ ಮತ ಕೇಳುವುದಲ್ಲ. ಬದುಕಿನ ಮೇಲೆ ಮತ ಕೇಳಬೇಕು. ಅವರು ಭಾವನೆ ಮೇಲೆ ಮತ ಕೇಳಿದರೆ, ನಾವು ಬದುಕಿನ ಮೇಲೆ ಮತ ಕೇಳುತ್ತೇವೆ. ಜನರ ಬದುಕು, ಅವರ ಅಭಿವೃದ್ಧಿ ನಮಗೆ ಮುಖ್ಯ. ಕೆರೆಗೆ ನೀರು ತುಂಬಿಸುವುದು, ರಸ್ತೆ, ಮನೆಗಳು, ನಿವೇಶನ ನೀಡುವುದು ಮುಖ್ಯ ಎಂದು ತಿಳಿಸಿದರು.
ಕನ್ನಡ ಬಾವುಟ ಹಾರಿಸಲು ಅವಕಾಶ ನೀಡುತ್ತಿಲ್ಲ ಎಂಬ ಆರೋಪದ ಬಗ್ಗೆ ಮಾತನಾಡಿ, ಚುನಾವಣಾ ನೀತಿ ಸಂಹಿತೆ ಇರುವ ಕಾರಣ ಕನ್ನಡ ಪರ ಸಂಘಟನೆಗಳು ತಮ್ಮ ಕಚೇರಿಯಲ್ಲಿ ಕನ್ನಡ ಧ್ವಜ ಹಾರಿಸಲಿ. ಈ ಕಾರ್ಯಕ್ರಮದಲ್ಲಿ ರಾಜಕಾರಣಿಗಳು ಭಾಗವಹಿಸುವಂತಿಲ್ಲ. ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಸಗಿ ಸಂಸ್ಥೆಯವರೂ ರಾಜ್ಯೋತ್ಸವ ಆಚರಣೆ ಮಾಡಬೇಕು ಎಂದು ಮನವಿ ಮಾಡಿದ್ದೇನೆ" ಎಂದು ತಿಳಿಸಿದರು. ರಾಜ್ಯ ಸರ್ಕಾರ ಹಗರಣ ಮುಚ್ಚಿಹಾಕಲು ವಕ್ಫ್ ವಿಚಾರ ಮುಂದೆ ಬಿಟ್ಟಿದೆ ಎಂಬ ವಿಚಾರವಾಗಿ ಕೇಳಿದಾಗ, "ವಕ್ಫ್ ಮೂಲಕ ಮೊದಲು ನೋಟೀಸ್ ಕೊಟ್ಟಿದ್ದು ಬಿಜೆಪಿ. ಸಮುದಾಯಗಳ ನಡುವೆ ಕಲಹ ಸೃಷ್ಟಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು.












Click it and Unblock the Notifications