ಕುಡಿಯುವ ನೀರಿನ ಸಮಸ್ಯೆ; ಮಹತ್ವದ ಸಭೆ ನಡೆಸಿದ ಸಿದ್ದರಾಮಯ್ಯ
ಬೆಂಗಳೂರು, ಜೂನ್ 12; ನೈಋತ್ಯ ಮುಂಗಾರು ಈಗ ಕರ್ನಾಟಕಕ್ಕೆ ಪ್ರವೇಶ ಪಡೆದಿದೆ. ಬಿರು ಬೇಸಿಗೆಯ ಕಾರಣ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗಿದೆ. ಕಲುಷಿತ ನೀರು ಸೇವಿಸಿ ಜನರು ಮೃತಪಟ್ಟ ಪ್ರಕರಣಗಳು ಸಹ ವರದಿಯಾಗಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಓಗಳ ಸಭೆ ನಡೆಸಿದರು. ಈ ಕೂಡಲೇ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ ಪ್ರಕರಣಗಳು ನಡೆದಿವೆ. ಇದನ್ನು ಸಭೆಯಲ್ಲಿ ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ ಜಿಲ್ಲಾ ಪಂಚಾಯಿತಿ ಸಿಇಓಗಳು ಕಚೇರಿಯಲ್ಲಿ ಕುಳಿತು ಕೆಲಸ ಮಾಡಬಾರದು. ಸ್ಥಳಕ್ಕೆ ತೆರಳಿ ವರದಿ ತಯಾರು ಮಾಡಬೇಕು. ಇಂತಹ ಘಟನೆ ಮುಂದೆ ನಡೆಯಬಾರದು ಎಂದು ನಿರ್ದೇಶನ ನೀಡಿದರು.
ಕಲುಷಿತ ನೀರು ಸೇವಿಸಿ ಮೃತಪಟ್ಟ ಪ್ರಕರಣಗಳು ನಡೆದರೆ ಜಿಲ್ಲಾ ಪಂಚಾಯಿತಿ ಸಿಇಓಗಳನ್ನು ಅಮಾನತು ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಸಭೆಯಲ್ಲಿ ಎಚ್ಚರಿಕೆ ನೀಡಿದರು. ಕೊಪ್ಪಳದಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಕುಟುಂಬದವರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದು ವಾರದೊಳಗೆ ಪರಿಹಾರ ಕೊಡಿಸಬೇಕು ಎಂದು ಸೂಚನೆ ನೀಡಲಾಗಿದೆ.
ಕುಡಿಯುವ ನೀರಿನ ಸಮಸ್ಯೆ; ಮೇ ತಿಂಗಳಿನಲ್ಲಿ ರಾಯಚೂರು ಜಿಲ್ಲೆಯ ರೇಖಲಮರಡಿ ಬಳಿಯ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಜನರು ಅಸ್ವಸ್ಥಗೊಂಡಿದ್ದರು. ಅವರಿಗೆ ಸೂಕ್ತ ಚಿಕಿತ್ಸೆ ಹಾಗೂ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು.

ಅಲ್ಲದೇ ಗ್ರಾಮಸ್ಥರಿಗೆ ಶುದ್ಧ ನೀರು ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಘಟನೆ ಸಂಬಂಧ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶ ನೀಡಿದ್ದರು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಬೇಕು. ನೀರಿನ ಸ್ಯಾಂಪಲ್ ಗಳನ್ನು ಲ್ಯಾಬ್ಗೆ ಕಳುಹಿಸಿ ತಕ್ಷಣ ವರದಿ ತರಿಸಿಕೊಳ್ಳಬೇಕು. ವರದಿ ಆಧಾರದಲ್ಲಿ ಗ್ರಾಮಸ್ಥರ ಕೂಲಂಕುಷ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆಗೆ ಕ್ರಮ ವಹಿಸಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ, ವಿಷಪೂರಿತ ನೀರಿನ ಮೂಲಗಳನ್ನು ಬಂದ್ ಮಾಡಬೇಕು ಎಂದು ಸೂಚಿಸಿದ್ದರು.
