ಡಿ ಕೆ ಸುರೇಶ್ಗೆ ಮಹತ್ವದ ಹುದ್ದೆ: ಕೆಎಂಎಫ್ ಚುನಾವಣೆಯಲ್ಲಿ ಸ್ಪರ್ಧೆ?
ಬೆಂಗಳೂರು, ಫೆಬ್ರವರಿ 19: ರಾಜ್ಯ ರಾಜಕೀಯದಲ್ಲಿ ಮಾರ್ಚ್ ಬಳಿಕ ಮಹತ್ವದ ಬದಲಾವಣೆಗಳಾಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಈ ನಡುವೆ ಕೈ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಚಿವ ಸಂಪುಟ ರಚನೆ ಕುರಿತು ಗುಸು ಗುಸು ಕೇಳಿ ಬರುತ್ತಿದ್ದು, ಬಜೆಟ್ ಅಧಿವೇಶನ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳಾಗಲಿದೆ ಎಂದು ಹೇಳಲಾಗಿದೆ.
ಇತ್ತ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನ ಕೆಳಗಿಳಿಸಲು ಕೈ ನಾಯಕರು ಒಂದಾಗಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಅಲ್ಲದೇ ಕಳೆದ ರ ಲೋಕಸಭಾ ಚುಣಾವಣೆಯ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆ ನಡೆಸಿದ್ದ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಹೋದರ ಡಿ ಕೆ ಸುರೇಶ್ ಅವರು ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಅವರ ವಿರುದ್ಧ ಸೋಲು ಅನುಭವಿಸಿದ್ರು. ಇದೀಗ ಬೆಂಗಳೂರು ಗ್ರಾಮಾಂತರದ ಮಾಜಿ ಸಂಸದ ಡಿ.ಕೆ ಸುರೇಶ್ ಅವರಿಗೆ ಮಹತ್ವದ ಸ್ಥಾನ ನೀಡಲು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕಸರತ್ತು ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಹೋದರ ಹಾಗೂ ಮಾಜಿ ಸಂಸದರಾದ ಡಿ ಕೆ ಸುರೇಶ್ ಅವರಿಗೆ ವಿಧಾನ ಪರಿಷತ್ ಸ್ಥಾನವನ್ನ ನೀಡುವ ನಿಟ್ಟಿನಲ್ಲಿ ಡಿ ಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಇದೀಗ ಮಾಜಿ ಸಂಸದ ಡಿ ಕೆ ಸುರೇಶ್ ಅವರು ಕೆಎಂಎಫ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಮಾತು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರುತ್ತಿದೆ.
ಈ ಕುರಿತು ಡಿ ಕೆ ಸುರೇಶ್ ಅವರು ಮಾತನಾಡಿ, ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ಜನ ನನಗೆ ವಿಶ್ರಾಂತಿ ನೀಡಿದ್ದಾರೆ ಎಂದು ತಿಳಿಸಿದರು. ನಾನು ಹೊಸತಾಗಿ ಹಾಲು ಹಾಕುತ್ತಿಲ್ಲ. ಇಲ್ಲಿಯವರೆಗೂ ನಮ್ಮ ತಾಯಿ ನನ್ನ ಹೆಸರಿನಲ್ಲಿ ಹಾಲು ಹಾಕುತ್ತಿದ್ದರು. ಈಗ ನಾನು ಅದನ್ನು ಮುಂದುವರಿಸುತ್ತಿದ್ದೇನೆ. ಹಾಲು ಉತ್ಪಾದನೆಯನ್ನು ನಾನು ಈಗ ಆರಂಭಿಸಿಲ್ಲ. ಶಿವಕುಮಾರ್ ಅವರು ಸಹಕಾರ ಸಚಿವರಾಗಿದ್ದಾಗಲೇ ಡೈರಿ ಮಾಡಲು ಮುಂದಾಗಿದ್ದೆ. ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂಬ ಉದ್ದೇಶದಿಂದ ಒಂದೇ ದಿನ 40-50 ಡೈರಿ ಆರಂಭಿಸಿದ್ದೆವು. ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಬಮುಲ್ ವತಿಯಿಂದ ಕನಕಪುರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಮೆಘಾ ಡೈರಿ ಆರಂಭಿಸಿದ್ದೇವೆ.
ಆಗಾಗಾ ಹಾಲು ಉತ್ಪಾದನಾ ವಲಯದ ಆಗುಹೋಗುಗಳನ್ನು ನಾನು ಪರಿಶೀಲಿಸುತ್ತೇನೆ. ರೇಷ್ಮೆ ಹಾಗೂ ಹಾಲಿನಲ್ಲಿ ರೈತರ ಬದುಕು ಅಡಗಿದೆ. ಈ ಎರಡು ಕ್ಷೇತ್ರದ ಮೇಲೆ ನಮ್ಮ ಜಿಲ್ಲೆ ಜನ ಅವಲಂಭಿತವಾಗಿದ್ದು, ಇದಕ್ಕೆ ಅಗತ್ಯವಿರುವ ಪ್ರೋತ್ಸಾಹ, ಮಾರ್ಗದರ್ಶನಗಳನ್ನು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದು, ಇದನ್ನು ಮಾಡುತ್ತಿದ್ದೇನೆ ಎಂದರೆ ಚುನಾವಣೆಗೆ ನಿಲ್ಲುತ್ತೇನೆ ಎಂಬ ಅರ್ಥವಲ್ಲ. ಚುನಾವಣೆಗೆ ನಿಲ್ಲುವ ಇರಾದೆಯೂ ನನ್ನದಲ್ಲ ಎಂದು ಡಿ ಕೆ ಸುರೇಶ್ ಸ್ಪಷ್ಟಪಡಿಸಿದರು.












Click it and Unblock the Notifications