ಬೆಂಗಳೂರು ಸೆಂಟ್ರಲ್ನಿಂದ ಸ್ಪರ್ಧೆಗೆ ರೆಡಿಯಾದ ಡಿಕೆಶಿ ಶಿಷ್ಯ: ಹೆಚ್ಚಾಯ್ತು ಕೈ ಪಡೆಯ ಲೆಕ್ಕಾಚಾರ!
ಬೆಂಗಳೂರು, ನವೆಂಬರ್ 29: 2023 ರ ವಿಧಾನಸಭಾ ಚುನಾವಣೆಯಲ್ಲಿ ಯಾರೂ ನಿರೀಕ್ಷೆ ಮಾಡದ ಫಲಿತಾಂಶವನ್ನ ಈ ಬಾರಿ ಕಾಂಗ್ರೆಸ್ ಕಂಡಿತ್ತು. ಮುಂದಿನ ಲೋಕಸಭಾ ಚುನಾವಣೆಗೂ ಕೂಡ ಈಗಿನಿಂದಲೂ ಕೂಡ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ.
ಹೌದು, ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆದ್ದ ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಈ ಬಾರೀ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ ಕನಿಷ್ಠ 20 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್ ಕಾಂಗ್ರೆಸ್ ಹೈಕಮಾಂಡ್ ನೀಡಿದೆ.

ಅಲ್ಲದೇ ಲೋಕಸಭಾ ಚುಣಾವಣೆಯ ಬಳಿಕ ರಾಜ್ಯ ರಾಜಧಾನಿಯಲ್ಲಿ ನಡೆಯುವ ಬಿಬಿಎಂಪಿ ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ನಾಯಕರು ಮಾಸ್ಟರ್ ಪ್ಲಾನ್ ನಡೆಸಿದ್ದು, ಅದರಂತೆ ಕಾಂಗ್ರೆಸ್ ನ ಬಲವನ್ನ ಕೆಳಹಂತದಿಂದಲೂ ಹೆಚ್ಚಿಸಿಕೊಳ್ಳಲು ಮುಂದಾಗಿದೆ.
ಈಗಾಗಲೇ ಬೆಂಗಳೂರು ವ್ಯಾಪ್ತಿಯಲ್ಲಿ ಕಾಂಗ್ರೆಸ್ ತನ್ನ ಪ್ರಬಲ್ಯವನ್ನ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನ ಅಸಮಾಧಾನಿತ ನಾಯಕರಿಗೆ ಗಾಳ ಹಾಕಿದ್ದು, ಬೆಂಗಳೂರು ವ್ಯಾಪ್ತಿಯಲ್ಲಿ ಕನಿಷ್ಠ ಎರಡು ಲೋಕಸಭಾ ಕ್ಷೇತ್ರವನ್ನ ಗೆಲ್ಲುವತ್ತ ಕಾಂಗ್ರೆಸ್ ನಾಯಕರು ತಂತ್ರಗಾರಿಕೆಯನ್ನ ನಡೆಸಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ, ಕರ್ನಾಟಕ ರಾಜ್ಯದ ಅತ್ಯಂತ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದ್ದು, ಬೆಂಗಳೂರಿನ ಹೃದಯಭಾಗ ಎನ್ನಲಾಗಿದೆ. ಸದ್ಯ ಬೆಂಗಳೂರು ಕೇಂದ್ರ ಕ್ಷೇತ್ರದ ಹಾಲಿ ಸಂಸದ ಪಿ.ಸಿ. ಮೋಹನ್ ಅವರಿದ್ದಾರೆ.
ಇತ್ತ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಶಿವಾಜಿನಗರ, ಶಾಂತಿನಗರ, ಸರ್ವಜ್ಞ ನಗರ, ಚಾಮರಾಜಪೇಟೆ, ಮಹದೇವಪುರ, ಗಾಂಧಿನಗರ, ರಾಜಾಜಿನಗರ ಮತ್ತು ಸಿ ವಿ ರಾಮನ್ ನಗರ ವಿಧಾನಸಭಾ ಕ್ಷೇತ್ರಗಳಿದ್ದು, ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಐದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ.