ಕೊಪ್ಪಳದಲ್ಲಿ ಮಗು ಸಾವು; ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಗೆ ಬರುವ ಬಿಜಕಲ್ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತಿ ಸಿಇಓ ರಾಹುಲ್ ಪಾಂಡೆ ಹೇಳಿದ್ದಾರೆ. ಜೂನ್ 7ರಂದು ಬಿಜಕಲ್ ಗ್ರಾಮದ 10 ವರ್ಷದ ನಿರ್ಮಲಾ ಎಂಬ ಮಗು ವಾಂತಿ ಮತ್ತು ಬೇಧಿಯಿಂದಾಗಿ ಮೃತಪಟ್ಟಿತ್ತು.
ಮಗುವಿನ ತಂದೆ ಈರಪ್ಪ ನೀರಲೂಟಿ ದುಡಿಯಲು ಬೆಂಗಳೂರಿಗೆ ಗುಳೆ ಹೋಗಿದ್ದರಿಂದ ಮಗುವನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟಿದ್ದರು. ರಾತ್ರಿ 10 ಗಂಟೆಗೆ ಊಟ ಮಾಡಿದ್ದ ಮಗುವಿಗೆ ಬಳಿಕ ಒಂದು ಸಾರಿ ವಾಂತಿ ಮತ್ತು ಒಂದು ಸಾರಿ ಬೇಧಿಯಾಗಿರುತ್ತದೆ. ಮರುದಿನ ಬೆಳಗ್ಗೆ ಆಶಾ ಕಾರ್ಯಕರ್ತೆಯು ಮನೆಮನೆ ಭೇಟಿಗೆ ಹೋದಾಗ ಮಗುವನ್ನು ನೋಡಿ ಪಕ್ಕದ ಮನೆಯವರ ಸಹಾಯದಿಂದ ಬಿಜಕಲ್ ಗ್ರಾಮದಲ್ಲಿ ಸ್ಥಾಪಿಸಿರುವ ತಾತ್ಕಾಲಿಕ ಚಿಕಿತ್ಸಾ ಕೇಂದ್ರಕ್ಕೆ ಕರೆದುಕೊಂಡು ಬಂದಾಗ ಅಲ್ಲಿಯ ಸಿಬ್ಬಂದಿಯವರು ಮಗುವನ್ನು ತಪಾಸಣೆ ಮಾಡಿ ಪ್ರಾಥಮಿಕ ಚಿಕಿತ್ಸೆ ನೀಡಿ ತಾಲೂಕು ಆಸ್ಪತ್ರೆ ಕುಷ್ಟಗಿಗೆ ಕಳುಹಿಸಿದ್ದರು.
ಕುಷ್ಟಗಿ ಆಸ್ಪತ್ರೆಗೆ ತಲುಪವಷ್ಟರಲ್ಲಿಯೇ ಮಗುವು ಅಸ್ಥಸ್ತಗೊಂಡಿದ್ದರಿಂದ ಅಲ್ಲಿಯೇ ವೈದ್ಯರು ಚಿಕಿತ್ಸೆ ನೀಡಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿತ್ತು. ಈ ಕುರಿತು ವೈದ್ಯಾಧಿಕಾರಿಗಳು ವರದಿ ನೀಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದರು.
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭಾನುವಾರ ವಾಂತಿ ಬೇಧಿ ಪ್ರಕರಣಗಳು ಕಂಡು ಬಂದ ಗ್ರಾಮಗಳಲ್ಲಿ ಆರೋಗ್ಯ ಶಿಬಿರಗಳನ್ನು ಇನ್ನಷ್ಟು ದಿನಗಳ ಕಾಲ ಮುಂದುವರೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ಜೂನ್ 11ರಂದು ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಅವರು ಅಧಿಕಾರಿಗಳಿಗೆ ಈ ಸೂಚನೆ ಕೊಟ್ಟರು. ವಾಂತಿ ಬೇಧಿ ಪ್ರಕರಣಗಳ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ತೀವ್ರ ನಿಗಾವಹಿಸಬೇಕು. ಪ್ರತಿ ದಿನ ಮನೆಮನೆ ಭೇಟಿ ನೀಡಿ ಜನರ ಆರೋಗ್ಯ ವಿಚಾರಿಸಬೇಕು ಎಂದು ಸಚಿವರು ಸೂಚನೆ ನೀಡಿದರು.












Click it and Unblock the Notifications