ಖ್ಯಾತ ಕೃಷಿ ತಜ್ಞ ಸ್ವಾಮಿನಾಥನ್ ಎಚ್ಡಿಕೆಗೆ ಕೊಟ್ಟ ಸಲಹೆ ಏನು?
ಬೆಂಗಳೂರು, ಜು.13: ದೇಶದ ಪ್ರಖ್ಯಾತ ಕೃಷಿ ತಜ್ಞ ಹಸಿರು ಕ್ರಾಂತಿ ಪಿತಾಮಹ ಎಂದು ಖ್ಯಾತರಾದ 97 ವರ್ಷದ ಎಂ.ಎಸ್. ಸ್ವಾಮಿನಾಥನ್ ಶುಕ್ರವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯನ್ನು ಭೇಟಿ ಮಾಡಿದರು.
ಕರ್ನಾಟಕದ ಕೃಷಿ ಕ್ಷೇತ್ರಗಳ ಅಭಿವೃದ್ಧಿಗೆ ಪ್ರಮುಖ ಸಲಹೆಗಳನ್ನು ನೀಡಿದ್ದಾರೆ, ಕರ್ನಾಟಕದಲ್ಲಿ ತೋಟಗಾರಿಕಾ ಬೆಳೆಗಳಿಗೆ ವಿಫುಲ ಅವಕಾಶಗಳಿರುವುದರಿಂದ ತೋಟಗಾರಿಕಾ ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಯೋಜನೆಯನನ್ನು ರೂಪಿಸಬೇಕು.
ಕರ್ನಾಟಕ ಫಲವತ್ತಾದ ಕರಾವಳಿ ತೀರವನ್ನು ಹೊಂದಿರುವುದರಿಂದ ಸಮುದ್ರಾಡಳಿತ ಕೃಷಿ ವ್ಯವಸ್ಥೆಯನ್ನು ಬಲಗೊಳಿಸಬೇಕು ಎಂದು ಅವರು ಸಲಹೆ ನೀಡಿದರು.. ಪ್ರತ್ಯೇಕ ತೋಟಗಾರಿಕಾ ಇಲಾಖೆಯನ್ನು ಹೊಂದಿರುವ ಮೊದಲ ರಾಜ್ಯ ಕರ್ನಾಟಕ ಎಂಬುದರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಡಾ. ಸ್ವಾಮಿನಾಥನ್, ಮಣ್ಣು, ನೀರು ಹಾಗೂ ಜೀವವೈವಿಧ್ಯ ಸಂರಕ್ಷಣೆಯನ್ನು ಗಮನದಲ್ಲಿರಿಸಿಕೊಂಡು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಈ ನಿಟ್ಟಿನಲ್ಲಿ ಇಸ್ರೇಲಿ ಮಾದರಿ ನೀರಾವರಿ ಸಹಕಾರಿ ಎಂದು ಅಭಿಪ್ರಾಯಪಟ್ಟರು. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ಕೃಷಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡುವಂತೆ ಅವರು ಸಲಹೆ ನೀಡಿದರು.
ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ರೈತರ ಸುಸ್ಥಿರ ಬದುಕಿಗಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಕೃಷಿಕರನ್ನು ಆರ್ಥಿಕವಾಗಿ ಸದೃಢಗೊಳಿಸಲು ನಾಡಿನ ಕೃಷಿ ಪದ್ಧತಿ, ನೀರಾವರಿಯಲ್ಲಿ ಹಲವು ಮಾರ್ಪಾಡು ಮಾಡಲು ಉದ್ದೇಶಿಸಿದೆ. ಈ ನಿಟ್ಟಿನಲ್ಲಿ 93 ವರ್ಷಗಳ ಹಿರಿಯರಾದ ಡಾ. ಸ್ವಾಮಿನಾಥನ್ ಅವರು ಆಗಮಿಸಿ ಮಾರ್ಗದರ್ಶನ ನೀಡಿರುವುದಕ್ಕಾಗಿ ಅವರನ್ನು ಅಭಿನಂದಿಸಿದರು.
ಶೀಘ್ರವೇ ಜಿಲ್ಲಾಮಟ್ಟದ ಕೃಷಿ ಮತ್ತು ಸಂಬಂಧಿಸಿದ ಕ್ಷೇತ್ರಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕೃಷಿ ಕ್ಷೇತ್ರದ ನ್ಯೂನ್ಯತೆಗಳ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೃಷಿ ಸಚಿವ ಎನ್.ಎಚ್. ಶಿವಶಂಕರ ರೆಡ್ಡಿ, ತೋಟಗಾರಿಕಾ ಸಚಿವ ಎಂ.ಸಿ. ಮನಗೂಳಿ, ಪಶುಸಂಗೋಪನೆ ಮತ್ತು ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಡಿ.ವಿ. ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೃಷಿ ಇಲಾಖೆ ಕಾರ್ಯದರ್ಶಿ ಡಾ. ಯು.ಎಂ. ಮಹೇಶ್ವರರಾವ್ ಮತ್ತಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು.