DK Shivakumar: ಡಿಸಿಎಂ ಜೊತೆಗೆ ಡಿಕೆ ಶಿವಕುಮಾರ್ಗೆ ಎರಡು ಪ್ರಭಾವಿ ಖಾತೆಗಳು
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದ ಸರ್ಕಾರ ರಚನೆಗೆ ಸಿದ್ಧವಾಗಿದೆ. ಎರಡು ದಿನಗಳ ಕಸರತ್ತಿನ ನಂತರ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಘೋಷಿಸಿದೆ.
ಇದೇ ಶನಿವಾರ, ಮೇ 20ರಂದು ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ ಮತ್ತು ಡಿಸಿಎಂ ಜೊತೆಗೆ 20 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೆ ಸಂಬಂಧಿಸಿದ ಎಲ್ಲ ತಯಾರಿಗಳನ್ನು ವಿಧಾನಸಭೆ ಸಚಿವಾಲಯ ಮತ್ತು ರಾಜಭವನ ಮಾಡಿಕೊಳ್ಳುತ್ತಿವೆ.

ಸಿಎಂ ಸ್ಥಾನಕ್ಕಾಗಿ ಕಳೆದ ಐದು ದಿನಗಳಿಂದ ನಡೆದ ಜಟಾಪಟಿಯ ನಂತರ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದೆ. ಸಿಎಂ ಸ್ಥಾನಕ್ಕಾಗಿ ನಡೆದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ತೀವ್ರ ಪೈಪೋಟಿಯಲ್ಲಿ ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯಗೆ ಮಣೆ ಹಾಕಿದ್ದಾರೆ.
ಇನ್ನು ಈ ಬಾರಿ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಸಿಎಂ ಸ್ಥಾನಕ್ಕೇರಲು ಭಾರೀ ಪ್ರಯತ್ನ ನಡೆಸಿದ್ದ ಡಿ.ಕೆ. ಶಿವಕುಮಾರ್ ಹೈಕಮಾಂಡ್ ಎದುರು ಪಟ್ಟು ಬಿಗಿಗೊಳಿಸಿದ್ದರು. ಅತ್ತ ಸಿದ್ದರಾಮಯ್ಯ, ಇತ್ತ ಡಿ.ಕೆ. ಶಿವಕುಮಾರ್ ಬಿಗಿಪಟ್ಟು ನೋಡಿ ಒಂದು ಕ್ಷಣ ಹೈಕಮಾಂಡ್ಗೆ ದಂಗಾಗಿತ್ತು.

ಕೊನೆಯ ಹಂತದವರೆಗೂ ಪ್ರಯತ್ನ ನಡೆಸಿದ ಡಿ.ಕೆ. ಶಿವಕುಮಾರ್ ಅವರನ್ನು ಮನವೊಲಿಸುವಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಯಿತು. 30:30 ಫಾರ್ಮುಲಾದೊಂದಿಗೆ ಸಂಧಾನ ಮಾಡಿದ ಬಳಿಕ ಮೊದಲು ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ, ಡಿ.ಕೆ. ಶಿವಕುಮಾರ್ ಡಿಸಿಎಂ ಆಗಲು ಒಪ್ಪಿಗೆ ಸೂಚಿಸಿದರು.
ಡಿ.ಕೆ. ಶಿವಕುಮಾರ್ಗೆ ಡಿಸಿಎಂ ಜೊತೆಗೆ ಎರಡು ಪ್ರಭಾವಿ ಖಾತೆಗಳು?
ಸಿಎಂ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಡಿಸಿಎಂ ಸ್ಥಾನದ ಜೊತೆಗೆ ಎರಡು ಪ್ರಭಾವಿ ನೀಡಲು ಹೈಕಮಾಂಡ್ ಸಮ್ಮತಿಸಿದೆ. ಹೀಗಾಗಿ ಡಿ.ಕೆ. ಶಿವಕುಮಾರ್ ಅವರು ಜಲಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಖಾತೆಗಳನ್ನು ಪಡೆಯಲು ಒಪ್ಪಿಗೆ ಸೂಚಿಸಿದ್ದಾರೆಂದು ವರದಿಯಾಗಿದೆ.

