CM Siddaramaiah: ಮಳೆಯ ಕೊರತೆಯಿಂದ 1 ಕೋಟಿ ಎಕರೆ ಭೂಮಿಯಲ್ಲಿನ ಬೆಳೆ ಹಾನಿ: ಸಿದ್ದರಾಮಯ್ಯ ಕೊಟ್ಟ ಮಾಹಿತಿ ಇಲ್ಲಿದೆ
ಬೆಂಗಳೂರು, ಸೆಪ್ಟೆಂಬರ್ 30: ರಾಜ್ಯದಲ್ಲಿ ಈ ಬಾರೀ ವಾಡಿಕೆಯಂತೆ ಮಳೆಯಾಗಿಲ್ಲ. ಅಲ್ಲದೇ ಅರಣ್ಯ ಪ್ರದೇಶ ಕ್ಷೀಣಿಸಿದರೆ ಮಳೆ ಪ್ರಮಾಣವೂ ಕ್ಷೀಣಿಸುತ್ತದೆ. ಈ ಬಾರಿ ಮಳೆಯ ಕೊರತೆಯಿಂದ 1 ಕೋಟಿ ಎಕರೆ ಭೂಮಿಯಲ್ಲಿನ ಬೆಳೆ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹೌದು, ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಅರಣ್ಯ ಇಲಾಖೆಯಲ್ಲಿ ಶೌರ್ಯ ಮತ್ತು ಧೈರ್ಯದಿಂದ ಸೇವೆ ಸಲ್ಲಿಸಿ, ಅರಣ್ಯ, ವನ್ಯಜೀವಿ ಸಂರಕ್ಷಣೆ ಮಾಡಿದ 50 ಅಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪದಕ ಪ್ರದಾನ ಮಾಡಿ ಮಾತನಾಡಿದ ಅವರು, ಭೌಗೋಳಿಕ ಪ್ರದೇಶದ ಶೇ.33ರಷ್ಟು ಹಸಿರು ಹೊದಿಕೆ ಇದ್ದರೆ ಮಳೆ, ಬೆಳೆ ಚೆನ್ನಾಗಿ ಆಗುತ್ತದೆ. ಹೀಗಾಗಿ ಅರಣ್ಯ ಸಂರಕ್ಷಣೆ ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.

ಮಳೆ ಕಡಿಮೆಯಾದರೆ, ಬೆಳೆ ಉತ್ಪಾದನೆ ಕಡಿಮೆಯಾಗುತ್ತದೆ, ಆಗ ರಾಜ್ಯದ ಆದಾಯ ಕ್ಷೀಣಿಸುತ್ತದೆ. ಇದರಿಂದ ತಲಾದಾಯವೂ ಕುಗ್ಗುತ್ತದೆ. ಹೀಗಾಗಿ ಅರಣ್ಯ ಸಂರಕ್ಷಣೆ ಎಲ್ಲರ ಹೊಣೆ. ಇತ್ತೀಚಿನ ದಿನಗಳಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ನಾವು ರಾಜ್ಯ ಆನೆಗಳ ಸಂಖ್ಯೆಯಲ್ಲಿ ನಂ.1 ಇದ್ದೇವೆ, ಹುಲಿಗಳ ಸಂಖ್ಯೆಯಲ್ಲಿ ನಂ.2 ಇದ್ದೇವೆ. ಇದು ಹೆಮ್ಮೆಯ ವಿಚಾರ. ಅದಕ್ಕೆ ತಕ್ಕಂತೆ ಅರಣ್ಯವೂ ಹೆಚ್ಚಬೇಕು. ವನ್ಯಜೀವಿ - ಮಾನವ ಸಂಘರ್ಷ ನಿಯಂತ್ರಿಸಬೇಕು. ವನ್ಯಜೀವಿಗಳಿಗೆ ಅರಣ್ಯದಲ್ಲಿ ಸಾಕಷ್ಟು ಮೇವು, ಆಹಾರ ಮತ್ತು ನೀರು ಲಭ್ಯವಾದರೆ ಅವು ಕಾಡಿನಿಂದ ನಾಡಿಗೆ ಬರುವುದು ತಪ್ಪುತ್ತದೆ. ಹೀಗಾಗಿ ಅರಣ್ಯಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ತಿಳಿಸಿದರು.
ಅರಣ್ಯ, ವನ್ಯಜೀವಿ ಸಂರಕ್ಷಣೆಯಲ್ಲಿ ರಾಜ್ಯ ಮುಂಚೂಣಿ: ಈಶ್ವರ ಖಂಡ್ರೆ
ವನ್ಯಜೀವಿ ಮತ್ತು ಅರಣ್ಯ ಸಂರಕ್ಷಣೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ, ಇದಕ್ಕೆ ಆನೆ ಮತ್ತು ಹುಲಿ ಸಂಖ್ಯೆಯಲ್ಲಿ ರಾಜ್ಯ ಅಗ್ರ ಎರಡು ಸ್ಥಾನದಲ್ಲಿರುವುದು ಸಾಕ್ಷಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ರಾಜ್ಯ ಸಮೃದ್ಧ ಅರಣ್ಯ ಹಾಗೂ ವನ್ಯಜೀವಿ ಸಂಪತ್ತನ್ನು ಹೊಂದಿದ್ದು ಸಸ್ಯಶ್ಯಾಮಲೆಯಾಗಿದೆ. ನಮ್ಮ ರಾಜ್ಯದಲ್ಲಿ 6 ಸಾವಿರದ 395 ಆನೆಗಳಿವೆ ಅದೇ ರೀತಿ ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ ರಾಜ್ಯದಲ್ಲಿ ಸುಮಾರು 560 ಹುಲಿಗಳಿವೆ. ಅಳಿವಿನಂಚಿನಲ್ಲಿರುವ ಹುಲಿಗಳನ್ನು ಸಂರಕ್ಷಿಸಲು ಅಂದಿನ ಪ್ರಧಾನಿ ಇಂದಿರಾಗಾಂಧೀ ಅವರು 1973ರಲ್ಲಿ ಆರಂಭಿಸಿದ ಹುಲಿ ಯೋಜನೆಗೆ 50 ವರ್ಷ ತುಂಬಿರುವುದೂ ಮತ್ತೊಂದು ಸಂತೋಷದಾಯಕ ವಿಚಾರವಾಗಿದೆ. 1980ರಲ್ಲಿ ದೇಶದಲ್ಲಿ ಕೇವಲ 1,827ರಷ್ಟಿದ್ದ ಹುಲಿಗಳ ಸಂಖ್ಯೆ ಈಗ 3ಸಾವಿರ ದಾಟಿದೆ. ಅರಣ್ಯ, ವನ್ಯಜೀವಿಗಳ ಸಂರಕ್ಷಣೆಯಲ್ಲಿ ಇಂದಿರಾಜೀ ಅವರು ತಂದ ಕಾಯಿದೆ ಪರಿಣಾಮಕಾರಿಯಾಗಿ ಎಂದು ಹೇಳಿದರು.
