ವಾಮಮಾರ್ಗದಿಂದ ಅಧಿಕಾರಕ್ಕೆ ಬಂದ ಈ ಸರ್ಕಾರಕ್ಕೆ ಪ್ರಕೃತಿ ಸಹಕರಿಸುತ್ತಿಲ್ಲ
ಬೆಂಗಳೂರು, ಸೆ 1: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಹಾವಳಿಯ ವಿಚಾರದಲ್ಲಿ ರಾಜಕೀಯ ಮುಖಂಡರ ಆರೋಪ, ಪ್ರತ್ಯಾರೋಪ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ನೀಡಿದ್ದರು.
Recommended Video
ಡ್ರಗ್ಸ್ ದಂಧೆಯೇ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರ ಪತನಗೊಳ್ಳಲು ಕಾರಣವಾಯಿತು ಎನ್ನುವ ಹೇಳಿಕೆಯನ್ನು ನೀಡಿದ್ದರು. ಇದಕ್ಕೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಪ್ರವಾಸೋದ್ಯಮ ಸಿ.ಟಿ.ರವಿ ಆದಿಯಾಗಿ, ಎಚ್ಡಿಕೆ ವಿರುದ್ದ ತಿರುಗಿಬಿದ್ದಿದ್ದರು.
"ಡ್ರಗ್ಸ್ ಆರೋಪ ಮಾಡುತ್ತಿದ್ದಿರಲ್ಲ? ನೀವು ಆಗ ಮುಖ್ಯಮಂತ್ರಿ ಆಗಿದ್ದವರು. ನಿಮ್ಮ ಬಳಿ ಅಧಿಕಾರ ಇತ್ತು, ಗುಪ್ತಚರ ಇಲಾಖೆ ಇತ್ತು. ಹಾಗಾದರೆ ನೀವು ಅಷ್ಟು ದುರ್ಬಲ ಆಗಿದ್ದೀರಾ? ಅಥವಾ ನಿಮಗೆ ಡ್ರಗ್ ಮಾಫಿಯಾದವರ ಒತ್ತಡ ಇತ್ತಾ? ನೀವು ಸಿಎಂ ಆಗಿದ್ದವರು, ಹೀಗೆಲ್ಲಾ ಮಾತಾಡಿ ನಗೆಪಾಟಲಿಗೆ ಈಡಾಗಬೇಡಿ. ನಮಗೆ ಜೆಡಿಎಸ್ ಪಕ್ಷದ ಮೇಲೆ ಗೌರವ ಇದೆ. ಹೀಗೆಲ್ಲಾ ಮಾತಾಡಬೇಡಿ" ಎಂದು ಸಚಿವ ಸಿ.ಟಿ. ರವಿ ಆರೋಪ ಮಾಡಿದ್ದರು.
ಇದಕ್ಕೆ ಖಾರವಾಗಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ, "ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು. ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು. ವಾಮಮಾರ್ಗದಿಂದ ಅಧಿಕಾರಕ್ಕೆ ಬಂದ ಈ ಸರ್ಕಾರಕ್ಕೆ ಪ್ರಕೃತಿ ಸಹಕರಿಸುತ್ತಿಲ್ಲ" ಎಂದಿದ್ದಾರೆ.
|
ಕ್ರಿಕೆಟ್ ಬೆಟ್ಟಿಂಗ್, ಮಾದಕ ದ್ರವ್ಯ, ಮೀಟರ್ ಬಡ್ಡಿ
"ನಾನು ಮುಖ್ಯಮಂತ್ರಿ ಆಗಿದ್ದಾಗ ಕ್ರಿಕೆಟ್ ಬೆಟ್ಟಿಂಗ್, ಮಾದಕ ದ್ರವ್ಯ, ಮೀಟರ್ ಬಡ್ಡಿ ಹತ್ತಿಕ್ಕಲು ವಿಶೇಷ ತಂಡ ರಚಿಸಿದ್ದೆ. ಇದರಿಂದ ಕನಲಿ ಹೋಗಿದ್ದ ದಂಧೆಕೋರರು ಶ್ರೀಲಂಕಾ ಹಾಗೂ ಮುಂಬೈಗೆ ಹಾರಿ ಹೋಗಿದ್ದರು. ಆಮೇಲೆ ಶಾಸಕರನ್ನು ಮುಂಬೈಗೆ ಕರೆದೊಯ್ಯುವಾಗ ಶಾಸಕರ ಜೊತೆ ಕಂಪನಿ ಕೊಟ್ಟಿದ್ದರು." - ಕುಮಾರಸ್ವಾಮಿ ಟ್ವೀಟ್.

