ಕರ್ನಾಟಕದಲ್ಲಿ ಬರ ಘೋಷಣೆ; ಜುಲೈ 15ಕ್ಕೆ ಸಭೆ
ಕಲಬುರಗಿ, ಜುಲೈ 09; "ರಾಜ್ಯದಲ್ಲಿ ಮುಂಗಾರು ಮಳೆ ಅಭಾವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ. ಜುಲೈ 15ರಂದು ಸಮಿತಿಯ ಸಭೆ ನಡೆಯಲಿದೆ. ಸಭೆಯಲ್ಲಿ ಬರಗಾಲ ಘೋಷಣೆ ಮಾಡಬೇಕೆ? ಅಥವಾ ಇಲ್ಲವೇ? ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು' ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಶನಿವಾರ ಕಲಬುರಗಿ ಡಿಸಿ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ & ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನಡೆಸಿದರು.

ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಅವರು, "ಪ್ರಸ್ತುತ ಮೋಡ ಬಿತ್ತನೆಯ ಚಿಂತನೆ ಸಹ ಸರ್ಕಾರದ ಮುಂದಿಲ್ಲ. ಮಳೆ 10 ದಿನ ತಡವಾಗಿದ್ದು, ಮುಂದಿನ ಮೂರ್ನಾಲ್ಕು ದಿನದಲ್ಲಿ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಕಾದು ನೋಡುತ್ತಿದ್ದೇವೆ" ಎಂದು ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆ; "ಪ್ರಸ್ತುತ ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಜಿಲ್ಲೆಗಳಿಗೆ ತಲಾ 1 ಕೋಟಿ ರೂ. ಅನುದಾನ ನೀಡಲಾಗಿದೆ. ಇದಲ್ಲದೆ ಹೆಚ್ಚುವರಿ ಅನುದಾನ ಬೇಕಿದಲ್ಲಿ ಸರ್ಕಾರ ನೀಡಲಿದೆ" ಎಂದು ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದರು.
ಕಂದಾಯ ಸಚಿವರ ಮಾಹಿತಿ; ಕೆಲವು ದಿನಗಳ ಹಿಂದೆ ಮಾತನಾಡಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ, "ರಾಜ್ಯದಲ್ಲಿ ಮಳೆಯ ಕೊರತೆ ಉಂಟಾಗಿ ಬರದ ಛಾಯೆ ಆವರಿಸುತ್ತಿದೆ. ಜುಲೈ ಮೊದಲ ವಾರ ರಾಜ್ಯದಲ್ಲಿ ಬರ ಘೋಷಣೆ ಮಾಡಬೇಕಾ? ಬೇಡವಾ? ಎಂದು ಘೋಷಣೆ ಮಾಡಲಾಗುತ್ತದೆ" ಎಂದು ಹೇಳಿದ್ದರು.
"ಜೂನ್ನಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಕೊರತೆ ಆಗಿತ್ತು. ಮುಂಗಾರು ತಡವಾಗಿ ಪ್ರವೇಶ ಮಾಡಿದ ಕಾರಣ ಜೂನ್ನಲ್ಲಿ ವಾಡಿಕೆಯಷ್ಟು ಸಹ ಮಳೆ ಸುರಿದಿರಲಿಲ್ಲ. ಜುಲೈ ಮೊದಲ ವಾರದಲ್ಲಿ ಮುಂಗಾರು ಪ್ರವೇಶವಾಗಿ ಮಳೆ ಆರಂಭವಾಗಿದೆ. ರಾಜ್ಯಾದ್ಯಂತ ಮಳೆ ಆವರಿಸಿಕೊಳ್ಳುವ ಸಾಧ್ಯತೆ ಇದೆ" ಎಂದು ತಿಳಿಸಿದ್ದರು.
ಜೂನ್ ತಿಂಗಳಿನಲ್ಲಿ ರಾಜ್ಯದಲ್ಲಿ ಶೇ 50ಕ್ಕೂ ಹೆಚ್ಚು ಮುಂಗಾರು ಮಳೆಯ ಕೊರತೆ ಉಂಟಾಗಿತ್ತು. ಆದರೆ ಜುಲೈ ತಿಂಗಳ ಆರಂಭದಲ್ಲೇ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಆದ್ದರಿಂದ ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗದ ಕೆಲವು ಜಿಲ್ಲೆಗಳನ್ನು ಮಾತ್ರ ಬರಪೀಡಿತ ಎಂದು ಘೋಷಣೆ ಮಾಡುವ ನಿರೀಕ್ಷೆ ಇದೆ.
ವಿಧಾನಸಭೆ ಕಲಾಪದಲ್ಲಿ ಮಾತನಾಡಿರುವ ಸಚಿವ ಕೃಷ್ಣ ಬೈರೇಗೌಡ, "ಮುಂದಿನ ದಿನಗಳಲ್ಲಿ ಮಳೆ ಕೊರತೆ ಮುಂದುವರೆದರೆ ಜುಲೈ 15ರ ಬಳಿಕ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಸಿ ಬರಪೀಡಿತ ಪ್ರದೇಶಗಳ ಘೋಷಣೆ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ" ಎಂದು ಹೇಳಿದ್ದರು.
"ಜೂನ್ ತಿಂಗಳಿನಲ್ಲಿ ಮಳೆಯ ಕೊರತೆ ಇತ್ತು. ಕಳೆದ 10 ದಿನಗಳಿಂದ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕದಲ್ಲಿ ಉತ್ತಮ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ" ಎಂದರು.
"ಪ್ರಾಕೃತಿಕ ವಿಕೋಪದ ಬಗ್ಗೆ ಚರ್ಚಿಸಲು ಸಭೆ ನಡೆಸಲಾಗಿದೆ. ಎಲ್ಲೆಲ್ಲಿ ಮಳೆ ಕೊರತೆ ಇದೆ ಎಂಬ ಮಾಹಿತಿಯನ್ನು ಪಡೆದುಕೊಂಡಿದ್ದೇವೆ. ಹೋಬಳಿ ಮಟ್ಟದಲ್ಲೂ ಮಳೆಯ ವ್ಯತ್ಯಾಸವಾಗುತ್ತಿದೆ. ಆದರೆ ಸರಾಸರಿ ಮಳೆಯ ಪ್ರಮಾಣ ಸುಧಾರಣೆಯಾಗುತ್ತಿದೆ" ಎಂದು ಸದನಕ್ಕೆ ವಿವರಣೆ ನೀಡಿದ್ದರು.












Click it and Unblock the Notifications