ಸತೀಶ್ ಜಾರಕಿಹೊಳಿ ಸೇರಿದಂತೆ 30 ಕ್ಕೂ ಹೆಚ್ಚು ಶಾಸಕರ ದುಬೈಗೆ: ಅಚ್ಚರಿ ಹೇಳಿಕೆ ನೀಡಿದ ಡಿ ಕೆ ಶಿವಕುಮಾರ್
ಬೆಳಗಾವಿ, ಜನವರಿ18: ಬೆಳಗಾವಿಯಲ್ಲಿ ಗಾಂಧಿ ಭಾರತ ಯಾತ್ರೆಯ ಪೂರ್ವಭಾವಿ ಕಾಂಗ್ರೆಸ್ ಸಭೆಯಲ್ಲಿ ಗದ್ದಲ ಸೃಷ್ಟಿಯಾದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಪಾಳಯದಲ್ಲಿ ಮತ್ತೊಂದು ಅಚ್ಚರಿ ಬೆಳವಣಿಗೆ ನಡೆಯುತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಆಪ್ತರೂ ಸೇರಿದಂತೆ, ಮೊದಲ ಬಾರಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ದುಬೈ ಪ್ರವಾಸಕ್ಕೆ ಯೋಜನೆ ಮಾಡಿರುವುದು ತಿಳಿದುಬಂದಿದ್ದು, ಈ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ವಿದೇಶಿ ಪ್ರವಾಸದ ಕುರಿತು ಇದರ ಬಗ್ಗೆ ನನಗೆ ಹೆಚ್ಚು ತಿಳಿದಿಲ್ಲ. ನಾನು ಇದರ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಏನಿದ್ದರೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಾಹೇಬರನ್ನು ಕೇಳಿ. ನನ್ನದೇನ್ನಿದ್ದರೂ ಸಮಾವೇಶ, ಪಕ್ಷ ಸಂಘಟನೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ನನ್ನನ್ನೂ ಸೇರಿದಂತೆ ಎಲ್ಲರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು, ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ. ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ರಾಷ್ಟೀಯ ನಾಯಕರು. ಅವರ ಹಾಗೂ ಪಕ್ಷದ ವರಿಷ್ಟರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಕಾರ್ಯಕರ್ತರಾಗಿ ದುಡಿಯುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಸ್ಪಷ್ಟಪಡಿಸಿದರು.
ಸಚಿವ ಆರ್. ಬಿ. ತಿಮ್ಮಾಪುರ ಅವರ ದಲಿತ ಸಿಎಂ ಹೇಳಿಕೆ ಹಾಗೂ ಸಿದ್ದರಾಮಯ್ಯ ಅವರೇ ನಮ್ಮ ನಾಯಕರು ಎನ್ನುವ ಹೇಳಿಕೆ ಕುರಿತು ಮಾತನಾಡಿ, ಏನೇನೋ ಹೇಳುವ ನಿಮ್ಮ (ಮಾಧ್ಯಮ) ಮಾತುಗಳಿಗೆ ನಾನು ಉತ್ತರ ನೀಡಲು ಸಿದ್ಧನಿಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಬೆಳಗಾವಿಯಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎನ್ನುವ ಬಿಜೆಪಿಯವರ ಟೀಕೆಯ ಕುರಿತು ಮಾಧ್ಯಮಗಳ ಪ್ರಶ್ನಗೆ ಉತ್ತರಿಸಿದ್ದು, ಇದೇ ಬೆಳಗಾವಿ ನೆಲದಲ್ಲಿನ ಗಾಂಧಿ ಬಾವಿಯಿಂದ ನೀರನ್ನು ತೆಗೆದು ನೆಲವನ್ನು ಸ್ವಚ್ಛ ಮಾಡಿ. ಬಿಜೆಪಿ ಮಾಡಿದ್ದ ಕೊಳೆ, ಕಸವನ್ನು ಗುಡಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ಎಂದು ತಿರುಗೇಟು ನೀಡಿದರು. ನಕಲಿ ಗಾಂಧಿಗಳು ಸಮಾವೇಶ ಮಾಡುತ್ತಿದ್ದಾರೆ ಎನ್ನುವ ಬಿಜೆಪಿಯವರ ಟೀಕೆ ತಿರುಗೇಟು ಕೊಟ್ಟ ಡಿ ಕೆ ಶಿವಕುಮಾರ್, ಬಹಳ ಸಂತೋಷ. ಇಡೀ ದೇಶದಲ್ಲಿ ಒಬ್ಬರೇ ಗಾಂಧಿ ಇರುವುದು. ನಾವೆಲ್ಲರೂ ಸಹ ಗಾಂಧಿ ವಂಶಸ್ಥರೇ, ಗಾಂಧಿ ಅವರು ಕಟ್ಟಿದ ಭಾರತದವರು. ಅದಕ್ಕೆ ನಾವು ಗಾಂಧಿ ಭಾರತ ಎಂದು ಹೆಸರಿಟ್ಟು ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು.
ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ತಯಾರಿ ಕುರಿತು ಹುಬ್ಬಳ್ಳಿ, ಧಾರವಾಡ, ಹಾವೇರಿ ಸೇರಿದಂತೆ ಈ ಭಾಗದ ಮುಖಂಡರ ಪೂರ್ವಭಾವಿ ಸಭೆ ಕರೆಯಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಇಡೀ ಕಾರ್ಯಕ್ರಮದ ತಯಾರಿಯನ್ನು ಬೆಳಗಾವಿಯಲ್ಲಿ ಪರಿಶೀಲನೆ ಮಾಡಿದ್ದಾರೆ. ಶನಿವಾರ (ನಾಳೆ) ಧಾರವಾಡದಲ್ಲಿ ಸಮಾವೇಶದ ತಯಾರಿ ಕುರಿತು ಮತ್ತೊಂದು ಸುತ್ತಿನ ಸಭೆಯಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಠಾತ್ ನಿಧನದಿಂದ ಬಹಳ ವಿಜೃಂಭಣೆಯಿಂದ ಆಯೋಜನೆಗೊಂಡಿದ್ದ ಸಮಾವೇಶ ಮುಂದೂಡಲಾಯಿತು. ಇದೇ 26- 27 ರಂದು ಎಐಸಿಸಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜನಿಸಿದ ಮಧ್ಯಪ್ರದೇಶದ ಮಾಹೋದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನೂರು ವರ್ಷಗಳ ಹಿಂದೆ ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಅಧಿವೇಶನದ ಸ್ಥಳದಲ್ಲಿಯೇ ಕಳೆದ ವರ್ಷ ಡಿ. 26 ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಿದ್ದೆವು. ಅದರಲ್ಲಿ ಎಐಸಿಸಿ ಅಧ್ಯಕ್ಷರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್ ಗಾಂಧಿ ಅವರು ಭಾಗವಹಿಸಿದ್ದರು. ಈ ಸಭೆಯಲ್ಲಿ ಹಲವಾರು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿತ್ತು. ನೂರು ವರ್ಷಗಳ ಹಿಂದಿನ ನಿರ್ಣಯಗಳು ಹಾಗೂ ಡಿಸೆಂಬರ್ ಅಲ್ಲಿ ತೆಗೆದುಕೊಂಡಿದ್ದ ನಿರ್ಣಯಗಳನ್ನು ಹಾಗೂ ಒಂದಷ್ಟು ಇತಿಹಾಸದ ಪುಸ್ತಕಗಳನ್ನು ಜ. 21 ರಂದು ನಡೆಯುವ ಸಮಾವೇಶದಲ್ಲಿ ಬಿಡುಗಡೆ ಮಾಡಲಾಗುವುದು.ಪ್ರತಿ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 100 ಜನರು ಬರಬೇಕು ಎಂದು ತಿಳಿಸಿದ್ದೇವೆ.












Click it and Unblock the Notifications