ಅಳಿಯನನ್ನೇ ದೇವೇಗೌಡರು ಬೇರೆ ಪಕ್ಷದಿಂದ ಕಣಕ್ಕಿಳಿಸಿದ್ದಾರೆ; ಕಾರ್ಯಕರ್ತರು ತಮ್ಮ ತೀರ್ಮಾನ ಮಾಡಬೇಕು: ಡಿಕೆಸುರೇಶ್ ಹೇಳಿದ್ದೇನು?
ರಾಮನಗರ, ಮಾರ್ಚ್ 14: "ದೇವೇಗೌಡರ ಅಳಿಯ ಡಾ. ಮಂಜುನಾಥ್ ಅವರೇ ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ತಮ್ಮ ಮುಂದಿನ ತೀರ್ಮಾನ ಮಾಡಬೇಕು" ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರು ತಿಳಿಸಿದರು.
ಚನ್ನಪಟ್ಟಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಾತನಾಡಿ, ಡಾ. ಮಂಜುನಾಥ್ ಅವರು ರಾಜಕಾರಣಕ್ಕೆ ಬರುತ್ತಿರುವುದನ್ನು ನಾನು ಸ್ವಾಗತಿಸುತ್ತೇನೆ. ಅವರು ದೇವೇಗೌಡರ ಕುಟುಂಬದವರು. ಇದು ನನ್ನ ಹಾಗೂ ಡಿ.ಕೆ. ಶಿವಕುಮಾರ್ ಅವರ ರಾಜಕಾರಣಕ್ಕೆ ಹೊಸತೇನಲ್ಲ. ಹೀಗಾಗಿ ನಿಮ್ಮ (ಮಾಧ್ಯಮಗಳ) ನೇತೃತ್ವದಲ್ಲಿ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು.

ಮಂಜುನಾಥ್ ಅವರು ಮೃದು ಸ್ವಭಾವದವರು ಎಂಬ ಚರ್ಚೆ ಬಗ್ಗೆ ಮಾತನಾಡಿ, ಯಾರು ಏನು ಚರ್ಚೆ ಮಾಡುತ್ತಿದ್ದಾರೆ ಎಂಬುದು ನನಗೆ ಮುಖ್ಯವಲ್ಲ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿಯಿಲ್ಲ ಎಂದು ಅವರ ಅಳಿಯ ತೀರ್ಮಾನ ಮಾಡಿರುವುದರ ಬಗ್ಗೆ ಜನತಾದಳದ ಕಾರ್ಯಕರ್ತರು ಚಿಂತನೆ ಮಾಡಬೇಕು. ದೇವೇಗೌಡರ ಬುದ್ಧಿವಂತ ಅಳಿಯನವರೇ ಬೇರೆ ಪಕ್ಷ ಆಯ್ಕೆ ಮಾಡಿಕೊಂಡ ನಂತರ ಅವರ ಕಾರ್ಯಕರ್ತರು ಉಳಿದ ವಿಚಾರ ತೀರ್ಮಾನ ಮಾಡಬೇಕು ಎಂದು ತಿಳಿಸಿದರು.
ಜೆಡಿಎಸ್ ನೆಲೆ ಕಳೆದುಕೊಳ್ಳುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ನನಗೆ ಆ ಬಗ್ಗೆ ಗೊತ್ತಿಲ್ಲ. ಇದೆಲ್ಲವನ್ನು ಈಗ ಅವರ ಅಳಿಯನವರೇ ಹೇಳುತ್ತಿದ್ದಾರೆ. ದೇವೇಗೌಡರ ಅಳಿಯನವರು ಚುನಾವಣೆ ಕಣದಲ್ಲಿದ್ದಾರೆ. ದೇವೇಗೌಡರ ಸಲಹೆ ಏನಿದೆಯೋ ಗೊತ್ತಿಲ್ಲ. ಆದರೆ ದೇವೇಗೌಡರು ಕಟ್ಟಿದ ಪಕ್ಷಕ್ಕೆ ಈಗ ಜನಪ್ರಿಯತೆ ಇಲ್ಲ ಎಂಬುದನ್ನು ಅವರ ಕುಟುಂಬದ ಹಿರಿಯ ಸದಸ್ಯರೇ ಸ್ಪಷ್ಟಪಡಿಸುತ್ತಿದ್ದಾರೆ ಎಂದು ತಿಳಿಸಿದರು. ಆ ಪಕ್ಷ ಇಲ್ಲವೆಂದು ದೇವೇಗೌಡರ ಅಳಿಯನವರೇ ನಿರ್ಧರಿಸಿರುವಾಗ ಉಳಿದ ವಿಚಾರವನ್ನು ನೀವೇ ಮುಂದುವರಿಸಬೇಕು ಎಂದರು.
ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ನೀವು ಆಹ್ವಾನ ನೀಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಜೆಡಿಎಸ್ ನಾಯಕರ ಕುಟುಂಬ ಸದಸ್ಯರೇ ಬೇರೆ ಪಕ್ಷದ ಚಿಹ್ನೆಯಡಿ ಚುನಾವಣೆಗೆ ಸ್ಪರ್ಧಿಸುತ್ತಿರುವಾಗ, ಜೆಡಿಎಸ್ ಕಾರ್ಯಕರ್ತರು ಏನು ಮಾಡಬೇಕು? ನಾನು ಮಾಧ್ಯಮಗಳ ಮೂಲಕ ಜೆಡಿಎಸ್ ಕಾರ್ಯಕರ್ತರಿಗೆ ಆಹ್ವಾನ ನೀಡುತ್ತೇನೆ. ನಾನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಗ. ನಿಮ್ಮ ಸಹೋದರನಾಗಿ ಈ ಜಿಲ್ಲೆ ಹಾಗೂ ಇಲ್ಲಿನ ತಾಲೂಕುಗಳ, ರೈತರ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ನೀವೆಲ್ಲರೂ ಪಕ್ಷಭೇದ ಮರೆತು ಬನ್ನಿ ಎಂದು ತುಂಬು ಹೃದಯದಿಂದ ಕರೆಯುತ್ತೇನೆ ಎಂದರು.
ಕುಟುಂಬ ರಾಜಕಾರಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿರುವ ಬಗ್ಗೆ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ವಿಚಾರಕ್ಕೂ ನನಗೂ ಸಂಬಂಧವಿಲ್ಲ. ನೀವು ಹೇಗೆ ನಿಮ್ಮ ಅಭಿಪ್ರಾಯದ ಮೇಲೆ ನನಗೆ ಪ್ರಶ್ನೆ ಕೇಳುತ್ತಿದ್ದೀರೋ ಅದೇ ರೀತಿ ಅವರವರು ತಮ್ಮ ಅಭಿಪ್ರಾಯದ ಮೇರೆಗೆ ಚರ್ಚೆ ಮಾಡುತ್ತಿರಬಹುದು. ಅದಕ್ಕೂ ನನಗೂ ಸಂಬಂಧವಿಲ್ಲ. ಅದಕ್ಕೆ ನಾನು ಉತ್ತರ ನೀಡಲು ಆಗುವುದಿಲ್ಲ ಎಂದರು. ಮಂಜುನಾಥ್ ಅವರು ನನಗೆ ದೇವೇಗೌಡರ ಅಳಿಯ ಎಂದಷ್ಟೇ ಗೊತ್ತಿತ್ತು. ಈಗ ಅವರು ಮೈತ್ರಿ ಅಭ್ಯರ್ಥಿಯಾಗಿ ಗೊತ್ತಾಗಿದ್ದಾರೆ. ಅವರು ರಾಜಕಾರಣಕ್ಕೆ ಬಂದಿದ್ದಾರೆ, ಹೀಗಾಗಿ ಅವರನ್ನು ಸ್ವಾಗತಿಸಿದ್ದೇನೆ ಎಂದರು.
ಹಾಸನದಿಂದ ನಿಮ್ಮನ್ನು ಸೋಲಿಸಲು ಬರುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಎಲ್ಲವನ್ನು ಒಂದೇ ದಿನ ಚರ್ಚೆ ಮಾಡುವುದು ಬೇಡ. ಈಗಷ್ಟೇ ನನಗೆ ಟಿಕೆಟ್ ಸಿಕ್ಕಿದೆ. ಈಗ ಬಿಜೆಪಿಯಲ್ಲಿ ಪ್ರತಾಪ್ ಸಿಂಹ, ಕಟೀಲ್ ಅವರಂತಹ ಪಕ್ಷ ಕಟ್ಟಿದವರಿಗೆ ಕೈ ಕೊಡಲಾಗಿದೆ. ನನ್ನನ್ನು ಗುಂಡಿಕ್ಕಿ ಕೊಲ್ಲುತ್ತೇನೆ ಎಂದವರು ಈಗ ಬಂಡಾಯ ಎನ್ನುತ್ತಿದ್ದಾರೆ. ಸಂವಿಧಾನ ಬದಲಾವಣೆ ಮಾಡಲು ಹೊರಟವರ ಕಥೆ ಏನಾಯ್ತೋ ಗೊತ್ತಿಲ್ಲ. ಇನ್ನು ಯಾರ ಕಥೆ ಏನಾಗಲಿದೆಯೋ ಗೊತ್ತಿಲ್ಲ ಎಂದು ತಿಳಿಸಿದರು.
ಪ್ರತಾಪ್ ಸಿಂಹ ಅವರು ನಿಮ್ಮನ್ನು ಒಳ್ಳೆಯ ಕೆಲಸಗಾರ ಎಂದು ಹೊಗಳುತ್ತಿರುವ ಎಂಬ ಪ್ರಶ್ನೆಗೆ ಉತ್ತರಿಸಿ, ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ರಸ್ತೆ ಮಾಡುವ ವಿಚಾರದಲ್ಲಿ ನಾನು, ಅವರು ಜತೆಗೂಡಿ ಕೆಲಸ ಮಾಡಿದ್ದೇವೆ. ರಾಜ್ಯದ ಅಭಿವೃದ್ಧಿ, ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡುವಾಗ ನನಗೆ ಅವರು, ಅವರಿಗೆ ನಾನು ಸಲಹೆ ಮತ್ತು ಸಹಕಾರ ನೀಡಿದ್ದೇವೆ. ಹೀಗಾಗಿ ನಮ್ಮ ನಡುವೆ ವಿಶ್ವಾಸವಿದೆ. ವಿಶ್ವಾಸ ಬೇರೆ, ಪಕ್ಷ ಬೇರೆ. ರಾಜಕಾರಣ ಬಂದಾಗ ಬೇರೆ ಎಂದು ತಿಳಿಸಿದರು.












Click it and Unblock the Notifications