ಸಿಎಂ ಕುರ್ಚಿಗಾಗಿ ಹಗ್ಗಜಗ್ಗಾಟ: ಶಾಸಕಾಂಗ ಸಭೆಗೂ ಮುನ್ನ ಡಿಕೆಶಿಗೆ ಮಹತ್ವದ ಸಲಹೆ ಕೊಟ್ಟ ಬೆಂಬಲಿಗ ಶಾಸಕರು
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದು ಬಹುಮತ ಗಳಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ತಲೆನೋವು ಶುರುವಾಗಿದೆ.
ಭಾನುವಾರ ರಾತ್ರಿ ಮುಖ್ಯಮಂತ್ರಿ ಹುದ್ದೆಗೆ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಕುರಿತು ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯಾವುದೇ ಒಮ್ಮತದ ನಿರ್ಧಾರಕ್ಕೆ ಬರಲಾಗಲಿಲ್ಲ. ಸಿಎಂ ಆಯ್ಕೆಯ ಹೊಣೆಯನ್ನು ಹೈಕಮಾಂಡ್ ನಿರ್ಧಾರಕ್ಕೆ ಬಿಡಲಾಗಿದೆ ಎಂಬ ನಿರ್ಣಯ ತೆಗೆದುಕೊಳ್ಳಲಿದೆ.

ಸಿಎಂ ರೇಸ್ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದ್ದು, ಇಬ್ಬರೂ ನಾಯಕರು ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿದ್ದಾರೆ.
ಇನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭಕ್ಕೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ಆಪ್ತ ಶಾಸಕರು ಮಹತ್ವದ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಮತ್ತಷ್ಟು ಹೆಚ್ಚಾಗಲಿದೆ ಎಂಬ ಸೂಚನೆ ನೀಡಿದಂತಾಗಿದೆ.
ಇದೇ ವೇಳೆ ಮುಖ್ಯಮಂತ್ರಿ ಹುದ್ದೆಗಾಗಿ ಬಲವಾದ ಬೇಡಿಕೆ ಇಡುವಂತೆ ಬೆಂಬಲಿಗ ಶಾಸಕರು ಡಿ.ಕೆ. ಶಿವಕುಮಾರ್ಗೆ ಒತ್ತಡ ಹೇರಿದ್ದು, ಸಿಎಂ ಸ್ಥಾನದ ಹೊರತು ಬೇರೆ ಯಾವುದೇ ಹುದ್ದೆ ಸ್ವೀಕರಿಸಬೇಡಿ ಎಂಬ ಸಲಹೆ ನೀಡಿದ್ದಾರೆ.
ಡಿಸಿಎಂ ಸೇರಿದಂತೆ ಬೇರೆ ಯಾವುದೇ ಮಂತ್ರಿ ಸ್ಥಾನವೂ ಬೇಡ. ಸಿಎಂ ಸ್ಥಾನ ಸಿಗದಿದ್ದರೆ ಸಚಿವ ಸಂಪುಟದಿಂದಲೂ ಸ್ಥಾನದಿಂದಲೂ ದೂರವಿರಿ. ಸರ್ಕಾರದ ಭಾಗವಾಗುವುದು ಬೇಡ ಎಂದು ಆಪ್ತ ಶಾಸಕರು ಡಿ.ಕೆ. ಶಿವಕುಮಾರ್ಗೆ ತಿಳಿಸಿದ್ದು, ಇದರೊಂದಿಗೆ ಸಿಎಂ ಸ್ಥಾನಕ್ಕೆ ಪಟ್ಟು ಸಡಿಸದಿರಲು ನಿರ್ಧರಿಸಿದ್ದಾರೆ.
ಈ ಮಧ್ಯೆ, ಬೆಂಗಳೂರಿನ ಶಾಂಗ್ರಿಲಾ ಹೊಟೇಲ್ನಲ್ಲಿ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಜೊತೆಗೆ ಎಐಸಿಸಿ ವೀಕ್ಷಕರಾಗಿದ ಜಿತೇಂದ್ರ ಸಿಂಗ್, ಸುಶೀಲ್ ಕುಮಾರ್ ಶಿಂಧೆ, ದೀಪಕ್ ಬಬಾರಿಯಾ ಪ್ರತ್ಯೇಕ ಚರ್ಚೆ ನಡೆಸಿದರು. ಹೋಟೆಲ್ನ ಕೊಠಡಿಯಲ್ಲಿ ಪ್ರತ್ಯೇಕ ಚರ್ಚೆ ನಡೆಸಿದ ವೀಕ್ಷಕರು ನಂತರ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡರು.
ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರಿಗೂ ಅಧಿಕಾರ ಹಂಚಿಕೆಯ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಆದರೆ, ಇದಕ್ಕೆ ಡಿ.ಕೆ. ಶಿವಕುಮಾರ್ ಸುತಾರಾಂ ಒಪ್ಪದೆ, ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಾಸಕರ ಮತ ಸಂಗ್ರಹದ ಅಭಿಪ್ರಾಯಕ್ಕೂ ಡಿ.ಕೆ. ಶಿವಕುಮಾರ್ ಸಮ್ಮತಿ ಸೂಚಿಸಲಿಲ್ಲ.
ಇದೀಗ ಸಿಎಂ ಆಯ್ಕೆ ವಿಚಾರ ಅಂತಿಮವಾಗಿ ಹೈಕಮಾಂಡ್ ಅಂಗಳದಲ್ಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರಿಗೂ ಸೋಮವಾರ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದ್ದಾರೆ.
ಸಿಎಲ್ಪಿ ಸಭೆ ಕುರಿತು ದೆಹಲಿಯಲ್ಲಿ ಮಾತನಾಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಲ್ಪಿ ಸಭೆಯ ವರದಿಯನ್ನು ವೀಕ್ಷಕರು ಹೈಕಮಾಂಡ್ಗೆ ಹಸ್ತಾಂತರಿಸಲಿದ್ದಾರೆ. ನಂತರ ಸಿಎಂ ಹೆಸರನ್ನು ಘೋಷಿಸಲು ಹೈಕಮಾಂಡ್ ಸಮಯ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದರು.
ಅಧಿಕಾರಕ್ಕೆ ಬಂದ ನಂತರ ಮೊದಲ ಸಚಿವ ಸಂಪುಟದಲ್ಲಿ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರಮುಖ 5 ಭರವಸೆಗಳನ್ನು ಜಾರಿಗೆ ತರುತ್ತೇವೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.












Click it and Unblock the Notifications