ಕಾಂಗ್ರೆಸ್ ಬಗ್ಗೆ ಅಮಿತ್ ಶಾಗೆ ಭಯ - ಯು.ಟಿ. ಖಾದರ್ ವ್ಯಂಗ್ಯ
ಮಂಗಳೂರು, ಫೆಬ್ರವರಿ 9: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರಾವಳಿ ಜಿಲ್ಲೆಗಳಲ್ಲಿರುವ ಕಾಂಗ್ರೆಸ್ ಶಕ್ತಿ ಬಗ್ಗೆ ಆತಂಕಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಸಚಿವ ಯು.ಟಿ. ಖಾದರ್ ವ್ಯಂಗ್ಯವಾಡಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು, "ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ಈ ವಿಚಾರ ಅಮಿತ್ ಶಾ ಅವರನ್ನು ಕಾಡುತ್ತಿದೆ," ಎಂದು ಹೇಳಿದರು.
ಆದರೆ ಕರಾವಳಿ ಜಿಲ್ಲೆಗಳಲ್ಲಿರುವ ಕಾಂಗ್ರೆಸ್ ಭದ್ರಕೋಟೆಯನ್ನು ಒಡೆಯುವುದು ಅಮಿತ್ ಶಾ ಅವರಿಂದ ಸಾಧ್ಯವಿಲ್ಲ ಎಂದು ಖಾದರ್ ವಿಶ್ವಾಸ ವ್ಯಕ್ತಪಡಿಸಿದರು.

ಅಮಿತ್ ಶಾ ಕರಾವಳಿಗೆ ಬಂದು ಅಭಿವೃದ್ಧಿ ವಿಚಾರವಾಗಿ ಮಾತನಾಡಲಿ. ಅದನ್ನು ಬಿಟ್ಟು ಹಿಂದು - ಮುಸ್ಲಿಮರ ನಡುವೆ ಬಿರುಕು ಮೂಡಿಸುವ ಕೆಲಸಕ್ಕೆ ಕೈಹಾಕಬಾರದು ಎಂದು ಅವರು ಹೇಳಿದರು. "ಕರಾವಳಿ ಜಿಲ್ಲೆಗಳಲ್ಲಿ ಹಿಂದು-ಮುಸ್ಲಿಮರು ಸೋದರತೆಯಿಂದ ಸೌಹಾರ್ದದಲ್ಲಿದ್ದಾರೆ. ದಯವಿಟ್ಟು ಕರಾವಳಿ ಜಿಲ್ಲೆಗಳಲ್ಲಿ ಸೌಹಾರ್ದ ಕದಡುವ ಕೆಲಸ ಮಾಡುವುದು ಬೇಡ," ಎಂದು ಖಾದರ್ ಅಮಿತ್ ಶಾ ಅವರಲ್ಲಿ ಮನವಿ ಮಾಡಿದರು.
ಮಂಗಳೂರಿನ ವಿಶ್ವವಿದ್ಯಾನಿಲಯದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ರಾಜ್ಯ ಕೌಶಲ್ಯಾಭಿವೃದ್ಧಿ ನಿರ್ದೇಶನಾಲಯ, ಜಿಲ್ಲಾಡಳಿತ ಸೇರಿದಂತೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳ ನಡೆಯಲಿದೆ ಎಂದು ಅವರು ಹೇಳಿದರು. ಉದ್ಯೋಗ ಮೇಳಕ್ಕಾಗಿ ರಾಜ್ಯ ಸರಕಾರ 50 ಲಕ್ಷ ರೂ. ಬಿಡುಗಡೆ ಮಾಡಿದ್ದು ದ.ಕ. ಜಿಲ್ಲಾಧಿಕಾರಿಯವರ ಮೇಲುಸ್ತುವಾರಿಯೊಂದಿಗೆ ಮೇಳ ನಡೆಯಲಿದೆ ಎಂದು ಅವರು ಸ್ಪಷ್ಟ ಪಡಿಸಿದರು.












Click it and Unblock the Notifications