DK Shivakumar: ಕಾಂಗ್ರೆಸ್ ಪಕ್ಷದಲ್ಲಿನ ಬಿಕ್ಕಟ್ಟು ಶಮನಕ್ಕೆ ಸಿಎಲ್ಪಿ ಸಭೆ: ಡಿ ಕೆ ಶಿವಕುಮಾರ್ ಏನಂದ್ರು?
ಬೆಂಗಳೂರು, ಜನವರಿ 09: ಕಾಂಗ್ರೆಸ್ ಪಾಳಯದಲ್ಲಿನ ಡಿನ್ನರ್ ಮೀಟಿಂಗ್ ನಿಂದಾಗಿ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಶುರುವಾಗಿದೆ. ಈ ಆಂತರಿಕ ಬಿಕ್ಕಟ್ಟಿನ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕಾಂಗ ಸಭೆ ಕರೆದಿದ್ದು, ಪಕ್ಷದಲ್ಲಿನ ಬಿಕ್ಕಟ್ಟು ಹಾಗೂ ಶಾಸಕಾಂಗ ಸಭೆ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, ನಮ್ಮಲ್ಲಿ ಯಾರಿಗೂ ಬಿಕ್ಕಟ್ಟಿಲ್ಲ. ಬಿಕ್ಕಟ್ಟಿದ್ದರೆ ನಿಮ್ಮಲ್ಲೇ (ಮಾಧ್ಯಮದವರಿಗೆ) ಇರಬೇಕು. ನಮ್ಮಲ್ಲಿ ಬಿಕ್ಕಟ್ಟಿದೆ ಎಂದು ಹೇಳಿದವರು ಯಾರು? ಎಂದು ಡಿ ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಬೇರೆ ಬೇರೆ ಹೇಳಿಕೆ ಕೇಳಿಬರುತ್ತಿವೆ ಎನ್ನುವ ಕುರಿತು ಮಾತನಾಡಿ, ಯಾವ ಹೇಳಿಕೆಯೂ ಇಲ್ಲ. ಕಾಂಗ್ರೆಸ್ ಕಚೇರಿಯಲ್ಲಿ ನಾನು, ಸರ್ಕಾರದ ವಿಚಾರದಲ್ಲಿ ಸಿಎಂ ಅವರ ಹೇಳಿಕೆಯೇ ಅಂತಿಮ. ಬೇರೆ ಹೇಳಿಕೆಗಳಿಗೆ ಬೆಲೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಶಾಸಕಾಂಗ ಪಕ್ಷದ ಸಭೆ ಕರೆದಿರುವುದು. ಗಾಂಧೀಜಿ ಅವರ ಮೌಲ್ಯಗಳನ್ನು ಉಳಿಸಲು, ಗಾಂಧಿ, ಅಂಬೇಡ್ಕರ್ ಅವರ ಮೌಲ್ಯಗಳು, ಸಂವಿಧಾನ ರಕ್ಷಣೆ ಮಾಡಬೇಕಲ್ಲವೇ. ನಮ್ಮ ಪಕ್ಷದ ಆಚಾರ ವಿಚಾರ ಪ್ರಚಾರ ಮಾಡಬೇಕಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನ ಜಾರಿಯಾದ ಕಾರಣ ನಾವು ಸಚಿವರಾಗಿದ್ದೇವೆ. ಮಾಧ್ಯಮಗಳಿಗೂ ಸ್ವಾತಂತ್ರ್ಯ ಸಿಕ್ಕಿದೆ. ಮುಂದಿನ ಪೀಳಿಗೆ ಯಾವ ದಿಕ್ಕಿನಲ್ಲಿ ಸಾಗಬೇಕು ಎಂದು ತಿಳಿಸಬೇಕಲ್ಲವೇ. ಹೀಗಾಗಿ ಸಭೆ ಮಾಡುತ್ತೇವೆ ಎಂದರು.
