DK Shivakumar: ಮಹಾರಾಷ್ಟ್ರದಲ್ಲಿ ರೆಸಾರ್ಟ್ ರಾಜಕೀಯ: ಡಿ ಕೆ ಶಿವಕುಮಾರ್ ಏನಂದ್ರು?
ಬೆಂಗಳೂರು, ನವೆಂಬರ್ 23: ಮಹಾರಾಷ್ಟ್ರದಲ್ಲಿ ನನ್ನ ಪ್ರಕಾರ ರೆಸಾರ್ಟ್ ರಾಜಕಾರಣ ಹೊರತಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ. ಈ ಬಗ್ಗೆ ನಮ್ಮಲ್ಲಿ ಚರ್ಚೆಯಾಗಿಲ್ಲ. ಅಲ್ಲಿನ ಶಾಸಕರು, ಪ್ರಜ್ಞಾವಂತರಿದ್ದಾರೆ. ಸಮಸ್ಯೆಯಾಗುವುದಿಲ್ಲ. ಜನ ನಮಗೆ ಮತ ನೀಡಿ, ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ನಾಳೆ ನೀವು ನಮಗೆ ಸಿಹಿ ಸುದ್ದಿ ಕೊಡಿ ಎಂದು ಪ್ರಾರ್ಥಿಸುತ್ತೇನೆ. ರೆಸಾರ್ಟ್ ರಾಜಕೀಯ ನಡೆಯಲ್ಲ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಬಗ್ಗೆ ಮಹಾರಾಷ್ಟ್ರದಲ್ಲಿ ಬಿಜೆಪಿ ಸುಳ್ಳು ಪ್ರಚಾರ ಮಾಡಿರುವ ಬಗ್ಗೆ ದೂರು ದಾಖಲಿಸುತ್ತೀರಾ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ಖಂಡಿತವಾಗಿಯೂ ದೂರು ದಾಖಲಿಸುತ್ತೇವೆ. ಈಗಾಗಲೇ ನಮ್ಮ ಮುಖ್ಯಮಂತ್ರಿಗಳು ಈ ವಿಚಾರವಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಬಿಜೆಪಿ ನಾಯಕರಿಗೆ ಕನಿಷ್ಠ ಪರಿಜ್ಞಾನವೂ ಇಲ್ಲ. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಪರಿಶೀಲನೆ ನಡೆಸಲು ಆಹ್ವಾನಿಸಿ ಜಾಹೀರಾತನ್ನು ನೀಡಿದ್ದೆ. ಈಗ ನಾವು ಅವರ ಮೇಲೆ ಮಾನಹಾನಿ ಪ್ರಕರಣ ದಾಖಲಿಸುತ್ತೇವೆ ಎಂದು ತಿಳಿಸಿದರು.

ಮಹಾರಾಷ್ಟ್ರದಲ್ಲಿ ನೀವು ಪ್ರಚಾರ ಮಾಡಿದ್ದು, ಅಲ್ಲಿನ ವಾತಾವರಣ ಹೇಗಿತ್ತು ಎಂಬ ಪ್ರಶ್ನೆಗೆ ಉತ್ತರಿಸಿ, ನಾನು ಸುಮಾರು 8-10 ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದೇನೆ. ನಾನು ಹೋದಲ್ಲೆಲ್ಲಾ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ. ಜನ ನಮ್ಮ ಮೇಲೆ ಹೆಚ್ಚಿನ ಒಲವು ತೋರಿದ್ದಾರೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
ವಯನಾಡಿನ ಉಪಚುನಾವಣೆ ಕುರಿತು ಮಾತನಾಡಿ, ವಯನಾಡಿನಲ್ಲೂ ಕಾಂಗ್ರೆಸ್ ಭಾರಿ ಮತಗಳ ಅಂತರದಲ್ಲಿ ಗೆಲ್ಲಲಿದೆ. ಅಲ್ಲಿನ ಶೇ.20ರಷ್ಟು ಮತದಾರರು ಬೇರೆ ದೇಶಗಳಲ್ಲಿದ್ದು, ಮತ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ ಎಂದು ಹೇಳಿದರು.
