ಶಾಲಾ, ಕಾಲೇಜುಗಳನ್ನು ಹಂತ ಹಂತವಾಗಿ ತೆರೆಯುವುದು ಸೂಕ್ತ: ದೇವಿ ಪ್ರಸಾದ್
ಬೆಂಗಳೂರು, ಜೂನ್ 22: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಉನ್ನತ ಮಟ್ಟದ ನುರಿತ ತಜ್ಞರ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಅವರೊಂದಿಗೆ ಸಭೆ ನಡೆಸಿ ಮಧ್ಯಂತರ ವರದಿ ನೀಡಿದ್ದಾರೆ.
ರಾಜ್ಯ ಸರ್ಕಾರವೇ ಮಾಸ್ಕ್ ನೀಡಬೇಕು. ಶಾಲೆಗಳಲ್ಲಿ ಮಕ್ಕಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಶಿಕ್ಷಕರು, ಶಾಲೆಯ ಇತರೆ ಸಿಬ್ಬಂದಿಗೆ ಕಡ್ಡಾಯವಾಗಿ ಕೊರೊನಾ ಲಸಿಕೆ ಹಾಕಿಸಿರಬೇಕು.
ಆರೋಗ್ಯವಂತ ಮಕ್ಕಳು ಮಾತ್ರ ಶಾಲೆಗೆ ಬರಬೇಕು. ಶಾಲಾ ಆವರಣಕ್ಕೆ ಅನ್ಯರಿಗೆ ಪ್ರವೇಶ ನಿರ್ಬಂಧ ಹೇರಬೇಕು. ವಾರಕ್ಕೊಮ್ಮೆ ಸ್ಥಳೀಯ ವೈದ್ಯರಿಂದ ಆರೋಗ್ಯ ತಪಾಸಣೆ ಮಾಡಿಸಬೇಕು. ಮಕ್ಕಳಿಗೆ ಕರ್ನಾಟಕ ಸರ್ಕಾರವೇ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು.

ಶಾಲಾ ಆವರಣ, ಸುತ್ತಮುತ್ತ ತಿಂಡಿ ತಿನಿಸು ಮಾರಾಟ ನಿಷೇಧ ಮಾಡಬೇಕು. ಕೊರೊನಾ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಟ ಆಡಿಸಬೇಕು. ಮಕ್ಕಳಿಗೆ ಸರ್ಕಾರದಿಂದ ಪೌಷ್ಟಿಕಾಂಶಯುಕ್ತ ಆಹಾರ ನೀಡಬೇಕು. ಊಟವನ್ನು ಸ್ಥಳೀಯ ಮಟ್ಟದಲ್ಲಿ ನೀಡುವುದು ಸೂಕ್ತ ಎಂಬ ಸಲಹೆಯನ್ನು ತಜ್ಞರು ನೀಡಿದ್ದಾರೆ.
3ನೇ ಅಲೆ ತಡೆಗಟ್ಟುವ ಕುರಿತು ಡಾ. ದೇವಿ ಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಸಭೆಯ ಮುಖ್ಯಾಂಶಗಳು ಹೀಗಿವೆ.
1. ಡಾ. ದೇವಿ ಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ ಸಮಿತಿಯು ಕೋವಿಡ್ 3ನೇ ಅಲೆ ಸಿದ್ಧತೆ ಕುರಿತಂತೆ ಚರ್ಚಿಸಲಾಯಿತು
2.ಮೂರನೇ ಅಲೆ ಸಂದರ್ಭದಲ್ಲಿ ಮಕ್ಕಳಿಗೆ ಹೆಚ್ಚಾಗಿ ಸೋಂಕು ತಗಲುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಜ್ಞರ ಸಮಿತಿಯು ಕೆಲವು ಶಿಫಾರಸುಗಳನ್ನು ಮಾಡಿದೆ.
3.ಜಿಲ್ಲೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ, ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಮಕ್ಕಳ ಹೆಚ್.ಡಿ.ಯು ಘಟಕ, ಮಕ್ಕಳ ತೀವ್ರ ನಿಗಾ ಘಟಕ ಸ್ಥಾಪನೆ, ಮಕ್ಕಳ ಆಸ್ಪತ್ರೆ ಸ್ಥಾಪನೆ ಕುರಿತು ಸಲಹೆ ನೀಡಿದೆ.
