ಸಿಎಂ ಕುರ್ಚಿ ಮೇಲೆ ಬಂಡೆ ಕಣ್ಣು; 2028ರ ಚುನಾವಣೆಯಲ್ಲೂ ಸಿದ್ದರಾಮಯ್ಯ ಸ್ಪರ್ಧೆ: ಡಿ ಕೆ ಬ್ರದರ್ಸ್ ಏನಂದ್ರು?
ಬೆಂಗಳೂರು, ಅಕ್ಟೋಬರ್ 30: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ಜೊತೆಗೆ ಚರ್ಚೆಗಳು ನಡೆಯುತ್ತಿವೆ. ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದಾರೆ. ನವೆಂಬರ್ನಲ್ಲಿ ಮುಖ್ಯಮಂತ್ರಿ ಬದಲಾವಣೆ, ಅಧಿಕಾರ ಹಂಚಿಕೆ, 2028ರ ವಿಧಾನಸಭಾ ಚುನಾವಣೆ ಹೀಗೆ ಹಲವಾರು ವಿಚಾರದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ತನ್ನ ರಾಜಕೀಯ ಜೀವನದ ಬಗ್ಗೆ ಸ್ಫೋಟಕ ಮಾಹಿತಿ ಹಂಚಿಕೊಂಡಿದ್ದು, 2028ರ ವಿಧಾನಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಹೇಳಿಕೆ ನೀಡಿದ್ದಾರೆ. 2028ರ ವಿಧಾನಸಭಾ ಚುನಾವಣೆಯಲ್ಲೂ ನಾನು ಸ್ಪರ್ಧೆ ಮಾಡಬೇಕು ಎಂದು ನನ್ನ ಸ್ನೇಹಿತರು, ಬೆಂಬಲಿಗರು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ನೂ 2028 ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಪರ್ಧೆ ಖಚಿತವಾಗಿದ್ದು, ಈ ಅವಧಿಯಲ್ಲಿ ಮಾತ್ರವಲ್ಲದೇ ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಬೇಕು ಎನ್ನುವ ಮಾತು ಕೈ ಪಾಳಯದಲ್ಲಿ ಕೇಳಿ ಬರುತ್ತಿದೆ. ಈ ಕುರಿತು ಮಾಜಿ ಸಂಸದರಾದ ಡಿ ಕೆ ಸುರೇಶ್ ಅವರು ಪ್ರತಿಕ್ರಿಯಿಸಿದ್ದು, ರಾಜಕೀಯದಲ್ಲಿ 95-98 ವರ್ಷ ಆದವರೂ ಇದ್ದಾರೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತೇನೆ ಎನ್ನುವುದರಲ್ಲಿ ಯಾವ ತಪ್ಪೂ ಇಲ್ಲ. ಅವರು ನಮ್ಮ ನಾಯಕರು. ಮುಂದಿನ ಚುನಾವಣೆಯನ್ನು ಅವರ ನೇತೃತ್ವದಲ್ಲಿ ಎದುರಿಸುತ್ತೇವೆ ಎಂದರು.

ಸಿದ್ದರಾಮಯ್ಯ ಅವರು ಅನಿವಾರ್ಯವೇ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ್ದು, ಒಬ್ಬ ನಾಯಕನಿಗೆ ಇರಬೇಕಾದ ಎಲ್ಲಾ ಅವಕಾಶಗಳು ಅವರಿಗಿದೆ. ಎಲ್ಲರಿಗಿಂತ ಗಟ್ಟಿಯಾಗಿ, ಚೆನ್ನಾಗಿ ಓಡಾಡುತ್ತಿದ್ದಾರೆ. ದಿನನಿತ್ಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಉತ್ತಮವಾಗಿ ಆಡಳಿತ ನಡೆಯುತ್ತಿದೆ. ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸುವುದರಲ್ಲಿ ತಪ್ಪೇನಿಲ್ಲ ಎಂದ ಅವರು, ಎರಡೂವರೆ ವರ್ಷದ ನಂತರ ಅಧಿಕಾರ ಹಸ್ತಾಂತರ ಎನ್ನುವ ವಿಚಾರದ ಬಗ್ಗೆ ಹೆಚ್ಚು ಮಾಹಿತಿಯಿಲ್ಲ. ಇದು ಎರಡೂವರೆ ವರ್ಷದ ವಿಚಾರವಲ್ಲ. ಐದು ವರ್ಷಗಳ ಕಾಲ ಕೆಲಸ ಮಾಡಿ ಎಂದು ಜನ ಆಶೀರ್ವಾದ ಮಾಡಿದ್ದಾರೆ. 140 ಸ್ಥಾನಗಳನ್ನು ಕೊಟ್ಟಿದ್ದಾರೆ. ನಾವು ಜನರ ಹಿತವನ್ನು ಕಾಯಬೇಕು. ಕೊಟ್ಟಿರುವ ಮಾತು ಉಳಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪಕ್ಷ ಹಾಗೂ ಸರ್ಕಾರ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದರು.