ಸಿ.ಟಿ. ರವಿ ಬೇರೆಯವರ ಬಗ್ಗೆ ಮಾತನಾಡಿದಂತೆ ನನ್ನ ಬಗ್ಗೆ ಮಾತನಾಡಬಾರದು
"ಸಿ.ಟಿ. ರವಿ ಬೇರೆಯವರ ಬಗ್ಗೆ ಮಾತನಾಡಿದಂತೆ ನನ್ನ ಬಗ್ಗೆ ಮಾತನಾಡಿದರೆ ನಾನು ಸುಮ್ಮನಿರಲ್ಲ. ಅಧಿಕಾರದಲ್ಲಿ ಇರುವ ಸಚಿವರು ಮಾತಿನಲ್ಲಿ ನಿಗಾ ಇಡುವುದು ಒಳಿತು. ಕ್ರಿಕೆಟ್ ಬೆಟ್ಟಿಂಗ್, ಮಾಫಿಯಾ ಬಳಸಿಕೊಂಡೇ ನಮ್ಮ ಸರಕಾರದಲ್ಲಿದ್ದ ಶಾಸಕರನ್ನು ಬಿಜೆಪಿಯವರು ಬುಕ್ ಮಾಡಿಕೊಂಡಿದ್ದರು ಎಂಬುದು ಗುಟ್ಟಾಗಿ ಉಳಿದಿಲ್ಲ. ಕೆಲ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಎರಡು ಗಂಟೆಗೊಂದು ವಿಶೇಷ ವಿಮಾನದ ಮೂಲಕ ಕರೆದುಕೊಂಡು ಹೋದಾಗ ಯಾರು ಜೊತೆಯಲ್ಲಿ ಇದ್ದರು ಎಂಬುದು ಇಡೀ ನಾಡಿಗೆ ಗೊತ್ತಿದೆ" -ಎಚ್ಡಿಕೆ.

ರೈತರ ಸಾಲ ಮನ್ನಾ ಮಾಡಿದ ಮುಖ್ಯಮಂತ್ರಿ ನಾನು
"ಶಾಸಕರನ್ನು ಖರೀದಿ ಮಾಡಿ, ಕ್ರಿಕೆಟ್ ಬೆಟ್ಟಿಂಗ್, ಡ್ರಗ್ ಮಾಫಿಯಾದ ಪಾಪದ ಹಣವನ್ನು ಚೆಲ್ಲಿ ಸರ್ಕಾರ ಉಳಿಸಿಕೊಳ್ಳುವ ವ್ಯಕ್ತಿ ನಾನಲ್ಲ. ಅಂತಹ ಕುಕೃತ್ಯಕ್ಕೆ ಇಳಿಯುವ ಜಾಯಮಾನ ನನ್ನದಾಗಿದ್ದರೆ ನನ್ನ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿರಲಿಲ್ಲ. ಖಜಾನೆಗೆ 25ಸಾವಿರ ಕೋಟಿ ಹಣವನ್ನು ಸಂಗ್ರಹಿಸಿ ರೈತರ ಸಾಲ ಮನ್ನಾ ಮಾಡಿದ ಮುಖ್ಯಮಂತ್ರಿ ನಾನು. ಹೀಗಾಗಿ ಲೂಟಿ ಮಾಡಿದವರು ಅಧಿಕಾರದ ಅಮಲಿನಲ್ಲಿ ತೇಲಾಡುವಾಗ ಬಾಯಿಗೆ ಬಂದಂತೆ ಮಾತನಾಡುತ್ತಿರುವುದನ್ನು ಕೇಳಿಸಿಕೊಳ್ಳಬೇಕಾಗಿಲ್ಲ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ವಾಮ ಮಾರ್ಗದ ಮೂಲಕ ಅಧಿಕಾರಕ್ಕೆ ಬಂದ ಈ ಸರ್ಕಾರ
"ವಾಮ ಮಾರ್ಗದ ಮೂಲಕ ಅಧಿಕಾರಕ್ಕೆ ಬಂದ ಈ ಸರ್ಕಾರಕ್ಕೆ ಪ್ರಕೃತಿಯು ಸಹಕರಿಸುತ್ತಿಲ್ಲ. ಜನರ ದುಃಖ ದುಮ್ಮಾನಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ. ಅದು ಬಿಟ್ಟು ಬಾಯಿ ಚಪಲಕ್ಕೆ ಮಾತನಾಡುವ ಅಧಿಕಾರದ ಅಮಲು ಬಹಳ ಕಾಲ ಉಳಿಯುವುದಿಲ್ಲ. ಗಿಳಿಯೋದಿ ಫಲವೇನು , ಬೆಕ್ಕು ಬಹುದ ಹೇಳಲರಿಯದು. ಜಗವೆಲ್ಲವ ಕಾಬ ಕಣ್ಣು ತನ್ನ ಕೊಂಬ ಕೊಲ್ಲೆಯ ಕಾಣಲರಿಯದು. ಇದಿರ ಗುಣವ ಬಲ್ಲವೆಂಬರು, ತಮ್ಮ ಗುಣವನರಿಯರು, ಕೂಡಲಸಂಗಮದೇವಾ." ಇದು ಕುಮಾರಸ್ವಾಮಿ ಪ್ರತಿಕ್ರಿಯಿಸಿದ ರೀತಿ.












Click it and Unblock the Notifications