ಉಪ ಚುನಾವಣೆ ಮೈತ್ರಿ ಬಗ್ಗೆ ತಲೆಕೆಡಿಸಿಕೊಳ್ಳಲ್ಲ : ಯಡಿಯೂರಪ್ಪ
ಬೆಂಗಳೂರು, ಅಕ್ಟೋಬರ್ 03 : 'ರಾಮನಗರ ಮತ್ತು ಜಮಖಂಡಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ, ಯಾರನ್ನಾದರೂ ಅಭ್ಯರ್ಥಿಯಾಗಿ ಮಾಡಲಿ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಬುಧವಾರ ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, 'ರಾಮನಗರ ಮತ್ತು ಜಮಖಂಡಿ ಉಪ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಇನ್ನೂ ಚರ್ಚೆ ನಡೆದಿದೆ. ವರಿಷ್ಠರ ಜೊತೆ ಚರ್ಚಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ' ಎಂದರು.

ಎಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ರಾಮನಗರಕ್ಕೆ, ಸಿದ್ದು ನ್ಯಾಮಗೌಡ ಅವರು ನಿಧನರಾಗಿದ್ದರಿಂದ ಜಮಖಂಡಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಈ ವಾರದಲ್ಲಿ ಎರಡೂ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.
ರಾಮನಗರ ಮತ್ತು ಜಮಖಂಡಿ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ ಎಂಬುದು ಸದ್ಯದ ಸುದ್ದಿ. ರಾಮನಗರದಲ್ಲಿ ಜೆಡಿಎಸ್, ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.
ರಾಮನಗರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಇನ್ನು ಎರಡು ದಿನದಲ್ಲಿ ಪಕ್ಷ ಅಭ್ಯರ್ಥಿಯನ್ನು ಘೋಷಣೆ ಮಾಡಲಿದೆ. ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು? ಎನ್ನುವುದು ಇನ್ನೂ ಅಂತಿಮವಾಗಿಲ್ಲ.











Click it and Unblock the Notifications