ಗ್ರೇಟರ್ ಬೆಂಗಳೂರು ವಿರೋಧಿಸುವವರು ಪಾಲಿಕೆ ಚುನಾವಣೆಗಳನ್ನು ಬಹಿಷ್ಕರಿಸಲಿ: ಡಿ.ಕೆ. ಶಿವಕುಮಾರ್ ಸವಾಲು
ಬೆಂಗಳೂರು, ಅಕ್ಟೋಬರ್ 11: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಬಿಎ ರದ್ದು ಮಾಡಲಾಗುವುದು, ಸಭೆಯ ಅಜೆಂಡಾವನ್ನೇ ತಿಳಿಸಿಲ್ಲ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.
ಜಿಬಿಎ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಮಿತಿಯ ಮೊದಲ ಸಭೆ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ಮೊದಲ ಸಭೆಯಲ್ಲಿ ಅಜೆಂಡಾ ಇರುವುದಿಲ್ಲ. ಜಿಬಿಎ ಯಾವ ದಿಕ್ಕಿನಲ್ಲಿ ಸಾಗಬೇಕು ಎಂದು ತೀರ್ಮಾನವನ್ನು ಮೊದಲ ಸಭೆಯಲ್ಲಿ ಮಾಡಲಾಗುವುದು. ಈ ಸಭೆಗೆ ಗೈರಾಗುವ ಮೂಲಕ ಬಿಜೆಪಿ ನಾಯಕರು ಬೆಂಗಳೂರು ನಗರದ ವಿರುದ್ಧವಾಗಿ ನಿಂತಿದ್ದಾರೆ. ಜನರು ಕೊಟ್ಟ ಅಧಿಕಾರಕ್ಕೆ ದ್ರೋಹ ಬಗೆದಿದ್ದಾರೆ. ಜನರ ಪರವಾಗಿ ಧ್ವನಿ ಎತ್ತುವುದಕ್ಕಿಂತ ಅವರಿಗೆ ರಾಜಕಾರಣ ಮುಖ್ಯವಾಗಿದೆ. ಅವರ ಈ ನಡೆಗೆ ವಿಷಾದ ವ್ಯಕ್ತಪಡಿಸುತ್ತೇವೆ.

ಇನ್ನು ಜಿಬಿಎ ರದ್ದುಗೊಳಿಸುವ ವಿಚಾರವಾಗಿ ಹೇಳುವುದಾದರೆ, ಕಾಂಗ್ರೆಸ್ ಸರ್ಕಾರದ ತೀರ್ಮಾಣವನ್ನು ಯಾವುದೇ ಬೇರೆ ಸರ್ಕಾರ ಬದಲಾವಣೆ ಮಾಡಲು ಸಾಧ್ಯವಾಗಿಲ್ಲ. ಭೂಸುಧಾರಣಾ ಕಾಯ್ದೆಯಿಂದ ಬ್ಯಾಂಕುಗಳ ರಾಷ್ಟ್ರೀಕರಣ, ಆಹಾರ ಭದ್ರತೆ, ಉದ್ಯೋಗ ಖಾತ್ರಿ, ಶೈಕ್ಷಣಿಕ ಹಕ್ಕು ಸೇರಿದಂತೆ ಗ್ಯಾರಂಟಿ ಯೋಜನೆಗಳವರೆಗೂ ಕಾಂಗ್ರೆಸ್ ಸರ್ಕಾರಗಳ ತೀರ್ಮಾನವನ್ನು ಬದಲಿಸಲು ಸಾಧ್ಯವಾಗಿಲ್ಲ. ಅವರು ಜಿಬಿಎ ವಿರುದ್ಧ ಪ್ರತಿಭಟಿಸುವುದೇ ಆದರೆ, ಅವರು ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಬಹಿಷ್ಕರಿಸಲಿ. ಅವರು ಏನಾದರೂ ಟೀಕೆ ಮಾಡಲಿ ನಾವು ನಮ್ಮ ಜನಪರ ಕೆಲಸ ಮುಂದುವರಿಸುತ್ತೇವೆ ಎಂದು ತಿರುಗೇಟು ನೀಡಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನಗರದ ಯೋಜನಾ ಪ್ರಾಧಿಕಾರದ ಜವಾಬ್ದಾರಿ, ಟಿಡಿಆರ್ ನೀಡುವ ಅಧಿಕಾರವನ್ನು ನೀಡಲಾಗಿದೆ. ಬಿಡಿಎಯಿಂದ ಈ ಅಧಿಕಾರವನ್ನು ಜಿಬಿಎಗೆ ಹಸ್ತಾಂತರಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜಿಬಿಎ ಸಮಿತಿಯ ಮೊದಲ ಸಭೆ ನಡೆದಿದ್ದು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮೊದಲಿಗೆ ಜಿಬಿಎ ಜಾರಿಗೆ ತರುವಲ್ಲಿ ಶ್ರಮಿಸಿದ ಬಿ.ಎಸ್ ಪಾಟೀಲ್, ರವಿಚಂದ್ರನ್, ಸಿದ್ದಯ್ಯ ಅವರನ್ನೊಳಗೊಂಡ ಸಮಿತಿಗೆ ಅಭಿನಂದನೆ ಸಲ್ಲಿಸಲು ತೀರ್ಮಾನಿಸಲಾಗಿದೆ.
