ಕಾಂಗ್ರೆಸ್ನಲ್ಲಿ ಟಿಕೆಟ್ಗಾಗಿ ಹೆಚ್ಚಿದ ಒತ್ತಡ: ದೆಹಲಿಗೆ ಡಿಕೆಶಿ, ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು, ಡಿಸೆಂಬರ್ 04: ಕರ್ನಾಟಕದ ವಿಧಾನಸಭೆ ಹತ್ತಿರವಾಗುತ್ತಿದ್ದಂತೆ, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ತೀವ್ರಗೊಂಡಿವೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ ಬಿಜೆಪಿ ಚುನಾವಣೆ ಎದುರಿಸಲು ಸಜ್ಜಾಗಿದೆ. ಪ್ರಧಾನಿ ಮೋದಿ ವರ್ಚಸ್ಸ ಹಾಗೂ ಹಿಂದುತ್ವವನ್ನು ಬಳಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ. ಕಾಂಗ್ರೆಸ್ ಪಕ್ಷವು ಆಡಳಿತ ವಿರೋಧಿ ಅಲೆಯನ್ನು ಬಳಸಿಕೊಳ್ಳಲು ಮುಂದಾಗಿದೆ. ಇನ್ನು ಜೆಡಿಎಸ್ ಪಕ್ಷವು ಹಳೇ ಮೈಸೂರು ಭಾಗದಲ್ಲಿ ಪ್ರಚಾರವನ್ನು ಹೆಚ್ಚಿಸಿದೆ. ಪಂಚರತ್ನ ಯಾತ್ರೆ ಮೂಲಕ ಮತದಾರರನ್ನು ಸೆಳೆಯಲು ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಕಸರತ್ತು ನಡೆಸಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲರ ಆಮ್ ಆದ್ಮಿ ಪಕ್ಷವು ಮೊದಲ ಬಾರಿಗೆ ಕರ್ನಾಟಕದಲ್ಲಿ ಕಣಕ್ಕಿಳಿಯಲು ಸಿದ್ದತೆ ನಡೆಸುತ್ತಿದೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ತುರಾತುರಿಯಲ್ಲಿದೆ.

ದೆಹಲಿಗೆ ತೆರಳಲಿರುವ ಡಿ.ಕೆ.ಶಿವಕುಮಾರ್
ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕು ಎಂಬ ಯತ್ನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೊಡಗಿದ್ದಾರೆ. ಇದಕ್ಕಾಗಿ ಅವರು ಹಲವು ತಂತ್ರಗಳನ್ನು ಹೂಡಿದ್ದಾರೆ. ಈಗಾಗಲೇ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿಗಳನ್ನು ಪಡೆದಿದ್ದಾರೆ. ಸಂಕ್ರಾಂತಿ ಒಳಗಾಗಿ ಸುಮಾರು 150 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸುವ ಕಸರತ್ತನ್ನು ಡಿಕೆಶಿ ಮಾಡುತ್ತಿದ್ದಾರೆ. ಈ ಕಾರಣಕ್ಕಾಗಿಯೇ ಇಂದು (ಬುಧವಾರ) ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಲಿದ್ದಾರೆ.
ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಸೇರಿದಂತೆ ಪ್ರಮುಖ ನಾಯಕರನ್ನು ಭೇಟಿ ಮಾಡಲಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸುವ ವಿಚಾರವನ್ನು ಅವರೊಂದಿಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ. ನಾಯಕರು ಒಟ್ಟಾಗಿ ಚರ್ಚೆ ನಡೆಸಲಿದ್ದಾರಾ ಅಥವಾ ಪ್ರತ್ಯೇಕ ಮಾತುಕತೆ ನಡೆಸಲಿದ್ದಾರಾ ಎಂಬುದರ ಮಾಹಿತಿ ಲಭ್ಯವಾಗಿಲ್ಲ.

