ಸಿದ್ದರಾಮಯ್ಯರನ್ನ ಕಟ್ಟಿ ಹಾಕೋದು ಹೇಗೆ? ಪುತ್ರನಿಗೆ ದೇವೇಗೌಡ್ರು ಸಲಹೆ!
ಬೆಂಗಳೂರು, ಆಗಸ್ಟ್ 08: 2023 ರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಳಿಕ ಮತ್ತೆ ಪ್ರಾದೇಶಿಕ ಪಕ್ಷ ಜೆಡಿಎಸ್ ಪಕ್ಷವನ್ನ ಸಂಘಟಿಸಲು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪಣತೊಟ್ಟಿದ್ದು, ಪಕ್ಷದ ಕಾರ್ಯಕರ್ತರ ಜೊತೆಗೆ ಸುದೀರ್ಘ ಸಭೆ ನಡೆಸಿದ್ದಾರೆ.
ಅಧಿಕೃತ ವಿರೋಧ ಪಕ್ಷವಾದ ಬಿಜೆಪಿ ಜೊತೆಗೆ ಜೆಡಿಎಸ್ ನಾಯಕರು ಕೈ ಜೋಡಿಸಿ ಈಗಾಗಲೇ ಹೋರಾಟ ನಡೆಸಿದ್ದು, ಮುಂದಿನ ದಿನಗಳಲ್ಲಿ ರಾಜಕೀಯ ವಿರೋಧಿಯಾಗಿರುವ ಸಿದ್ದರಾಮಯ್ಯ ಅವರನ್ನ ಯಾವ ರೀತಿಯಾಗಿ ಎದುರಿಸಬೇಕು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡರು ಸಲಹೆ ನೀಡಿದ್ದಾರೆ.

ಸೋಮವಾರ ಜೆಡಿಎಸ್ ಪ್ರಮುಖರ ಸಭೆಯಲ್ಲಿ ಮಾತನಾಡಿ, ರಾಜಕೀಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೇಗೆ ಕಟ್ಟಿ ಹಾಕಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ನಾಯಕರಿಗೆ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೇ ಲೋಕಸಭಾ ಚುನಾವಣೆಗೆ ಯಾವ ರೀತಿಯ ಸಿದ್ದತೆ ಹಾಗೂ ಪ್ರವಾಸವನ್ನ ಮಾಡಬೇಕು ಎಂದು ದೇವೇಗೌಡರು ಸಭೆಯಲ್ಲಿ ತಿಳಿಸಿದ್ದಾರೆ.
ಇನ್ನೂ ಸರ್ಕಾರದ ವಿರುದ್ದ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದು, ಇತ್ತ ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಜೊತೆಯಲ್ಲಿ ಬೇರೆ ನಾಯಕರು ಸಹ ಧ್ವನಿಗೂಡಿಸಬೇಕು.ಸರ್ಕಾರದ ಲೋಪದೋಷಗಳನ್ನು ಜನರಿಗೆ ತಿಳಿಸಲು ಪ್ರಯತ್ನಿಸಬೇಕು ಎಂದು ದೇವೇಗೌಡರು ಹೇಳಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದಲ್ಲಿದ್ದವರು, ಅವರ ವಿರುದ್ದ ವೈಯುಕ್ತಿಕವಾಗಿ ಟಾರ್ಗೆಟ್ ಮಾಡಬೇಡಿ. ವಿಷಯಾಧಾರಿತವಾಗಿ ಸರ್ಕಾರದ ವಿರುದ್ದ ಹೋರಾಟ ಮಾಡಿ. ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ವೈಯುಕ್ತಿಕವಾಗಿ ಟೀಕಿಸಿದಷ್ಟು ನಮಗೆ ನಷ್ಟ ಎಂದು ಜೆಡಿಎಸ್ ವರಿಷ್ಠರಾದ ದೇವೇಗೌಡರು ಪಕ್ಷದ ನಾಯಕರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಅಲ್ಲದೇ ಸರ್ಕಾರ ಅಧಿಕಾರಕ್ಕೆ ಬಂದ ಮೂರೇ ತಿಂಗಳಲ್ಲಿ ಸರ್ಕಾರ ಹಾಗೂ ಸಚಿವರ ವಿರುದ್ದ ಹಲವು ಆರೋಪಗಳು ಕೇಳಿ ಬಂದಿದ್ದು, ಈಗಾಗಲೇ ಸರ್ಕಾರ ಹಗರಣದ ಕುರಿತು ಸರ್ಕಾರದ ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದು, ನೈಸ್ ಹಗರಣದಂತೆ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಹೆಚ್ಚು ಧ್ವನಿ ಎತ್ತಿ. ಲ್ಲಾ ಪ್ರಮುಖ ನಾಯಕರು ಸರ್ಕಾರದ ವೈಫಲ್ಯಗಳ ಬಗ್ಗೆ ಮಾತನಾಡಬೇಕು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ಇನ್ನೂ 2024 ರ ಲೋಕಸಭಾ ಚುನಾವಣೆಯಲ್ಲಿ ನಾನು ಸಹ ವ್ಹೀಲ್ ಚೇರ್ನಲ್ಲಾದರೂ ಸರಿಯೇ ನಾನು ರಾಜ್ಯ ಪ್ರವಾಸ ಮಾಡುತ್ತೇನೆ. ನೀವು ಸಹ ರಾಜ್ಯ ಪ್ರವಾಸವನ್ನ ಮಾಡುವ ಮೂಲಕ ಪಕ್ಷ ಸಂಘಟನೆಯತ್ತ ಹೆಚ್ಚಿನ ಗಮನಹರಿಸಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ದೇವೇಗೌಡರು ಕರೆ ನೀಡಿದ್ದಾರೆ.












Click it and Unblock the Notifications