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಚುನಾವಣೆ ಫಲಿತಾಂಶದ ಜತೆ ನಿಮ್ಮ ಮೇಲೂ ಗಮನ ಕೇಂದ್ರೀಕರಿಸಿದೆ. ಅತಂತ್ರ ವಿಧಾನಸಭೆಯಾದರೆ ಶಾಸಕರನ್ನು ಕರೆತರುತ್ತೀರಾ ಎಂದು ಕೇಳಿದಾಗ, ಈ ವಿಚಾರವಾಗಿ ಎಐಸಿಸಿಯ ಯಾವುದೇ ನಾಯಕರು ನನ್ನನ್ನು ಸಂಪರ್ಕ ಮಾಡಿಲ್ಲ. ಅವರು ಈ ವಿಚಾರವಾಗಿ ನನ್ನನ್ನು ಸಂಪರ್ಕಿಸಿದರೆ ಬೇರೆ ವಿಚಾರ. ಈಗಿನವರೆಗೂ ನಮ್ಮಲ್ಲಿ ಅಂತಹ ಯಾವುದೇ ಆಲೋಚನೆಗಳಿಲ್ಲ. ಮಾಧ್ಯಮಗಳಲ್ಲಿ ಬರುವ ಫಲಿತಾಂಶ ವರದಿಯನ್ನು ನೋಡುವುದಷ್ಟೇ ನಮ್ಮ ಮುಂದಿರುವ ಆಯ್ಕೆ ಎಂದು ತಿಳಿಸಿದರು.
ಎಐಸಿಸಿ ಅಧ್ಯಕ್ಷರ ಜತೆ ದೂರವಾಣಿ ಕರೆ ಮೂಲಕ ನೀವು ಏನು ಚರ್ಚೆ ಮಾಡಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿ, ನಾನು ಎಐಸಿಸಿ ಅಧ್ಯಕ್ಷರ ಜತೆ ದೂರವಾಣಿ ಕರೆಯಲ್ಲಿ ಮಾತನಾಡಿದ್ದು ನಿಮಗೆ ಹೇಗೆ ತಿಳಿಯಿತು. ಅವರು ಚಿಕಿತ್ಸೆ ಉದ್ದೇಶದಿಂದ ನಿನ್ನೆ ಬೆಂಗಳೂರಿಗೆ ಬಂದಿದ್ದು, ಇಂದು ವಾಪಸ್ ಮರಳಿದ್ದಾರೆ. ನಾನು ಅವರೊಂದಿಗೆ ಮಾತನಾಡಿದ್ದು ನಿಜ, ಆದರೆ ರಾಜಕೀಯ ಹೊರತಾಗಿ ಬೇರೆ ವಿಚಾರವಾಗಿ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಜಮೀರ್ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ನಾನು ವೈಯಕ್ತಿಕವಾಗಿ ಜಮೀರ್ ಜತೆ ಮಾತನಾಡಿದ್ದೇನೆ. ಅವರು ಪಕ್ಷದ ಪ್ರಮುಖ ನಾಯಕರು. ಭಾವನಾತ್ಮಕವಾಗಿ ಅವರು ಮಾತನಾಡಿದ್ದಾರೆ. ಅವರ ಹೇಳಿಕೆ ತಪ್ಪು ಎಂದು ನಾನು ಹಾಗೂ ಮುಖ್ಯಮಂತ್ರಿಗಳು ಹೇಳಿದ್ದೇವೆ. ಈ ವಿಚಾರವನ್ನು ನಾವು ಪಕ್ಷದ ಆಂತರಿಕವಾಗಿ ಚರ್ಚೆ ಮಾಡುತ್ತೇವೆ, ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ತಿಳಿಸಿದರು.












Click it and Unblock the Notifications