ಗಣಪತಿ ಪ್ರಕರಣ, ಸಿಬಿಐ ತನಿಖೆಗಾಗಿ ಮುಂದುವರೆದ ಬಿಜೆಪಿ ಹೋರಾಟ
ಬೆಂಗಳೂರು, ಜುಲೈ 19 : ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದರೂ ಬಿಜೆಪಿ ಹೋರಾಟವನ್ನು ಮುಂದುವರೆಸಲಿದೆ. 'ಗಣಪತಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ತನಕ ಪಕ್ಷ ತನ್ನ ಹೋರಾಟ ಮುಂದುವರೆಸಲಿದೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸಭೆ ಮತ್ತು ವಿಧಾನಪರಿಷತ್ ವಿರೋಧ ಪಕ್ಷದ ನಾಯಕರು, ಶಾಸಕರ ಜೊತೆ ಯಡಿಯೂರಪ್ಪ ಅವರು ಸೋಮವಾರ ಸಂಜೆ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದರು. ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಮನವಿ ಸಲ್ಲಿಸಿದರು. [ಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣದ Timeline]

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ ಅವರು, 'ಸಚಿವ ಸ್ಥಾನಕ್ಕೆ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿರುವುದನ್ನು ಸ್ವಾಗತಿಸುತ್ತೇವೆ. ಆದರೆ, ಸರ್ಕಾರ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ತನಕ ಬಿಜೆಪಿ ರಾಜ್ಯವ್ಯಾಪಿ ಹೋರಾಟ ನಡೆಸಲಿದೆ' ಎಂದು ಹೇಳಿದರು.[ಕೆ.ಜೆ.ಜಾರ್ಜ್ ಕಾಡಿದ 5 ಪ್ರಮುಖ ವಿವಾದಗಳು]

'ಸಿಬಿಐ ತನಿಖೆ, ಮೂವರ ವಿರುದ್ಧ ಎಫ್ಐಆರ್ ದಾಖಲು ಮಾಡಲು ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರೆಯಲಿದೆ. ರಾಜ್ಯದ ಬಿಜೆಪಿ ಸಂಸದರು ಸಂಸತ್ ಭವನದ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಲಿದ್ದೇವೆ. ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಂಸತ್ನಲ್ಲಿಯೂ ವಿಷಯ ಪ್ರಸ್ತಾಪಿಸುತ್ತೇವೆ' ಎಂದು ಯಡಿಯೂರಪ್ಪ ತಿಳಿಸಿದರು. ['ನಾನು ಅಧಿಕಾರಕ್ಕೆ ಅಂಟಿಕೊಂಡಿಲ್ಲ' : ಕೆಜೆ ಜಾರ್ಜ್]

ಜನ ಸಂಘರ್ಷ ಅಭಿಯಾನ : ಗಣಪತಿ ಆತ್ಮಹತ್ಯೆ ಪ್ರಕರಣದ ಸಿಬಿಐ ತನಿಖೆಗೆ ಒತ್ತಾಯಿಸಿ ಬಿಜೆಪಿ ಜನ ಸಂಘರ್ಷ ಅಭಿಯಾನ ನಡೆಸಲಿದೆ. ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಜುಲೈ 22ರಂದು ಮಡಿಕೇರಿಯಲ್ಲಿ ಆರಂಭವಾಗುವ ಅಭಿಯಾನ ಆಗಸ್ಟ್ 8ರ ತನಕ ನಡೆಯಲಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಸಮಾವೇಶ ನಡೆಸಿ, ಅಭಿಯಾನ ಸಮಾರೋಪಗೊಳಿಸಲು ತೀರ್ಮಾನಿಸಲಾಗಿದೆ.












Click it and Unblock the Notifications