4.3ನೇ ಅಲೆ ತಡೆಗಟ್ಟಲು ಮಾನವ ಸಂಪನ್ಮೂಲ, ಆರ್ಥಿಕ ಸಂಪನ್ಮೂಲ ಹಾಗೂ ಪರಿಣತರ ನೆರವು ಪಡೆಯುವ ಕುರಿತು ಸಹ ಸಮಿತಿ ಸಲಹೆ ನೀಡಿದೆ. ವಿವಿಧ ವೈದ್ಯಕೀಯ ಸಂಘಟನೆಗಳ ಸಹಯೋಗದೊಂದಿಗೆ ವೈದ್ಯರು, ದಾದಿಯರ ಕೊರತೆ ನಿವಾರಣೆ, ರಾಜ್ಯದಲ್ಲಿರುವ ಎಲ್ಲ ಸ್ವಯಂ ಸೇವಾ ಸಂಸ್ಥೆಗಳ ನೆರವು ಪಡೆಯುವುದು, ಕಾರ್ಪೊರೇಟ್ ಸಂಸ್ಥೆಗಳ ಸಹಕಾರದಿಂದ ಸಂಪನ್ಮೂಲಗಳ ನೆರವು ಹಾಗೂ ಎಲ್ಲಕ್ಕಿಂತ ಮುಖ್ಯವಾಗಿ ಸಾರ್ವಜನಿಕರ ಸಹಭಾಗಿತ್ವ ಪಡೆಯುವ ಬಗ್ಗೆ ಸಲಹೆ ನೀಡಿದೆ.
5. ಅಪೌಷ್ಟಿಕತೆ ನಿವಾರಣೆಗೆ ಆದ್ಯತೆ ನೀಡುವಂತೆಯೂ ತಜ್ಞರ ಸಮಿತಿ ಸಲಹೆ ನೀಡಿದೆ.
6. ಕೋವಿಡ್ಗೆ ತುತ್ತಾದ ಮಕ್ಕಳ ಮನೋಸ್ಥೈರ್ಯ ಹೆಚ್ಚಿಸಲು ಪ್ರತಿ ಆಸ್ಪತ್ರೆಯಲ್ಲಿ ಮನೋವೈದ್ಯರ ಸೇವೆ ಒದಗಿಸುವುದು ಸೂಕ್ತ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
7. ಆಮ್ಲಜನಕ ಕೊರತೆ ನಿವಾರಣೆ ಕುರಿತು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಲಹೆ ನೀಡಿದೆ.
8.ಕೋವಿಡ್ ನಂತರ ತಲೆದೋರುವ ಆರೋಗ್ಯ ಸಮಸ್ಯೆಗಳ ಕುರಿತು ಎಚ್ಚರ ವಹಿಸುವ ಕುರಿತು ಹಾಗೂ ಕೋವಿಡ್ ಅಲ್ಲದೆ ಇತರ ಆರೋಗ್ಯ ಸಮಸ್ಯೆಗಳಿಗೂ ಆದ್ಯತೆ ನೀಡುವ ಅಗತ್ಯವಿದೆ.
9. ಮಕ್ಕಳಿಗೆ ಪರೀಕ್ಷೆ ನಡೆಸುವ ಬಗ್ಗೆ, ಕೋವಿಡ್ ಕೇರ್ ಸೆಂಟರ್ಗಳಲ್ಲಿರುವ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿದರು.
10.ಕೋವಿಡ್ ನಿಯಂತ್ರಣಕ್ಕೆ ಲಸಿಕೆ ಅತ್ಯಂತ ಸೂಕ್ತ ಪರಿಹಾರವಾಗಿದ್ದು, ಲಸಿಕೆ ಅಭಿಯಾನ ಇನ್ನಷ್ಟು ತೀವ್ರಗೊಳಿಸಲು ಸಲಹೆ ನೀಡಿದೆ.
ಶಾಲಾ ಕಾಲೇಜು ತೆರೆಯುವ ಬಗ್ಗೆ
11.ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದಕ್ಕೆ ಲಸಿಕೆ ನೀಡಲು ಆದ್ಯತೆ ನೀಡುವಂತೆ ಸಲಹೆ ಮಾಡಲಾಗಿದೆ.
12. ಶಾಲಾ ಕಾಲೇಜುಗಳನ್ನು ಹಂತ ಹಂತವಾಗಿ ತೆರೆಯುವ ಬಗ್ಗೆ ಚಿಂತನೆ ನಡೆಸಲು ಸಮಿತಿ ಸಲಹೆ ಮಾಡಿದೆ.
13.18 ವಯಸ್ಸಿನ ಮೇಲಿನ ಮಕ್ಕಳಿಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಿ ಕಾಲೇಜುಗಳನ್ನು ಪ್ರಾರಂಭಿಸುವ ಚಿಂತನೆ ನಡೆಸಲಾಗಿದೆ.












Click it and Unblock the Notifications