ದುಬಾರಿ ಆನೆ ದುರಂತದಲ್ಲಿ ಮಹಿಳೆ ಸಾವು: 20 ಲಕ್ಷ ರೂ ಪರಿಹಾರ ಘೋಷಣೆ, ಪ್ರವಾಸಿಗರ ರಕ್ಷಣೆಗೆ ಸರ್ಕಾರ ಹೊಸ ಗೈಡ್ಲೈನ್ಸ್
ಮಡಿಕೇರಿ: ಕೊಡಗಿನ ದುಬಾರೆ ಆನೆ ಕ್ಯಾಂಪ್ನಲ್ಲಿ ನಡೆದ ಭೀಕರ ದುರಂತವೊಂದರಲ್ಲಿ ಪ್ರವಾಸಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಈ ಆಘಾತಕಾರಿ ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆಯು ಪ್ರವಾಸಿಗರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಕ್ಯಾಂಪ್ನಲ್ಲಿ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ.
ದುರಂತದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ರಾಜ್ಯ ಸರ್ಕಾರವು 20 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಣೆ ಮಾಡಿದೆ. ಘಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದುಬಾರೆ ಆನೆ ಕ್ಯಾಂಪ್ ಅನ್ನು ಮುಂದಿನ ಎರಡು ದಿನಗಳ ಕಾಲ ಸಂಪೂರ್ಣವಾಗಿ ಬಂದ್ ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಯಾವುದೇ ಪ್ರವಾಸಿಗರಿಗೆ ಕ್ಯಾಂಪ್ ಪ್ರವೇಶಿಸಲು ಅವಕಾಶವಿರುವುದಿಲ್ಲ.

ಅರಣ್ಯ ಇಲಾಖೆಯಿಂದ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿ ಪ್ರಕಟ
ಭವಿಷ್ಯದಲ್ಲಿ ಇಂತಹ ಅನಾಹುತಗಳು ಮರುಕಳಿಸದಂತೆ ತಡೆಯಲು ಅರಣ್ಯ ಇಲಾಖೆ ಕಠಿಣ ಹೆಜ್ಜೆ ಇಟ್ಟಿದೆ. ದುಬಾರೆ ಕ್ಯಾಂಪ್ಗೆ ಭೇಟಿ ನೀಡುವ ಪ್ರವಾಸಿಗರಿಗಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಪ್ರವಾಸಿಗರಿಗೆ ಆನೆಗಳಿಗೆ ಸ್ನಾನ ಮಾಡಿಸಲು ಅವಕಾಶ ನೀಡಲಾಗುತ್ತಿತ್ತು. ಆದರೆ ಹೊಸ ನಿಯಮದ ಪ್ರಕಾರ, ಇನ್ನು ಮುಂದೆ ಯಾವುದೇ ಪ್ರವಾಸಿಗರು ಆನೆಗಳ ಬಳಿ ತೆರಳಿ ಸ್ನಾನ ಮಾಡಿಸುವಂತಿಲ್ಲ.
ಅಷ್ಟೇ ಅಲ್ಲದೆ, ಪ್ರವಾಸಿಗರು ಆನೆಗಳಿಗೆ ತಮ್ಮ ಕೈಯಾರೆ ಯಾವುದೇ ರೀತಿಯ ಆಹಾರ ಅಥವಾ ಊಟವನ್ನು ನೀಡುವಂತಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ. ಪ್ರವಾಸಿಗರ ಭದ್ರತೆಯ ದೃಷ್ಟಿಯಿಂದ, ಪ್ರತಿಯೊಬ್ಬರೂ ಆನೆಗಳಿಂದ ಕನಿಷ್ಠ 100 ಮೀಟರ್ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.
ಕೊಡುಗು ಜಿಲ್ಲೆಯ ಪ್ರಮುಖ ಆಕರ್ಷಣೆಯಾಗಿರುವ ದುಬಾರೆಗೆ ನಿತ್ಯ ಸಾವಿರಾರು ಮಂದಿ ಬರುತ್ತಾರೆ. ಹೀಗಾಗಿ ಈ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಭದ್ರತೆಗಾಗಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲು ನಿರ್ಧರಿಸಲಾಗಿದೆ.
ಮೃತಳ ಕಣ್ಣುದಾನ
ಒಂದೆಡೆ ದುರಂತದಲ್ಲಿ ತಮ್ಮ ಮನೆಯ ಮಗಳನ್ನು ಕಳೆದುಕೊಂಡ ಕುಟುಂಬವು ತೀವ್ರ ಶೋಕದಲ್ಲಿದ್ದರೂ, ಮತ್ತೊಂದೆಡೆ ಅತ್ಯಂತ ಮಾದರಿ ಹಾಗೂ ಮಾನವೀಯ ಕಾರ್ಯವೊಂದನ್ನು ಮಾಡಿದೆ. ಮೃತ ಮಹಿಳೆಯ ಕಣ್ಣುಗಳನ್ನು ದಾನ ಮಾಡುವ ಮೂಲಕ ಆಕೆ ಸಾವಿನಲ್ಲೂ ಸಾರ್ಥಕತೆ ಮೆರೆಯುವಂತೆ ಮಾಡಿದ್ದಾರೆ. ದುಃಖದ ನಡುವೆಯೂ ಕುಟುಂಬಸ್ಥರು ತೆಗೆದುಕೊಂಡ ಈ ನಿರ್ಧಾರವು ಸಾರ್ವಜನಿಕರ ತೀವ್ರ ಪ್ರಶಂಸೆಗೆ ಪಾತ್ರವಾಗಿದೆ.












Click it and Unblock the Notifications