ಆಂತರಿಕ ಬಂಡಾಯವನ್ನು ನಿಭಾಯಿಸಬೇಕಿದೆ ಡಿಕೆಸಿ
ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಬಣಗಳಿವೆ ಎಂಬ ಮಾತುಗಳು ಈ ಹಿಂದಿನಿಂದಲೂ ಕೇಳಿಬಂದಿವೆ. ಈ ಇಬ್ಬರು ನಾಯಕರು ಸಾರ್ವಜನಿಕವಾಗಿ ಅನ್ಯೋನ್ಯತೆಯಿಂದ ಇದ್ದರೂ, ಅವರ ನಡುವೆ ಅಸಮಾಧಾನಗಳಿವೆ ಎಂಬ ಬಗ್ಗೆ ಮಾತುಗಳು ಹರಿದಾಡುತ್ತಿವೆ. ಈ ಇಬ್ಬರು ನಾಯಕರು ಮುಖ್ಯಮಂತ್ರಿ ಆಕಾಂಕ್ಷಿಗಳು ಎಂಬುದನ್ನು ಪರೋಕ್ಷವಾಗಿ ಹೇಳಿಕೊಂಡಿದ್ದಾರೆ. ಇವರ ಬಣಗಳಲ್ಲಿರುವ ನಾಯಕರ ನಡುವಿನ ಪೈಪೋಟಿ ಪಕ್ಷದ ಆಂತರಿಕ ಬಂಡಾಯಕ್ಕೆ ಕಾರಣವಾಗಬಹುದು.
ಈಗಾಗಲೇ ಸಿದ್ದರಾಮಯ್ಯನವರ ಜನ್ಮದಿನವನ್ನು ಅದ್ದೂರಿಯಾಗಿ ನಡೆಸಿದ ಅವರ ಬೆಂಬಲಿಗ ಮುಖಂಡರು ಡಿಕೆಶಿ ಅವರಿಗೆ ಮಗ್ಗುಲ ಮುಳ್ಳಾಗಲಿದ್ದಾರೆ ಎಂಬ ವಿಶ್ಲೇಷಣೆಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯನವರನ್ನು ಪರಿಗಣನೆಗೆ ತೆಗೆದುಕೊಳ್ಳದೇ ಹೋದಲ್ಲಿ ಅಸಮಾಧಾನದ ಕಿಡಿ ಹೊತ್ತಿಕೊಳ್ಳುವುದಂತೂ ಖಂಡಿತ ಎಂಬ ಮಾತನ್ನೂ ಅಲ್ಲಗಳೆಯುವಂತಿಲ್ಲ. ಇದನ್ನು ಡಿಕೆಶಿ ಹೇಗೆ ನಿಭಾಯಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಡಿಕೆಶಿ ಪರ ನಿಲ್ಲಲಿದ್ದಾರೆಯೇ ಮಲ್ಲಿಕಾರ್ಜುನ ಖರ್ಗೆ
ರಾಜ್ಯದಲ್ಲಿ ಸಿದ್ದರಾಮಯ್ಯ ವರ್ಚಸ್ಸು ಏನೇ ಇರಲಿ. ಮೂಲ ಕಾಂಗ್ರೆಸ್ಸಿಗರು ಮಾತ್ರ ವ್ಯಕ್ತಿಗಿಂತ ಪಕ್ಷ ಮುಖ್ಯವೆಂದು ಹೇಳುತ್ತಲೇ ಬಂದಿದ್ದಾರೆ. ಈಗ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರು ಮೂಲ ಕಾಂಗ್ರೆಸ್ಸಿಗರು. ಹೀಗಾಗಿ, ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯಗಿಂತ ಡಿಕೆಶಿ ಹೆಚ್ಚು ಆಪ್ತರೆಂಬುದು ನಮಗೆಲ್ಲ ತಿಳಿದಿರುವ ವಿಚಾರ. ಈ ಹಿನ್ನೆಲೆಯಲ್ಲಿ ನೋಡುವುದಾದರೆ, ಡಿಕೆಶಿ ಪರ ಮಲ್ಲಿಕಾರ್ಜುನ ಖರ್ಗೆ ನಿಲ್ಲಲಿದ್ದಾರೆ ಎಂಬ ಅಭಿಪ್ರಾಯಗಳನ್ನು ರಾಜಕೀಯ ವಿಶ್ಲೇಷಕರು ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಬಾಗಿಲು ತೆರೆದಿದೆ ಎಂದ ಡಿಕೆಶಿ
ಕಾಂಗ್ರೆಸ್ ಪಕ್ಷಕ್ಕೆ ಮರಳಿ ಬರಲು ಹಲವು ಮುಖಂಡರು ತಯಾರಾಗಿದ್ದಾರೆ ಎಂಬ ಮಾತುಗಳನ್ನು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ತಮ್ಮ ಮೇಲೆ ಮುನಿಸಿಕೊಂಡು ಅಥವಾ ಅಸಮಾಧಾನಗೊಂಡು ಪಕ್ಷದಿಂದ ಹೊರಹೋದವರು ಕಾಂಗ್ರೆಸ್ಗೆ ಮರಳಿ ಬನ್ನಿ ಎಂದು ಡಿಕೆಶಿ ಆಹ್ವಾನ ನೀಡಿದ್ದಾರೆ. ಡಿಕೆಶಿ ಅವರ ಆಹ್ವಾನ ಕರೆ ಎಷ್ಟು ಜನರು ಓಗೊಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.












Click it and Unblock the Notifications