ಇದಕ್ಕೂ ಮುನ್ನ ಪ್ರಮುಖ ಹಣಕಾಸು ಖಾತೆಯನ್ನೇ ಡಿ.ಕೆ. ಶಿವಕುಮಾರ್ ಕೇಳಿದ್ದರು. ಆದರೆ ಅದನ್ನು ಬಿಟ್ಟುಕೊಡಲು ಸಿದ್ದರಾಮಯ್ಯ ಒಪ್ಪಲಿಲ್ಲ. ಹಣಕಾಸು ಖಾತೆ ನಾನೇ ನಿಭಾಯಿಸುತ್ತೇನೆ, ಅದು ಬಿಟ್ಟು ಬೇರೆ ಖಾತೆ ಕೇಳಲು ಸಿದ್ದರಾಮಯ್ಯ ತಿಳಿಸಿದ್ದಾರೆ. ಆ ಬಳಿಕ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆಗಳನ್ನು ಪಡೆಯಲು ಡಿ.ಕೆ. ಶಿವಕುಮಾರ್ ನಿರ್ಧರಿಸಿದರು ಎನ್ನಲಾಗಿದೆ.
ಇನ್ನು ಸಿದ್ದರಾಮಯ್ಯ ಬಣದ 10 ಶಾಸಕರು ಮತ್ತು ಡಿ.ಕೆ. ಶಿವಕುಮಾರ್ ಬಣದ 10 ಶಾಸಕರು ಶನಿವಾರದಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇದಕ್ಕೂ ಮೊದಲು ರಾಜ್ಯದಲ್ಲಿ ಎರಡು ಅಥವಾ ಎರಡಕ್ಕಿಂತ ಹೆಚ್ಚು ಡಿಸಿಎಂ ಹುದ್ದೆಗಳು ಸೃಷ್ಟಿಯಾಗಲಿವೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಡಿ.ಕೆ. ಶಿವಕುಮಾರ್ ಅವರು ಒಂದೇ ಡಿಸಿಎಂ ಹುದ್ದೆ ಇರಬೇಕು ಎಂಬ ಷರತ್ತಿಗೆ ಹೈಕಮಾಂಡ್ ಮಣಿದಿದೆ. ಹೀಗಾಗಿ ಡಿಸಿಎಂ ಹುದ್ದೆಯ ಆಸೆಯಲ್ಲಿದ್ದ ಹಿರಿಯ ಶಾಸಕರಿಗೆ ನಿರಾಸೆಯಾಗುವುದು ಖಚಿತವಾಗಿದೆ.
ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ಗೆ ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಬೇಕಾದ ಜವಾಬ್ದಾರಿ ಹೇಗಲೇರಿದೆ. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನಡೆಯುವ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದ್ದರು.
* ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ (ಪ್ರತಿ ತಿಂಗಳು)
* ಪ್ರತಿಯೊಬ್ಬರಿಗೆ 10 ಕೆಜಿ ಉಚಿತ ಅಕ್ಕಿ (ಪ್ರತಿ ತಿಂಗಳು)
* ಪ್ರತಿ ಮನೆಯ ಯಜಮಾನಿಗೆ 2000 ರೂ. (ಪ್ರತಿ ತಿಂಗಳು)
* ನಿರುದ್ಯೋಗಿ ಪದವೀಧರರಿಗೆ 3000 ರೂ., ಡಿಪ್ಲೋಮಾ ಪದವೀಧರರಿಗೆ 1500 ರೂ. (ಪ್ರತಿ ತಿಂಗಳು)
* ಪ್ರತಿ ಮಹಿಳೆಯರಿಗೆ ಸರ್ಕಾರಿ ಸಾರಿಗೆಯಲ್ಲಿ ಉಚಿತ ಪ್ರಯಾಣ












Click it and Unblock the Notifications