Union Budget 2025: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ ಏನು ಗೊತ್ತಾ?
Union Budget 2025: ಕೇಂದ್ರ ಬಜೆಟ್ ಸಮೀಪಿಸುತ್ತಿದ್ದು, ಮಧ್ಯಮ ವರ್ಗದವರು ತುಂಬಾ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಅದರಲ್ಲೂ ಎಲ್ಲಾ ರಾಜ್ಯಗಳಂತೆ ಕರ್ನಾಟಕ ಸರ್ಕಾರ ಕೂಡ ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ದೊಡ್ಡ ಕೊಡುಗೆ ಸಿಗುವ ಭರವಸೆಯಲ್ಲಿದೆ. ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಕೆಂದ್ರ ಸರ್ಕಾರಕ್ಕೆ ಮಹತ್ವದ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದಿನ ಬಜೆಟ್ನಲ್ಲಿ ಘೋಷಣೆ ಮಾಡಿದ್ದ 5,300 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಅವರು, 2023-24ನೇ ಸಾಲಿನ ಕೇಂದ್ರದ ಬಜೆಟ್ನಲ್ಲಿ 5,300 ಕೋಟಿ ರೂಪಾಯಿ ಅನುದಾನದ ಜೊತೆಗೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವುದಾಗಿ ತಿಳಿಸಲಾಗಿತ್ತು. ಆದರೆ, 3 ವರ್ಷವಾದರೂ ಅನುದಾನ ಬಿಡುಗಡೆ ಮಾಡಿಲ್ಲ. ಈ ವರ್ಷವಾದ್ರೂ ಬಿಡುಗಡೆ ಮಾಡಿ ಎಂದು ಹಣಕಾಸು ಮತ್ತು ಜಲಶಕ್ತಿ ಸಚಿವಾಲಯಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳ ಸುಮಾರು 2.25 ಲಕ್ಷ ಹೆಕ್ಟೇರ್ ಭೂ ಪ್ರದೇಶಕ್ಕೆ ಹನಿ ನೀರಾವರಿ ಒದಗಿಸಲಿದೆ. ಅಲ್ಲದೆ, 367 ಕೆರೆಗಳಿಗೆ ನೀರು ತುಂಬಿಸಲಿದೆ. 2008ರಲ್ಲಿ ಈ ಯೋಜನೆಯ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಈವರೆಗೆ 10,121.75 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ.
ಡಿಸೆಂಬರ್ 24, 2020ರಂದು ಭದ್ರಾ ಮೇಲ್ದಂಡೆ ಯೋಜನೆಯ ತಾಂತ್ರಿಕ ಆರ್ಥಿಕ ಕಾರ್ಯಸಾಧುವನ್ನು ಜಲಶಕ್ತಿ ಸಚಿವಾಲಯದ ಸಲಹಾ ಸಮಿತಿ ಅನುಮೋದಿಸಿದೆ. 2021 ಮಾರ್ಚ್ನಲ್ಲಿ 15ನೇ ಬಂಡವಾಳ ಮಂಜೂರಾತಿ ಸಮಿತಿ 16,125 ಕೋಟಿ ರೂಪಾಯಿ ಮೊತ್ತದ ಹೂಡಿಕೆಗೆ ಅನುಮೋದನೆ ನೀಡಿದೆ. ಅಲ್ಲದೆ, ಉನ್ನತ ಮಟ್ಟದ ಸಂಚಲನಾ ಸಮಿತಿ ಈಗಾಗಲೇ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಶಿಫಾರಸು ಮಾಡಿದೆ ಎಂದರು.
2023-24ರ ಕೇಂದ್ರ ಬಜೆಟ್ ಭಾಷಣದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುವ ಘೋಷಣೆ ಮಾಡಿತ್ತು. ಆದರೆ, ಈಗಾಗಲೇ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವುದು ವಿಳಂಬ ಆಗಿದೆ. ಕೇಂದ್ರ ಆರ್ಥಿಕ ನೆರವನ್ನು ಬಿಡುಗಡೆ ಮಾಡದಿರುವ ಹಿನ್ನೆಲೆ ಯೋಜನೆಯ ಪ್ರಗತಿ ಕುಂಠಿತ ಆಗಿದೆ. ಯೋಜನೆಯ ಕಾಮಗಾರಿ ಪ್ರಗತಿ ತ್ವರಿತಕ್ಕಾಗಿ 5,300 ಕೋಟಿ ರೂಪಾಯಿ ಕೇಂದ್ರದ ನೆರವನ್ನು ಬಿಡುಗಡೆ ಮಾಡುವುದು ಅಗತ್ಯ ಆಗಿದೆ ಎಂದು ಮನವಿ ಮಾಡಿದ್ದಾರೆ.
ಕೆಲವು ವರ್ಷ ಮಳೆಯ ಕೊರತೆಯಿಂದ ಕರ್ನಾಟಕದ ರೈತರು ನೀರಿನ ಅಭಾವವನ್ನು ಎದುರಿಸುತ್ತಿದ್ದಾರೆ. ರೈತರ ಹಿತಾಸಕ್ತಿಯನ್ನು ಕಾಪಾಡಲು ಮೇಲಿನ ಭದ್ರಾ ಯೋಜನೆಯನ್ನ ಸಾಧ್ಯ ಆದಷ್ಟು ಬೇಗ ಪೂರ್ಣಗೊಳಿಸಬೇಕಿದೆ. ಆದ್ದರಿಂದ ಮುಂಬರುವ 2025-26ನೇ ಸಾಲಿನ ಬಜೆಟ್ನಲ್ಲಿ ಅನುದಾನ ದೊರಕಿಸಿಕೊಡಬೇಕು. ಹಣಕಾಸು ಸಚಿವಾಲಯ ಮತ್ತು ಜಲಶಕ್ತಿ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು. ಬರಪೀಡಿತ ಜಿಲ್ಲೆಗಳ ರೈತರು ಮತ್ತು ಜನರಿಗೆ ನೆರವಾಗಬೇಕೆಂದು ಮನವಿ ಮಾಡಿದ್ದಾರೆ.
ಈ ಪತ್ರದ ಪ್ರತಿಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಲಶಕ್ತಿ ಸಚಿವರಾದ ಸಿ.ಆರ್. ಪಾಟೀಲ್, ವಿ. ಸೋಮಣ್ಣ ಅವರಿಗೂ ಕಳುಹಿಸಿದ್ದಾರೆ. ಇನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2025ರಂದು ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ ಅವರು 8ನೇ ಬಾರಿ ಬಜೆಟ್ ಮಂಡನೆ ಮಾಡಿದ ಕೀರ್ತಿಗೆ ಪಾತ್ರರಾಗಲಿದ್ದಾರೆ.












Click it and Unblock the Notifications