ನಾಯಕತ್ವ ಬದಲಾವಣೆಯ ಗೊಂದಲ ಆಡಳಿತದ ಮೇಲೆ ಪರಿಣಾಮ ಬೀರುತ್ತಿಲ್ಲವೇ ಎಂಬ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಮಾತನಾಡಿ, ನನಗೆ ಆಡಳಿತ ನಡೆಸಿ ಅನುಭವವಿಲ್ಲ. ಸಂಸದನಾಗಿ ಇರುವುದೇ ಬೇರೆ. ಆಡಳಿತ ನಡೆಸುವುದೇ ಬೇರೆ ಎಂದರು. ಗಾಂಧಿ ಭಾರತ ಕಾರ್ಯಕ್ರಮ ನಡೆಯುವ ವೇಳೆಯಲ್ಲಿಯೇ ನೂರು ಕಾಂಗ್ರೆಸ್ ಕಚೇರಿಗಳನ್ನು ಕಟ್ಟಬೇಕು ಎಂದು ತೀರ್ಮಾನ ಮಾಡಲಾಗಿತ್ತು. ಎಲ್ಲೆಲ್ಲಿ ನಿವೇಶನಗಳಿವೆಯೋ ಅಲ್ಲೆಲ್ಲಾ ಕಚೇರಿ ನಿರ್ಮಾಣಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಯನ್ನು ಪಕ್ಷದ ಅಧ್ಯಕ್ಷರು ಹಾಗೂ ಕಾರ್ಯಾಧ್ಯಕ್ಷರು ನೀಡುತ್ತಾರೆ ಎಂದರು.
ಸರ್ಕಾರದ ಆಡಳಿತ ನೋಡಿ ಕಾರ್ಯಕರ್ತರು ತೃಪ್ತರಾಗಿದ್ದಾರೆಯೇ ಎಂದು ಕೇಳಿದಾಗ, ಎಲ್ಲರನ್ನೂ ತೃಪ್ತಿಪಡಿಸಲು ಆಗುವುದಿಲ್ಲ. ಯಾವುದೇ ಸರ್ಕಾರ ಇದ್ದರೂ ನಾಯಕರು ಕಾರ್ಯಕರ್ತರ ಅಭಿಪ್ರಾಯ ಬೇರೆ, ಬೇರೆ ಇದ್ದೇ ಇರುತ್ತದೆ. ಇದನ್ನು ಸರಿದೂಗಿಸುವ ಕೆಲಸವನ್ನು ಪಕ್ಷ ಹಾಗೂ ನಾಯಕತ್ವ ಮಾಡುತ್ತದೆ ಎಂದರು. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ಕಾಂಗ್ರೆಸ್ ಕಚೇರಿಗಳಿಗೆ ಬೀಗ ಹಾಕಬೇಕಾಗುತ್ತದೆ ಎನ್ನುವ ಕೆ.ಎನ್. ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಹಿರಿಯ ನಾಯಕರಾದ ಅವರು ಸಲಹೆಗಳನ್ನು ನೀಡುತ್ತಿದ್ದಾರೆ. ತಮ್ಮ ಸಲಹೆಗಳನ್ನು ಪಕ್ಷದ ವರಿಷ್ಠರಿಗೆ ತಿಳಿಸುತ್ತಿದ್ದಾರೆ ಎಂದರು.












Click it and Unblock the Notifications