ಒಕ್ಕಲಿಗ ಸ್ವಾಮೀಜಿಗಳು ದಡ್ಡರಲ್ಲ; ಬಿಜೆಪಿ-ಜೆಡಿಎಸ್ ಒಕ್ಕಲಿಗ ಅಸ್ತ್ರಕ್ಕೆ ಡಿ ಕೆ ಶಿವಕುಮಾರ್ ಟಕ್ಕರ್!
ಬೆಂಗಳೂರು, ಏಪ್ರಿಲ್ 10: ಒಕ್ಕಲಿಗರು ದಡ್ಡರಲ್ಲ, ಒಕ್ಕಲಿಗ ಸ್ವಾಮೀಜಿಗಳು ದಡ್ಡರಲ್ಲ ಎಂದು ಬಿಜೆಪಿ-ಜೆಡಿಎಸ್ ಒಕ್ಕಲಿಗ ಅಸ್ತ್ರಕ್ಕೆ ಡಿಕೆ ಶಿವಕುಮಾರ್ ಟಕ್ಕರ್ ಕೊಟ್ಟಿದ್ದಾರೆ. ಎನ್ಡಿಎ ಅಭ್ಯರ್ಥಿಗಳು ಒಕ್ಕಲಿಗ ಸ್ವಾಮೀಜಿಯನ್ನು ಭೇಟಿಯಾಗಿದ್ದಕ್ಕೆ ಡಿಕೆ ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.
ಒಕ್ಕಲಿಗರ ಸ್ವಾಮೀಜಿಗಳನ್ನು ಭೇಟಿ ಮಾಡಿದರೆ ಸಮುದಾಯದ ಮತಗಳು ವಿಭಜನೆ ಆಗುತ್ತವೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಒಕ್ಕಲಿಗರು ಮತ್ತು ಸ್ವಾಮೀಜಿಗಳು ದಡ್ಡರಲ್ಲ. ಸ್ವಾಮೀಜಿಗಳ ಬಳಿ ಬರುವವರಿಗೆ ವಿಭೂತಿ, ಹೂವಿನ ಹಾರ ಹಾಕಿ ಕಳಿಸುತ್ತಾರೆ. ಅವರು ನಮ್ಮ ಪರ, ಅವರ ಪರ ಇಬ್ಬರ ಪರವೂ ಮಾಡುವುದಿಲ್ಲ. ಸ್ವಾಮೀಜಿಗಳು ಬುದ್ಧಿವಂತರು ರಾಜಕೀಯದಲ್ಲಿ ಅವರು ಹಸ್ತಕ್ಷೇಪ ಮಾಡುವುದಿಲ್ಲ. ಜನತಾದಳದವರು ಮಠವನ್ನು ಇಬ್ಭಾಗ ಮಾಡಿರುವ ಬಗ್ಗೆ ಸ್ವಾಮೀಜಿಗಳಿಗೆ ಅರಿವಿದೆ.

ನಮ್ಮ ಜನ ಕೂಡ ಇದನ್ನು ಗಮನಿಸುತ್ತಾರೆ. ಮೈತ್ರಿ ಸರ್ಕಾರ ಪತನವಾದ ಬಳಿಕ ನಮ್ಮ ಸಮಾಜದ ಸಿಎಂ ಅವರನ್ನು ಇಳಿಸಿ ಬಿಟ್ಟಿರಲ್ಲ ಎಂದು ಸ್ವಾಮೀಜಿಗಳು ಬಿಜೆಪಿಯರನ್ನು ಪ್ರಶ್ನಿಸಬಹುದಿತ್ತಲ್ಲವೇ? ಇದನ್ನು ಕೇಳುವ ಶಕ್ತಿ ಸ್ವಾಮೀಜಿಗಳಿಗೆ ಇದೆಯೋ ಇಲ್ಲವೋ ಗೊತ್ತಿಲ್ಲ. ಒಕ್ಕಲಿಗ ಮುಖ್ಯಮಂತ್ರಿಯನ್ನು ಕೆಳಗಿಳಿಸಿದವರನ್ನೇ ಇಂದು ಸ್ವಾಮೀಜಿಯವರ ಬಳಿ ಕರೆದುಕೊಂಡು ಹೋಗಿ ಆಶೀರ್ವಾದ ಪಡೆಯುತ್ತಿದ್ದಾರಲ್ಲವೇ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಪ್ರಣಾಳಿಕೆ ಕುರಿತು ಕುಮಾರಸ್ವಾಮಿ ಅವರು ಟೀಕೆ ಕುರಿತು ಮಾತನಾಡಿ, ಕುಮಾರಸ್ವಾಮಿ ಅವರು ತಮ್ಮ ಮಾತಿಗೆ ಬದ್ಧರಾಗಿರುವುದಿಲ್ಲ. ಹೀಗಾಗಿ ಅವರ ಮಾತಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಕುಮಾರಸ್ವಾಮಿ ಅವರು ಯಾರನ್ನ ಟೀಕೆ ಮಾಡಿಲ್ಲ ಹೇಳಿ. ಪ್ರಣಾಳಿಕೆ ಬಿಡಿ, ಕುಮಾರಸ್ವಾಮಿ ಅವರು ನಮ್ಮ ಪ್ರತಿ ವಿಚಾರವನ್ನು ಟೀಕೆ ಮಾಡುತ್ತಾರೆ. ಮೇಕೆದಾಟು ಪಾದಯಾತ್ರೆ ಟೀಕೆ ಮಾಡಿದ್ದವರು ಈಗ ಮೇಕೆದಾಟು ಯೋಜನೆ ಜಾರಿಗೆ ಶಪಥ ಮಾಡುವುದಾಗಿ ಹೇಳಿದ್ದಾರೆ.
ಮಠದ ಸ್ವಾಮೀಗಳನ್ನು ಬಿಟ್ಟಿಲ್ಲ. ಎರಡು ಮಠ ಮಾಡಿದ್ದಾರೆ. ಈಗ ದಿನಬೆಳಗಾದರೆ ಮಠಕ್ಕೆ ಹೋಗಿ ಭೇಟಿ ಮಾಡುತ್ತಾರೆ. ಅವರು ತಮ್ಮ ಮಾತಿಗೆ ಎಂದಿಗೂ ಬದ್ಧರಾಗಿರುವುದಿಲ್ಲ. ಹೀಗಾಗಿ ಅವರ ಮಾತನ್ನು ನಾವು ಗಂಭೀರವಾಗಿ ಪರಿಗಣಿಸುವುದಿಲ್ಲ. ಯಡಿಯೂರಪ್ಪನವರ ಬಗ್ಗೆ ಕುಮಾರಸ್ವಾಮಿ ಮಾತನಾಡಿದ್ದು, ಕುಮಾರಸ್ವಾಮಿ ಬಗ್ಗೆ ಯಡಿಯೂರಪ್ಪ ಮತ್ತು ಯಡಿಯೂರಪ್ಪ ಅವರ ಬಗ್ಗೆ ದೇವೇಗೌಡ ಅವರು ಮಾತನಾಡಿದ್ದನ್ನು ನಾವು ನೋಡಿದ್ದೇವೆ.

ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದಾಗ ಇದೇ ಯೋಗೇಶ್ವರ್, ಅಶ್ವತ್ಥ್ ನಾರಾಯಣ, ಅಶೋಕ್ ಅವರೇ ಸರ್ಕಾರ ಕೆಡವಿದರು. ಕುಮಾರಸ್ವಾಮಿಯವರು ಈಗ ಅವರ ಜತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಸರ್ಕಾರ ಕೆಡವಿದವರು ಅವರು. ಆದರೆ ಈಗ ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ವಿಧಾನಸಭೆಯಲ್ಲಿ ದೇವೇಗೌಡರು, ಕುಮಾರಸ್ವಾಮಿಯವರ ಬಗ್ಗೆ ಯಡಿಯೂರಪ್ಪ ಅವರು ಏನು ಹೇಳಿದರು ಗೊತ್ತಿದೆಯೇ?. ಯಾವೂದನ್ನು ಮುಚ್ಚಿಡಲು ಸಾಧ್ಯವಿಲ್ಲವಲ್ಲ. ಎಂತೆಂಥಾ ಪದಗಳನ್ನು ಉಪಯೋಗಿಸಿದರು. ನಾನು ಎಂದಿಗೂ ಅವರು ಬಳಸಿರುವ ಪದಗಳನ್ನು ಬಳಸಿಲ್ಲ. ಎಂಟು ಮಂದಿ ಒಕ್ಕಲಿಗರಿಗೆ ಲೋಕಸಭಾ ಟಿಕೆಟ್ ನೀಡಿದ್ದೇವೆ. ನಾನು ಡಿಸಿಎಂ ಮತ್ತು ಪಕ್ಷದ ಅಧ್ಯಕ್ಷನಾಗಿದ್ದೇನೆ. ನಾವೆಲ್ಲಾ ಸಮಾಜದ ಮತ್ತು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡಲು ತಯಾರಿದ್ದೇವೆ. ಭವಿಷ್ಯದ ಬಗೆಗಿನ ಮಾತುಗಳು ನಮಗೆ ಏಕೆ? ನಮ್ಮ ಸಮಾಜದವರು ದಡ್ಡರಲ್ಲ ಎಂದು ಹೇಳಿದರು.
ಒಕ್ಕಲಿಗ ನಾಯಕರನ್ನು ಒಗ್ಗೂಡಿಸುತ್ತೇವೆ ಎಂಬ ಹೇಳಿಕೆ ಕುರಿತು ಮಾತನಾಡಿ, ಎಲ್ಲರೂ ಅವರವರ ಬದುಕು ನೋಡಿಕೊಳ್ಳುತ್ತಾರೆ. ನಾವು ಈಗಾಗಲೇ ಅಧಿಕಾರದಲ್ಲಿದ್ದೇವೆ. ಅದಾದ ನಂತರ ಮುಂದಿನ ಐದು ವರ್ಷವೂ ನಾವೇ ಇರುತ್ತೇವೆ. ಮುಂದೆ ನಾವು ಗೆಲ್ಲುವುದಿಲ್ಲ ಎಂದು ಈ ರೀತಿ ಹೇಳುತ್ತಿದ್ದಾರೆ. ನಮ್ಮಿಂದಾಗಿ ಅವರು ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ. ಸಿದ್ಧಾಂತವನ್ನೇ ಕುಮಾರಸ್ವಾಮಿ ಅವರು ಮಾರಿಕೊಂಡಿದ್ದಾರೆ. ಕುಮಾರಸ್ವಾಮಿ ಅವರ ವಿಚಾರ ಬಿಡಿ. ಆದರೆ ದೇವೇಗೌಡರಿಗೆ ಅಳಿಯನನ್ನು ಬಿಜೆಪಿಯಿಂದ ನಿಲ್ಲಿಸುವ ಪರಿಸ್ಥಿತಿ ಬರಬಾರದಿತ್ತು. ಅವರ ಸ್ಥಿತಿ ನೋಡಿ ಬೇಸರವಾಗುತ್ತದೆ ಎಂದು ತಿಳಿಸಿದರು.












Click it and Unblock the Notifications