ಡ್ರೀಮ್ಸ್ ಜಿ. ಕೆ. ಕಂಪನಿಯಿಂದ 360 ಕೋಟಿ ವಂಚನೆ; 17 ಚಾರ್ಜ್ಶೀಟ್
ಸುಮಾರು 360 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಡ್ರೀಮ್ಸ್ ಜಿಕೆ ಸಂಸ್ಥೆಯ ವಿರುದ್ಧ 17 ಆರೋಪಪಟ್ಟಿಗಳನ್ನು ಸಲ್ಲಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಬೆಂಗಳೂರು, ಫೆಬ್ರವರಿ 28; ಬೆಂಗಳೂರು ನಗರದಲ್ಲಿ ಸಾವಿರಾರು ಜನರಿಂದ ಸುಮಾರು 360 ಕೋಟಿ ರೂ.ಗೂ ಅಧಿಕ ಠೇವಣಿ ಹಣ ಸಂಗ್ರಹ ಮಾಡಿ ವಂಚನೆ ಎಸಗಿರುವ ಡ್ರೀಮ್ಸ್ ಜಿಕೆ ಸಂಸ್ಥೆಯ ವಿರುದ್ಧ 17 ಆರೋಪಪಟ್ಟಿಗಳನ್ನು ಸಲ್ಲಿಸಲಾಗಿದೆ. 13 ಆರೋಪಿಗಳ ವಿರುದ್ಧ ಆರೋಪಪಟ್ಟಿಯಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಲಾಗಿದೆ. ಬಂಡವಾಳ ಹೂಡಿಕೆ ಮಾಡಿರುವವರಿಗೆ ಪರಿಹಾರ ಕಲ್ಪಿಸುವ ಸಲುವಾಗಿ ಅಧೀನ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿರುವುದರಿಂದ ಪ್ರತ್ಯೇಕ ಆದೇಶಗಳನ್ನು ಹೊರಡಿಸುವ ಅಗತ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಮೆಸೆಸ್ ಡ್ರೀಮ್ಸ್ ಜಿಕೆ ಹೂಡಿಕೆದಾರರ ಕಲ್ಯಾಣ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್.ಕಿಣಗಿ ಅವರಿದ್ದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು. ಪ್ರತಿವಾದಿ ಸಂಸ್ಥೆಯಲ್ಲಿ ಬಂಡವಾಳ ಹೂಡಿಕೆ ಮಾಡಿರುವವರಿಗೆ ಪರಿಹಾರ ಕಲ್ಪಿಸುವ ಸಲುವಾಗಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ಇತ್ಯರ್ಥ ಪಡಿಸಿದೆ. ಸರ್ಕಾರಿ ವಕೀಲರು ವಿಚಾರಣೆ ವೇಳೆ ಪ್ರಕರಣ ತನಿಖಾ ವರದಿಯನ್ನು ಕೋರ್ಟ್ಗೆ ಸಲ್ಲಿಸಿದರು.

ತನಿಖಾ ವರದಿಯ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ಪ್ರಕರಣ ಸಂಬಂಧ ವಿಚಾರಣಾ ನ್ಯಾಯಾಲಯ ಕಾನೂನು ಪ್ರಕಾರ ತೀರ್ಮಾನ ಕೈಗೊಳ್ಳಬಹುದಾಗಿದೆ. ಈ ಪ್ರಕರಣದಲ್ಲಿ ತಕ್ಷಣ ಯಾವುದೇ ರೀತಿಯ ಆದೇಶಗಳನ್ನು ಹೊರಡಿಸುವ ಅವಕಾಶವಿಲ್ಲ ಎಂದು ತಿಳಿಸಿ ಅರ್ಜಿಯನ್ನು ಇತ್ಯರ್ಥ ಪಡಿಸಿತು. ಪ್ರಕರಣದ ಆರೋಪಿಗಳ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು.
ಕರ್ನಾಟಕ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿತ್ತು. ತನಿಖೆಯಲ್ಲಿ ಗ್ರಾಹಕರಿಂದ ಬಂಡವಾಳ ಹೂಡಿಕೆ ಸಂಗ್ರಹಿಸಿದ್ದು, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಜನ ಬಂಡವಾಳ ಹೂಡಿಕೆ ಮಾಡಿದ್ದು, ಸುಮಾರು 359 ಕೋಟಿ ರೂ. ಹೂಡಿಕೆ ಮಾಡಿದ್ದರು. ಆರೋಪಿಗಳು ಹೂಡಿಕೆದಾರರನ್ನು ವಂಚಿಸಿದ್ದರು ಎಂದು ತಿಳಿದು ಬಂದಿದೆ.
ಪ್ರಕರಣದಲ್ಲಿ 12 ಮಂದಿ ಆರೋಪಿಗಳಾಗಿದ್ದು, ಸುಧೀರ್ಘ ತನಿಖೆ ನಡೆಸಿರುವ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ 27 ಆರೋಪ ಪಟ್ಟಿಗಳನ್ನು ಸಲ್ಲಿಸಲಾಗಿದೆ ಎಂದು ಸರ್ಕಾರಿ ವಕೀಲರು ವಿವವರಿಸಿದರು. ಅಲ್ಲದೆ, ಆರೋಪಗಳಲ್ಲಿ 12 ಸ್ಥಿರಾಸ್ತಿಗಳು ಮತ್ತು 46 ಆಸ್ತಿಗಳ ಮಾರಾಟ ಸಂಬಂಧ ಒಪ್ಪಂದ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಬ್ಯಾಂಕ್ ಬ್ಯಾಲೆನ್ಸ್, ಮ್ಯೂಚುವಲ್ ಫಂಡ್, ವಾಹನಗಳು ಸೇರಿದಂತೆ 9 ಕೋಟಿ ರು.ಗಳಿಗೂ ಹೆಚ್ಚು ಚರಾಸ್ತಿಗಳು ಪತ್ತೆಯಾಗಿವೆ. ಅವುಗಳನ್ನು ಕಾನೂನು ಪ್ರಕಾರ ವಶಕ್ಕೆ ಪಡೆಯಲಾಗಿದೆ ಎಂದು ವಿವರಣೆ ನೀಡಲಾಗಿದೆ.

ಅಲ್ಲದೆ, ಆಸ್ತಿಗಳ ಮಾರಾಟಕ್ಕಾಗಿ ಬೆಂಗಳೂರು ರಕ್ಷಿಣ ತಾಲೂಕಿನ ಹೆಚ್ಚುವರಿ ಆಯುಕ್ತರ ನೇತೃತ್ವದಲ್ಲಿ ಸಕ್ಷಮ ಪ್ರಾಧಿಕಾರ ರಚನೆ ಮಾಡಲಾಗಿದೆ. ಆರೋಪಿತರ ಒಡೆತನದ ಆಸ್ತಿಗಳನ್ನು ವಶಕ್ಕೆ ಪಡೆದು ಹೂಡಿಕೆದಾರರಿಗೆ ಪರಿಹಾರ ಒದಗಿಸುವುದಕ್ಕಾಗಿ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಈ ಸಂಬಂಧ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿಗಳು ವಿಚಾರಣಾ ಹಂತದಲ್ಲಿದೆ.












Click it and Unblock the Notifications