ಅಧಿಕಾರಿಗಳಾದ ತುಷಾರ್ ಗಿರಿನಾಥ್ ಹಾಗೂ ಮಹೇಶ್ವರ್ ರಾವ್ ಅವರ ತಂಡದ ಪರಿಶ್ರಮಕ್ಕೆ ಅಭಿನಂದನೆ ಸಲ್ಲಿಸುವುದು ಹಾಗೂ ವಿರೋಧ ಪಕ್ಷಗಳ ಸಲಹೆ ಮೇರೆಗೆ ಜಂಟಿ ಸದನ ಸಮಿತಿ ಮಾಡಿದೆವು. ರಿಜ್ವಾನ್ ಅರ್ಷದ್ ಅವರ ನೇತೃತ್ವದ ಸಮಿತಿ ಜನರು, ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಇನ್ನು ವಿಧಾನಸಭೆ ಹಾಗೂ ಪರಿಷತ್ ಸದಸ್ಯರು ಇದಕ್ಕೆ ಸಹಕಾರ ನೀಡಿದ್ದು, ಎಲ್ಲಾ ಪಕ್ಷದ ಶಾಸಕರಿಗೆ ಅಭಿನಂದಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಉಳಿದಂತೆ ಐದು ಪಾಲಿಕೆಗಳ ಕಟ್ಟಡ ನಿರ್ಮಾಣಕ್ಕೆ ಜಾಗಗಳನ್ನು ಗುರುತಿಸಲಾಗಿದೆ. ಬಿಬಿಎಂಪಿ ಮುಖ್ಯಕಚೇರಿಯಾಗಿದ್ದ ಕಟ್ಟಡವು ಜಿಬಿಎ ಕಚೇರಿಯಾಗಿರುತ್ತದೆ. ಬೆಂಗಳೂರು ಕೇಂದ್ರ ಸೇರಿದಂತೆ ನೂತನ ಕಟ್ಟಡ ನಿರ್ಮಾಣ ಆಗುವವರೆಗೂ ಬೇರೆ ಪಾಲಿಕಾಗಳ ಸಭೆಗೆ ಇದೇ ಕಟ್ಟಡದಲ್ಲಿ ಅವಕಾಶ ಮಾಡಿಕೊಡಲಾಗುವುದು. ಇನ್ನು ಎಲ್ಲಾ ಐದು ಪಾಲಿಕೆಗಳ ಕಟ್ಟಡ ವಿನ್ಯಾಸ ಒಂದೇ ರೀತಿ ಇರಲಿದೆ ಎಂದು ತಿಳಿಸಿದರು.
ಇಂದು ಪಾಲಿಕೆ ಸಮಿತಿಯ ವೆಚ್ಚದ ಹಣಕಾಸಿನ ಮಿತಿ ಹೆಚ್ಚಿಸಲಾಗಿದೆ. ಪಾಲಿಕೆ ಆಯುಕ್ತರುಗಳ ವೆಚ್ಚದ ಮಿತಿಯನ್ನು 1 ಕೋಟಿ ರೂಪಾಯಿಯಿಂದ 3 ಕೋಟಿ ರೂ. ಏರಿಸಲಾಗಿದೆ. ಆಮೂಲಕ ಐದು ಪಾಲಿಕೆಗಳ ಆಯುಕ್ತರಿಗೆ 15 ಕೋಟಿ ರೂ. ನೀಡಲಾಗುವುದು. ಸ್ಥಾಯಿ ಸಮಿತಿ ವೆಚ್ಚದ ಮಿತಿಯನ್ನು 3 ಕೋಟಿ ರೂಪಾಯಿಯಿಂದ 5 ಕೋಟಿ ರೂಪಾಯಿಗೆ ಏರಿಕೆ ಮಾಡಲಾಗಿದೆ. ಐದು ಪಾಲಿಕೆಗಳ ಸ್ಥಾಯಿ ಸಮಿತಿಗಾಗಿ 25 ಕೋಟಿ ನೀಡಲಾಗುವುದು. ಇನ್ನು ಪಾಲಿಕೆ ಮೇಯರ್ ಅವರ ವೆಚ್ಚದ ಮಿತಿಯನ್ನು 5 ಕೋಟಿಯಿಂದ 10 ಕೋಟಿಗೆ ಏರಿಸಲಾಗಿದ್ದು, ಐದು ಪಾಲಿಕೆಗಳಿಂದ 50 ಕೋಟಿ ರೂ. ಆಗಲಿದೆ. ಇದೊಂದು ಐತಿಹಾಸಿಕ ತೀರ್ಮಾನ ಎಂದು ತಿಳಿಸಿದರು.












Click it and Unblock the Notifications