Breaking; ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿಯಿಂದ ಕಾನೂನು ಹೋರಾಟ
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರಮೇಶ್ ಜಾರಕಿಹೊಳಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಸುಳಿವು ನೀಡಿದ್ದಾರೆ
ಬೆಂಗಳೂರು, ಫೆಬ್ರವರಿ 02; ಕರ್ನಾಟಕದಲ್ಲಿ ಚುನಾವಣೆ ಹತ್ತಿರವಾಗುತ್ತಿರುವಾಗಲೇ ಡಿ. ಕೆ. ಶಿವಕುಮಾರ್ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡುವೆ ಜಟಾಪಟಿ ಆರಂಭವಾಗಿದೆ. ಇದು ಈಗ ಕೋರ್ಟ್ ಮೆಟ್ಟಿಲೇರುವುದು ಸಹ ಖಚಿತವಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರಮೇಶ್ ಜಾರಕಿಹೊಳಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಸುಳಿವು ನೀಡಿದ್ದಾರೆ. ಸಿಡಿ ಪ್ರಕರಣದಲ್ಲಿ ಹಲವು ಆರೋಪಗಳನ್ನು ಮಾಡುತ್ತಿರುವ ಅವರ ವಿರುದ್ಧ ಕಾನೂನು ಹೋರಾಟ ನಡೆಸುವ ನಿರೀಕ್ಷೆ ಇದೆ.
ಗುರುವಾರ ಟ್ವೀಟ್ ಮಾಡಿರುವ ಸುಪ್ರೀಂಕೋರ್ಟ್ ವಕೀಲ ಮತ್ತು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಕಾರ್ಯದರ್ಶಿ ಸಂಕೇತ್ ಏಣಣಿ ರಮೇಶ್ ಜಾರಕಿಹೊಳಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡುವ ಸೂಚನೆ ನೀಡಿದ್ದಾರೆ.

ತಮ್ಮ ಟ್ವೀಟ್ನಲ್ಲಿ ಅವರು, 'KPCC ಅಧ್ಯಕ್ಷರಾದ ಶ್ರೀ ಡಿ. ಕೆ. ಶಿವಕುಮಾರ್ ವಿರುದ್ಧ ನಿರಂತರ ಮಿಥ್ಯಾಪವಾದ, ನಿಂದನೆ, ದೋಷಾರೋಪಣೆ ಹಾಗೂ ಅವರ ಪ್ರಸಿದ್ಧಿ ಘಾಸಿಗೊಳಿಸಲು ಸುಳ್ಳು ಹಾಗೂ ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಶೀಘ್ರವೇ ಮಾನನಷ್ಟ ಮೊಕದ್ದಮೆ ಸಹಿತ ಇನ್ನಿತರ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು' ಎಂದು ಹೇಳಿದ್ದಾರೆ.
KPCC ಅಧ್ಯಕ್ಷರಾದ ಶ್ರೀ ಡಿ. ಕೆ. ಶಿವಕುಮಾರ್ ವಿರುದ್ಧ ನಿರಂತರ ಮಿಥ್ಯಾಪವಾದ, ನಿಂದನೆ, ದೋಷಾರೋಪಣೆ ಹಾಗೂ ಅವರ ಪ್ರಸಿದ್ಧಿ ಘಾಸಿಗೊಳಿಸಲು ಸುಳ್ಳು ಹಾಗೂ ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಶೀಘ್ರವೇ ಮಾನನಷ್ಟ ಮೊಕದ್ದಮೆ ಸಹಿತ ಇನ್ನಿತರ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.
— Sanket Yenagi (@Sanket_Yenagi) February 2, 2023
- ಸಂಕೇತ ಏಣಗಿ
ಗೋಕಾಕ್ನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ, ಅದರ ಹಿಂದಿರುವ ಷಡ್ಯಂತ್ರ ಮುಂತಾದ ಅಂಶಗಳನ್ನು ಪ್ರಸ್ತಾಪಿಸಿದ್ದರು. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಿಡಿ ಪ್ರಕರಣದ ಸಿಬಿಐ ತನಿಖೆಗೆ ಮನವಿ ಮಾಡುತ್ತೇನೆ ಎಂದು ಹೇಳಿದ್ದರು.
ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸೋಮವಾರ ಮಂಗಳವಾರ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದರು. ಬುಧವಾರವೂ ಬೆಂಗಳೂರಿನಲ್ಲಿ ಸಿಎಂ ಭೇಟಿ ಮಾಡಿ ಚರ್ಚೆ ನಡೆಸಿದ್ದರು.
ಗುರುವಾರ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಸಿಡಿ ಪ್ರಕರಣದ ಸಿಬಿಐ ತನಿಖೆಗೆ ಒತ್ತಾಯಿಸಲಿದ್ದಾರೆ. ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ ಕೈವಾಡವಿದೆ ಎಂದು ಆರೋಪವನ್ನು ಮಾಡುತ್ತಿದ್ದಾರೆ.












Click it and Unblock the Notifications