ಹೀಗಾಗಿ ಈ ಬಾರೀಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸುಲಭವಾಗಬಹುದು ಎಂದು ಕಾಂಗ್ರೆಸ್ ಶಾಸಕನ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಈ ಬಾರೀ ಬೆಂಗಳೂರು ಕೇಂದ್ರದಿಂದ ಸ್ಪರ್ಧಿಸಲು ರೆಡಿಯಾಗಿದ್ದಾರೆ ಎನ್ನಲಾಗಿದೆ.
ಶಾಂತಿನಗರ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಅವರು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಶಿಷ್ಯರಾಗಿದ್ದು, ಡಿ ಕೆ ಶಿವಕುಮಾರ್ ಜೊತೆಗೆ ಉತ್ತಮ ಒಡಾನಟವನ್ನ ಹೊಂದಿದ್ದಾರೆ.
ಅಲ್ಲದೇ ಅತೀ ಹೆಚ್ಚು ಉತ್ತರ ಭಾರತೀಯರು, ಮುಸ್ಲಿಮರು, ಕ್ರೈಸ್ತರು ಹಾಗೂ ತಮಿಳು ಮತದಾರರೇ ನಿರ್ಣಾಯಕವಾಗಿದ್ದಾರೆ. ಹೀಗಾಗಿ ಬೆಂಗಳೂರು ಕೇಂದ್ರದಲ್ಲಿ ಐದು ಜನ ಶಾಸಕರನ್ನ ಒಳಗೊಂಡಿದ್ದು, ಇಬ್ಬರು ಸಚಿವರಿದ್ದಾರೆ.
ಹೀಗಾಗಿ ಬೆಂಗಳೂರು ಕೇಂದ್ರದಲ್ಲಿ ಸ್ಪರ್ಧಿಸುವ ಕುರಿತು ಮೊಹಮದ್ ನಲಪಾಡ್ ಅವರು ಡಿ ಕೆ ಶಿವಕುಮಾರ್ ಬಳಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಐದು ಶಾಸಕರ ಜೊತೆಗಿನ ಬೆಂಬಲದಿಂದಾಗಿ ಈ ಬಾರೀ ಗೆಲುವು ಸುಲಭವಾಗಬಹುದು ಎನ್ನಲಾಗಿದೆ.
ಒಟ್ನಲಿ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಶಿಷ್ಯ ಮೊಹಮದ್ ನಲಪಾಡ್ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ರೆಡಿಯಾಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆ ಕಾಂಗ್ರೆಸ್ ನಾಯಕರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಪಂಚ ಗ್ಯಾರಂಟಿಗಳ ಜಾರಿಯಿಂದ ಈ ಬಾರೀ ಸುಲಭವಾಗಿ ಗೆಲ್ಲಬಹುದು ಎಂಬುದು ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರವಾಗಿದ್ರೆ, ಇತ್ತ ಕಾಂಗ್ರೆಸ್ ಪಾಳಯದಲ್ಲಿ ದಿನದಿಂದ ದಿನಕ್ಕೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಬೆಂಗಳೂರು ಕೇಂದ್ರದ ವಿಧಾನಸಭಾ ಕ್ಷೇತ್ರಗಳ ಪೈಕಿ ಹಾಲಿ ಶಾಸಕರಿಗೆ ಪಕ್ಷ ಮಣೆ ಹಾಕಲಿದೆಯೋ, ಹೊಸ ಮುಖಗಳಿಗೆ ಟಿಕೆಟ್ ನೀಡಲಿದೆಯೋ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಕಾಲವೇ ಉತ್ತರ ನೀಡಲಿದೆ.












Click it and Unblock the Notifications