ರಾಜ್ಯದಲ್ಲಿ ಕೂಡ ಹುಲಿಗಳ ರಕ್ಷಣೆಗೆ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಹಿಂದೆ ಹುಲಿಗಳ ಚರ್ಮಕ್ಕಾಗಿ, ಉಗುರಿಗಾಗಿ ಹುಲಿಗಳ ಕಳ್ಳಬೇಟೆ ನಡೆಯುತ್ತಿತ್ತು. ಇದನ್ನು ಮನಗಂಡು ಅರಣ್ಯ ಇಲಾಖೆ ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ 200ಕ್ಕೂ ಹೆಚ್ಚು ಕಳ್ಳಬೇಟೆ ತಡೆ ಶಿಬಿರ ಅಂದರೆ ಆಂಟಿ ಪೋಚಿಂಗ್ ಕ್ಯಾಂಪ್ ತೆರೆದಿದೆ. ಇದರಿಂದ ಕಳ್ಳಬೇಟೆ ನಿಂತಿದ್ದು, ಹುಲಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ಈವರೆಗೆ 57 ಅರಣ್ಯ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಅವರೆಲ್ಲರಿಗೂ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಇಂದು ಪದಕ ಪಡೆದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಕರ್ನಾಟಕ ಪಶ್ಚಿಮಘಟ್ಟಗಳಂತೂ ಸಾವಿರಾರು ಬಗೆಯ ಪಕ್ಷಿ ಪ್ರಭೇದ, ಜೀವಿ ಪ್ರಭೇದಗಳ ತಾಣವಾಗಿದ್ದು, ಹಲವು ನದಿಗಳ ಉಗಮಸ್ಥಾನವೂ ಆಗಿದೆ. ರಾಜ್ಯದಲ್ಲಿ ಸುಮಾರು 43 ಸಾವಿರ ಚದರ ಕಿಲೋ ಮೀಟರ್ ಅರಣ್ಯ ಪ್ರದೇಶ ಇದೆ. ಅಂದರೆ ರಾಜ್ಯದ ಒಟ್ಟು ಭೌಗೋಳಿಕ ಪ್ರದೇಶದ ಶೇ.21ರಷ್ಟು ಮಾತ್ರ ಅರಣ್ಯವಿದೆ. ಇದರಲ್ಲಿ ಸಾಕಷ್ಟು ಪ್ರಮಾಣದ ಅರಣ್ಯ ಒತ್ತುವರಿ ಆಗಿದೆ. ಅರಣ್ಯ ಕ್ಷೀಣಿಸಿದಂತೆ ವನ್ಯಮೃಗಗಳು ಕಾಡಿನಿಂದ ನಾಡಿಗೆ ಬರುವುದೂ ಹೆಚ್ಚಾಗುತ್ತದೆ.
ಈ ನಿಟ್ಟಿನಲ್ಲಿ ಅರಣ್ಯ ಪ್ರದೇಶ ಹೆಚ್ಚಿಸುವುದು ಮತ್ತು ಅರಣ್ಯ ಒತ್ತುವರಿ ತೆರವು ಮಾಡುವುದು ಅರಣ್ಯ ಇಲಾಖೆಯ ಸಿಬ್ಬಂದಿಯ ಆದ್ಯತೆ ಆಗಬೇಕು. ಮೂರು ತಲೆಮಾರಿನಿಂದ 1978ಕ್ಕೆ ಮುನ್ನ ಅರಣ್ಯದಲ್ಲಿರುವ ಮತ್ತು ಗಡುವಿನೊಳಗೆ ಅರ್ಜಿ ಸಲ್ಲಿಸಿರುವ ಬಡವರಿಗೆ ಹಕ್ಕುಪತ್ರಗಳನ್ನು 3 ತಿಂಗಳೊಳಗೆ ಕೊಡಿಸಲು ಶ್ರಮಿಸಬೇಕು. ಅದೇ ರೀತಿ ಹೆಚ್ಚು ಅರಣ್ಯ ಭೂಮಿ ಕಬಳಿಸಿರುವವರ ವಿರುದ್ಧ ಕ್ರಮ ಕೈಗೊಂಡು ಒತ್ತುವರಿ ತೆರವು ಮಾಡಿಸಬೇಕು ಎಂದು ಸೂಚಿಸಿದರು.












Click it and Unblock the Notifications