ಬರ ಅಧ್ಯಯನಕ್ಕೆ ಕೇಂದ್ರ ತಂಡ ಎಲ್ಲೆಲ್ಲಿ ತಿರುಗಲಿದೆ?
ಬೆಂಗಳೂರು, ಸೆಪ್ಟೆಂಬರ್, 09: ಮಳೆ ಕೊರತೆಯಿಂದ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಕೇಂದ್ರದ ತಂಡ ಅಧ್ಯಯನ ನಡೆಸುತ್ತಿವೆ. ಕೇಂದ್ರ ಕೃಷಿ ಖಾತೆ ಜಂಟಿ ಕಾರ್ಯದರ್ಶಿ ಆರ್.ಬಿ.ಸಿನ್ಹಾ ನೇತೃತ್ವದಲ್ಲಿ ನಾಲ್ಕು ತಂಡಗಳು ಪರಿಶೀಲನೆ ನಡೆಸುತ್ತಿವೆ.
ರಾಜ್ಯದಲ್ಲಿ ಮೂರು ದಿನ ಪ್ರವಾಸ ಮಾಡಲಿರುವ ತಂಡಗಳು ಕುಡಿಯುವ ನೀರು, ಅತಿವೃಷ್ಟಿ, ಅನಾವೃಷ್ಟಿ, ಬೆಳೆಹಾನಿ, ಜಾನುವಾರುಗಳಿಗೆ ಮೇವಿನ ಬರ ಸಮಸ್ಯೆಗಳ ಬಗ್ಗೆ ಮಾಹಿತಿ ಕಲೆ ಹಾಕಲಿವೆ. ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ಕಂದಾಯ ವಿಭಾಗಗಳಲ್ಲಿ ಪ್ರವಾಸ ನಡೆಸುತ್ತಿದ್ದು ಆಯಾ ಜಿಲ್ಲಾಧಿಕಾರಿ ಮತ್ತು ಹಿರಿಯ ಅಧಿಕಾರಿಗಳು ತಂಡಕ್ಕೆ ಮಾಹಿತಿ ನೀಡಲಿದ್ದಾರೆ.[ಬರ ಪರಿಹಾರ : ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು]
ಬರಪೀಡಿತ ಎಂದು ಗಣನೆಗೆ ತೆಗೆದುಕೊಂಡಿರುವ ರಾಜ್ಯದ 18 ಜಿಲ್ಲೆಗಳಲ್ಲಿ ಪ್ರವಾಸ ನಡೆಯಲಿದೆ. ಮಳೆ ಕೊರತೆಯಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು 11500 ಕೋಟಿ ರೂ. ನಷ್ಟ ಉಂಟಾಗಿದೆ. ತುರ್ತು ಪರಿಹಾರಕ್ಕೆ ತಕ್ಷಣ 3 ಸಾವಿರ ಕೋಟಿ ರೂ. ನೆರವು ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಕೆ ಮಾಡಿತ್ತು.[ಕೈ ಕೊಟ್ಟ ಮುಂಗಾರು: ಡ್ಯಾಂಗಳು ಖಾಲಿ ಖಾಲಿ]
ತಂಡ ವರದಿ ಸಲ್ಲಿಕೆ ಮಾಡಿದ ನಂತರ ಪರಿಹಾರ ಬಿಡುಗಡೆಯಾಗುವ ಸಾಧ್ಯತೆಯಿದೆ. ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ವ್ಯಾಪಕ ಮಳೆ ಸುರಿಯುತ್ತಿದೆ. ಆದರೆ ಮುಂಗಾರು ಬೆಳೆಗೆ ಇದರಿಂದ ಯಾವ ಪ್ರಯೋಜನವೂ ಆಗುತ್ತಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಮೇವಿನ ಅಭಾವವೂ ತಲೆದೊರಿದ್ದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಂದಾಗಿ ಪರಿಸ್ಥಿತಿ ನಿಭಾಯಿಸಬೇಕಿದೆ.