21ರ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ ಭಾಗವಹಿಸುತ್ತಾರಾ ಎನ್ನುವ ಪ್ರಶ್ನೆಗೆ ಉತ್ತರಿಸಿ, ಈ ಕಾರ್ಯಕ್ರಮಕ್ಕೆ ಯಾರೆಲ್ಲಾ ಆಗಮಿಸಲಿದ್ದಾರೆ ಎಂದು ದೆಹಲಿಯಿಂದಲೇ ಪಟ್ಟಿ ರವಾನೆಯಾಗಲಿದೆ. ಅದು ಬಂದ ನಂತರ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು. ವಿಧಾನ ಪರಿಷತ್ ಸದಸ್ಯತ್ವಕ್ಕೆ ನಾಮನಿರ್ದೇಶನಕ್ಕೆ ಇನ್ನು ಸಮಯವಿದೆ. ಈ ವಿಚಾರವನ್ನು ಮುಖ್ಯಮಂತ್ರಿಗಳಿಗೆ ವಹಿಸಿದ್ದೇವೆ. ಖಾಲಿಯಾಗುವ ಎಲ್ಲಾ ಸ್ಥಾನಗಳಿಗೂ ಒಟ್ಟಿಗೆ ನಾಮನಿರ್ದೇಶನ ಮಾಡಲಾಗುವುದು. ಹೈಕಮಾಂಡ್ ನಾಯಕರ ಜತೆ ಚರ್ಚಿಸಿ ಮುಖ್ಯಮಂತ್ರಿಗಳು ತೀರ್ಮಾನ ಮಾಡುತ್ತಾರೆ ಎಂದರು.
ಸರ್ಕಾರದ ಹಣ ವ್ಯರ್ಥ ಮಾಡುತ್ತಿದ್ದಾರೆ ಎಂಬ ಬಿಜೆಪಿ ಹಾಗೂ ಜೆಡಿಎಸ್ ಆರೋಪ ಕುರಿತು ಮಾತನಾಡಿ, ಅವರು ಆರೋಪ ಮಾಡುತ್ತಿರಲಿ. ನಾವು ನಮ್ಮ ಸಿದ್ಧಾಂತ, ಆಚಾರ ವಿಚಾರವನ್ನು ಸರ್ಕಾರದ ಮೂಲಕ ಹೇಳುತ್ತೇವೆ. ಬಸವಣ್ಣ, ಕೆಂಪೇಗೌಡ, ಅಂಬೇಡ್ಕರ್, ಗಾಂಧೀಜಿ ಅವರ ಪ್ರತಿಮೆ ಮಾಡುತ್ತೇವೆ. ಈ ದೇಶದಲ್ಲಿ ಅತಿ ಹೆಚ್ಚು ಪ್ರತಿಮೆಗಳಿರುವುದು ಅಂಬೇಡ್ಕರ್ ಅವರದ್ದು, ಕೆಲವರು ಇದನ್ನು ಮರೆತಿದ್ದಾರೆ. ಮರೆತಿದ್ದನ್ನು ನೆನಪಿಸಬೇಕಲ್ಲವೇ. ವಿಧಾನಸೌಧದ ಮುಂದೆ ಇರುವ ಅಂಬೇಡ್ಕರ್ ಅವರ ಹಾಗೂ ಗಾಂಧೀಜಿ, ನೆಹರೂ ಅವರ ಪ್ರತಿಮೆ ಸರ್ಕಾರದ್ದಲ್ಲವೇ? ಮುಂದಿನ ದಿನಗಳಲ್ಲಿ ಮನಮೋಹನ್ ಸಿಂಗ್ ಅವರು ಕೊಟ್ಟ ಕಾರ್ಯಕ್ರಗಳ ಬಗ್ಗೆಯೂ ಪ್ರಚಾರ ಮಾಡಲು ನಾವು ರೂಪುರೇಷೆ ಸಿದ್ಧಪಡಿಸುತ್ತಿದ್ದೇವೆ ಎಂದು ತಿಳಿಸಿದರು.
ಡಿ.ಕೆ. ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯಲಿದೆ ಎಂಬ ಬೊಮ್ಮಾಯಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ಮಾತನಾಡಲು ಪ್ರತ್ಯೇಕವಾಗಿ ಮತ್ತೊಂದು ಮಾಧ್ಯಮಗೋಷ್ಠಿ ನಡೆಸಿ ಉತ್ತರ ನೀಡುತ್ತೇನೆ. ಯಾರೆಲ್ಲಾ ಏನೇನು ಹೇಳಿದ್ದಾರೆ ಎಂದು ನೀವು ಪಟ್ಟಿ ಮಾಡಿಕೊಂಡಿರಿ, ಎಲ್ಲರಿಗೂ ಉತ್ತರ ನೀಡುತ್ತೇನೆ. ಅವರಿಗೆ ಹೊಸ ವರ್ಷದ ಸಂದರ್ಭದಲ್ಲಿ ಒಳ್ಳೆಯದಾಗಿಲಿ ಎಂದು ಶುಭಕೋರುತ್ತೇನೆ. ಅವರಿಗೆ ಸೂಜಿ ದಾರ ಕಳುಹಿಸಿಕೊಡುತ್ತೇನೆ. ಮೊದಲು ಅವರು ತಮ್ಮ ಒಡೆದ ಮನೆಯನ್ನು ಒಲಿದುಕೊಳ್ಳಲಿ ಎಂದರು.












Click it and Unblock the Notifications